ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.ರಾಜ್ಯ ಸರ್ಕಾರವು ಪ್ರತಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಘೋಷಿಸಿದೆ. ಅದರಂತೆ ಉಡುಪಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜಿಗೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ 30 ಎಕ್ರೆ ಜಮೀನು ಮೀಸಲಿರಿಸಲಾಗಿದೆ. ಆದ್ದರಿಂದ ತಕ್ಷಣ ವೈದ್ಯಕೀಯ ಕಾಲೇಜು ಆರಂಭಿಸಬೇಕು. ಇದರಿಂದ ಕರಾವಳಿಯ 3 ಜಿಲ್ಲೆಗಳ ಜೊತೆಗೆ ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳಿಗೂ ಲಾಭವಾಗುತ್ತದೆ ಎಂದು ಶಾಸಕರು ವೈದ್ಯಕೀಯ ಶಿಕ್ಷಣ ಸಚಿವರ ಗಮನ ಸೆಳೆದರು.

ಉಡುಪಿ ಜಿಲ್ಲೆಯಲ್ಲಿರುವ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಇದೆ, ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಿದರೇ ಇಲ್ಲಿ ಕಲಿತ ವೈದ್ಯರು ಇಲ್ಲಿಯೇ ಜಿಲ್ಲೆಯ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದವರು ಮನವರಿಕೆ ಮಾಡಿದರು.ಉತ್ತರಿಸಿದ ಸಚಿವ ಶರಣ ಪ್ರಕಾಶ್ ಪಾಟೀಲ್, ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗಿದ್ದು, ಕಳೆದ ವರ್ಷ 3 ಮತ್ತು ಈ ವರ್ಷ 2 ಕಾಲೇಜುಗಳಿಗೆ ಅನುಮತಿ ನೀಡಲಾಗಿದೆ. ಉಡುಪಿಯೂ ಸೇರಿದಂತೆ 6 ಜಿಲ್ಲೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ. ಆದ್ಯತೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ ಸ್ಥಾಪನೆ ಮಾಡವಾಗುತ್ತದೆ ಎಂದು ಭರವಸೆ ನೀಡಿದರು.