ಕನ್ನಡಪ್ರಭ ವಾರ್ತೆ ಹುಕ್ಕೇರಿ
ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಸರ್ಕಾರ ಸೈಟ್ ನೀಡಲು ಉದ್ದೇಶಿಸಿದ್ದು, ಅಗತ್ಯ ಜಾಗೆ ಗುರುತಿಸಿ ಮೂಲಸೌಲಭ್ಯಗಳನ್ನು ಒದಗಿಸಬೇಕು. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಸಿ ಕಲಿಕಾ ವಾತಾವರಣ ನಿರ್ಮಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚಿಸಿದರು.ತಾಲೂಕಿನ ವಿವಿಧ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿದ ಪ್ರಗತಿ ಹಂತದ ಕಾಮಗಾರಿಗಳನ್ನು ಪರಿಶೀಲಿಸಿದರು. ಅಲದಾಳ ಗ್ರಾಮಕ್ಕೆ ಭೇಟಿ ನೀಡಿದ ಸಿಇಒ ಶಿಂಧೆ, ನಿವೇಶನ ರಹಿತರಿಗೆ ಹಕ್ಕು ಪತ್ರ ನೀಡಲು ಉದ್ದೇಶಿಸಿರುವ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ನಾಗನೂರ ಕೆ.ಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದರು. ನಂತರ ದಡ್ಡಿ ಸರ್ಕಾರಿ ಆಸ್ಪತ್ರೆ ಭೇಟಿ ನೀಡಿ ರೋಗಿಗಳಿಗೆ ಸೂಕ್ತ ಔಷಧೋಪಚಾರ ನೀಡುವಂತೆ ಸೂಚಿಸಿದರು.
ಬಡಕುಂದ್ರಿ ಗ್ರಾಮ ಪಂಚಾಯತ ವ್ಯಾಪ್ತಿಯ ಹುಕ್ಕೇರಿ-ಹತ್ತರಗಿ ಮುಖ್ಯ ರಸ್ತೆ ಡಾಂಬರೀಕರಣ ವೀಕ್ಷಿಸಿ ಮಾತನಾಡಿ, ಗ್ರಾಮಗಳ ಅಭಿವೃದ್ಧಿಗೆ ತಾಪಂ ಮತ್ತು ಜಿಪಂ ಅನುದಾನ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರದ ಎಲ್ಲ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಇದರೊಂದಿಗೆ ಯಾವುದೇ ಅನುದಾನ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು. ಈ ಕರ್ತವ್ಯದಲ್ಲಿ ಉದಾಸೀನತೆ ತೋರಿದವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.ಜಿಪಂ ಆಡಳಿತ ವಿಭಾಗದ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಪಂಚಾಯತ್ರಾಜ್ ಇಂಜನೀಯರಿಂಗ್ ಚಿಕ್ಕೋಡಿ ವಿಭಾಗದ ಕಾರ್ಯಕಾರಿ ಅಭಿಯಂತರ ಪ್ರವೀಣ ಮಠಪತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗದ ಕಾರ್ಯಕಾರಿ ಅಭಿಯಂತರ ಪಾಂಡುರಂಗರಾವ್, ತಾಪಂ ಇಒ ಟಿ.ಆರ್.ಮಲ್ಲಾಡದ, ಬಿಇಒ ಪ್ರಭಾವತಿ ಪಾಟೀಲ, ಸಿಡಿಪಿಒ ಎಚ್.ಹೊಳೆಪ್ಪ, ಎಇಇಗಳಾದ ಶಶಿಕಾಂತ ವಂದಾಳೆ, ಅರವಿಂದ ಅಣ್ಣಿಗೇರಿ, ಎಂ.ಆರ್.ಕಳ್ಳಿಮನಿ, ಸಹಾಯಕ ನಿರ್ದೇಶಕರಾದ ಗುರುಶಾಂತ ಪಾವಟೆ, ಹಿಂದುಳಿದ ಕೆ.ಬಿ.ದೇವಪ್ಪಗೋಳ, ಮಹೇಶ ಭಜಂತ್ರಿ, ತಾಪಂ ಮ್ಯಾನೇಜರ ಅವಿನಾಶ ಹೊಳೆಪ್ಪಗೋಳ, ಅಭಿಯಂತರ ಶಶಿಧರ ಭೂಸಗೋಳ, ಶುಭಂ ಕೋಳಿ, ಪಿಡಿಒಗಳಾದ ಶಂಕರ ಕಾಂಬಳೆ, ಮಲ್ಲಿಕಾರ್ಜುನ ಗುಡಸಿ, ಮಾರುತಿ ಕಾಂಬಳೆ, ಸಂತೋಷ ಕಬ್ಬಗೋಳ, ರಾಜು ಪತ್ತಾರ, ಬಸಪ್ಪ ದಳವಾಯಿ ಮತ್ತಿತರರು ಉಪಸ್ಥಿತರಿದ್ದರು. --- ಬಾಕ್ಸ್ ---ಧೈರ್ಯದಿಂದ ಪರೀಕ್ಷೆ ಎದುರಿಸಿ: ಶಿಂಧೆಹುಕ್ಕೇರಿ: ವಿದ್ಯಾರ್ಥಿಗಳು ಮೊಬೈಲ್ ಬಳಕೆ ಸಂಪೂರ್ಣ ಸ್ಥಗಿತಗೊಳಿಸಬೇಕು. ಅಭ್ಯಾಸದ ಕಡೆ ಗಮನಹರಿಸಿದಾಗ ಮಾತ್ರ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಅಂಕ ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಪರೀಕ್ಷೆಗೆ ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸಿಇಒ ರಾಹುಲ್ ಶಿಂಧೆ ಕಿವಿಮಾತು ಹೇಳಿದರು.ತಾಲೂಕಿನ ನಾಗನೂರ.ಕೆ.ಡಿ ಗ್ರಾಮದ ಸರಕಾರಿ ಪ್ರೌಢ ಶಾಲೆಗೆ ಗುರುವಾರ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ವಿಭಿನ್ನ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಿ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಫಲಿತಾಂಶಕ್ಕೆ ಅಗತ್ಯ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.ಜೀವನದಲ್ಲಿ ಈಗಿನಿಂದಲೇ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು. ಎಲ್ಲ ವಿಷಯ ಶಿಕ್ಷಕರು ಶಾಲಾ ಹಂತದಲ್ಲಿ ಮಕ್ಕಳ ಕಲಿಕಾ ಕೊರತೆ ಗುರುತಿಸಿ, ಪ್ರಗತಿಗೆ ಪ್ರತಿದಿನ ಚಟುವಟಿಕೆ ರೂಪಿಸಿ, ಕಲಿಕಾ ಪ್ರಗತಿಯಾಗುವಂತೆ ಶ್ರಮ ವಹಿಸಬೇಕು. ಅನುತ್ತೀರ್ಣರಾದ ಮಕ್ಕಳು ಧೃತಿಗೆಡದೆ ಮೇ ತಿಂಗಳಲ್ಲಿ ನಡೆಯುವ ಪೂರಕ ಪರೀಕ್ಷೆ ಬರೆದು ಪಾಸಾಗಲು ಅವಕಾಶಗಳಿವೆ ಎಂದು ಅವರು ಹೇಳಿದರು.