ಕನ್ನಡಪ್ರಭ ವಾರ್ತೆ, ತುಮಕೂರುತರಾತುರಿಯಲ್ಲಿ ಆರ್ಸಿಬಿ ವಿಜಯೋತ್ಸವ ಆಚರಿಸಲು ಹೋಗಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಅಮಾಯಕ ಅಭಿಮಾನಿಗಳ ಸಾವಿಗೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಶಾಸಕ ಬಿ.ಸುರೇಶ್ಗೌಡ , ಎಲ್ಲಾ ವಿಚಾರದಲ್ಲೂ ಅನಗತ್ಯ ಪ್ರವೇಶ ಮಾಡಿ ಮಾತನಾಡುವ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ ಅವರು ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ದುರ್ಘಟನೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಈ ದುರಂತಕ್ಕೆ ತಮ್ಮ ಸರ್ಕಾರವೇ ಹೊಣೆಎಂದು ಅವರಿಗೂ ಗೊತ್ತಿದೆ ಹಾಗಾಗಿ ಬಾಯಿಬಿಡುತ್ತಿಲ್ಲ ಎಂದರು.ಯಾವುದೇ ಪೂರ್ವ ಸಿದ್ಧತೆ ಮಾಡಿಕೊಳ್ಳದೆ ಸರ್ಕಾರ ಆರ್ಸಿಬಿ ವಿಜಯೋತ್ಸವ ಆಯೋಜಿಸಿದ್ದು ಕಾಲ್ತುಳಿತದಲ್ಲಿ 11 ಮಂದಿ ಬಲಿಯಾದರು. ಹೊಣೆಯಿಂದ ತಪ್ಪಿಸಿಕೊಳ್ಳಲು ಪ್ರಮಾಣಿಕ ಪೊಲೀಸ್ ಅಧಿಕಾರಿ ದಯಾನಂದ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ. ಮೃತರ ಕುಟುಂಬಕ್ಕೆ ಮೊದಲು 10 ಲಕ್ಷ ಘೋಷಿಸಿ ನಂತರ 25 ಲಕ್ಷ ರು..ಪರಿಹಾರ ಘೋಷಿಸಿದರು. ಆರ್ಸಿಬಿ ಗೆಲುವನ್ನು ರಾಜಕೀಯ ಲಾಭವಾಗಿ ಬಳಸಿಕೊಳ್ಳಲು ಹೋಗಿ ಅಮಾಯಕರನ್ನು ಬಲಿಕೊಟ್ಟ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಸುರೇಶ್ಗೌಡ ಒತ್ತಾಯಿಸಿದರು.ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮವನ್ನು ವಿಧಾನಸೌಧದ ಎದುರು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೀಗೆ ಎರಡು ಮೂರುಕಡೆ ಮಾಡಿದರೆ ಆಗಮಿಸಿದ್ದ ಲಕ್ಷಾಂತರ ಅಭಿಮಾನಿಗಳನ್ನು ಪೊಲೀಸರು ಹೇಗೆ ನಿಯಂತ್ರಿಸಿಯಾರು? ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯೇ ಈ ಕಾರ್ಯಕ್ರಮ ಆಯೋಜನೆ ಮಾಡಿ ಆಗಿರುವ ದುರಂತಕ್ಕೆ ಅವರೇ ನೇರ ಹೊಣೆಎಂದರು.ಕಾಲ್ತುಳಿತ ದುರಂತಕ್ಕೆತಮ್ಮತಪ್ಪು ನಿರ್ಧಾರ ಕಾರಣವಾಗಿರುವಾಗ ಅದರ ನೈತಿಕ ಹೊಣೆ ಹೊರಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಅದನ್ನು ಪೊಲೀಸ್ ಅಧಿಕಾರಿಗಳ ತಲೆಕಟ್ಟಿ ಅವರನ್ನು ಅಮಾನತು ಮಾಡಿರುವುದು ಖಂಡನೀಯ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಕೂಡಲೇ ರಾಜೀನಾಮೆ ಕೊಡಬೇಕುಎಂದು ಆಗ್ರಹಿಸಿದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ರೈತ ಮೋರ್ಚಾರಾಜ್ಯಉಪಾಧ್ಯಕ್ಷ ಬ್ಯಾಟರಂಗೇಗೌಡ, ನಗರಅಧ್ಯಕ್ಷಧನುಷ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ಗೌಡ, ಯುವ ಮೋರ್ಚಾಜಿಲ್ಲಾಧ್ಯಕ್ಷ ನವಚೇತನ್, ಒಬಿಸಿ ಮೋರ್ಚಾಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ಮುಖಂಡರಾದ ಟಿ.ಹೆಚ್.ಹನುಮಂತರಾಜು, ಹೆಚ್.ಎಂ.ರವೀಶಯ್ಯ, ಮಲ್ಲಿಕಾರ್ಜುನ್, ಪುಟ್ಟರಾಜು, ನಂಜುಂಡಪ್ಪ ಮೊದಲಾದವರು ಭಾಗವಹಿಸಿದ್ದರು.
11 ಜನರ ಸಾವಿಗೆ ಸರ್ಕಾರವೇ ಹೊಣೆ
ತರಾತುರಿಯಲ್ಲಿ ಆರ್ಸಿಬಿ ವಿಜಯೋತ್ಸವ ಆಚರಿಸಲು ಹೋಗಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಅಮಾಯಕ ಅಭಿಮಾನಿಗಳ ಸಾವಿಗೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.