ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಒತ್ತು: ಮಧು ಬಂಗಾರಪ್ಪ

| Published : Jun 11 2025, 12:24 PM IST

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಒತ್ತು: ಮಧು ಬಂಗಾರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಕಟ್ಟಕಡೆಯ ಮಗುವಿಗೂ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಎಲ್ಲ ರೀತಿಯ ಸಹಾಯ ನೀಡುತ್ತಿದೆ. ಪಾಲಕರು ಸದುಪಯೋಗ ಪಡಿಸಿಕೊಂಡು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕೆಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಅಮೀನಗಡ

ಕಟ್ಟಕಡೆಯ ಮಗುವಿಗೂ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಎಲ್ಲ ರೀತಿಯ ಸಹಾಯ ನೀಡುತ್ತಿದೆ. ಪಾಲಕರು ಸದುಪಯೋಗ ಪಡಿಸಿಕೊಂಡು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕೆಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಮೀಪದ ಸೂಳೇಬಾವಿ ಗ್ರಾಮದಲ್ಲಿ ಮಂಗಳವಾರ ಶ್ರೀ ರಾಮಯ್ಯಸ್ವಾಮಿ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಡಿಯಲ್ಲಿ ಜರುಗಿದ ನೂತನ ಶಾಲಾ ಕೊಠಡಿಗಳ ಲೋಕಾರ್ಪಣೆ, ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ, ಸಭಾಭವನ ಉದ್ಘಾಟನೆ, ಸ್ಮರಣ ಸಂಚಿಕೆ ಬಿಡುಗಡೆ, ದಾನಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಿಸಲು 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಒಂದು ವರ್ಷ ಅವರಿಗೆ ನಷ್ಟವುಂಟಾಗಿ ಭವಿಷ್ಯ ಹಾಳಾಗುತ್ತದೆ ಎಂಬ ದೃಷ್ಟಿಯಿಂದ ಪರೀಕ್ಷಾ ಶುಲ್ಕ ರದ್ದು ಮಾಡಿ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಉತ್ತೀರ್ಣರಾಗಲು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.

ಶಾಲೆಗಳಲ್ಲಿ ಮಕ್ಕಳಲ್ಲಿ ದೇಶಭಕ್ತಿ ಮೂಡಿಸುವ ಉದ್ದೇಶದಿಂದ ಪ್ರತಿದಿನ ಮಕ್ಕಳಿಂದ ಸಂವಿಧಾನ ಪೀಠಿಕೆ ಓದಿಸುವ ಪರಿಪಾಠ ಮಾಡಲಾಗಿದೆ. ಅದನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು ಎಂದ ಅವರು, ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವ ಮೂಲಕ ಶ್ರೀ ರಾಮಯ್ಯಸ್ವಾಮಿ ವಿದ್ಯಾಸಂಸ್ಥೆ ಉತ್ತಮ ಕಾರ್ಯಮಾಡುತ್ತಿರುವುದು ಶ್ಲಾಘನೀಯ ಎಂದು ಬಣ್ಣಿಸಿದರು, ಶಿಕ್ಷಕರೇ ನಕಲು ಮಾಡಿಸಬೇಡಿ:

ಪಾಲಕರು ಮಕ್ಕಳನ್ನು ಶಾಲೆಗೆ ಸೇರಿಸಿದರೆ ಅವರ ಜವಾಬ್ದಾರಿ ಮುಗಿಯಲ್ಲ. ಅವರು ಪ್ರತಿನಿತ್ಯ ಶಾಲೆಗೆ ಬರುವಂತೆ ನೋಡಿಕೊಳ್ಳಬೇಕು, ಶಿಕ್ಷಕರು ಮಕ್ಕಳು ಹೇಗಾದರೂ ಪಾಸಾದರೆ ಸಾಕು ಎಂದು ನಕಲು ಮಾಡಿಸಿ ಪಾಸ್ ಮಾಡಿಸಬೇಡಿ, ಮಕ್ಕಳಿಗೆ ನಕಲು ಮಾಡಿಸುವ ಮೂಲಕ ನೀವೇ ಕಳ್ಳದಾರಿ ತೋರಿಸಿದಂತಾಗುತ್ತದೆ. ಅವರೇ ಸ್ವಂತಃ ಕಲಿತು ಉತ್ತೀರ್ಣರಾಗಲು ಸಹಕರಿಸಿ ಎಂದು ಸಚಿವ ಮಧು ಬಂಗಾರಪ್ಪ ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹುನಗುಂದ ಶಾಸಕ ಡಾ.ವಿಜಯಾನಂದ ಕಾಶಪ್ಪನವರ್, ಸಿದ್ದರಾಮಯ್ಯನವರು ಶಿಕ್ಷಣಕ್ಕೆ ಒತ್ತು ನೀಡಿದ್ದಾರೆ. ಸಿಎಂ ಹಾಗೂ ಸಚಿವ ಮಧು ಬಂಗಾರಪ್ಪನವರ ಸಹಕಾರದಿಂದ ನನ್ನ ಕ್ಷೇತ್ರದ ನೂರು ಶಾಲೆಗಳನ್ನು ಸ್ಮಾರ್ಟ್‌ಕ್ಲಾಸ್ ಮಾಡಲಾಗಿದೆ ಎಂದು ಹೇಳಿದರು.

ಸಂಸ್ಥೆಯ ಅಧ್ಯಕ್ಷ ರವೀಂದ್ರ ಕಲಬುರ್ಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಂಪಿ ಹೇಮಕೂಟದ ದಯಾನಂದಪುರಿ ಶ್ರೀ, ಗುಳೇದಗುಡ್ಡದ ಬಸವರಾಜ ಪಟ್ಟದಾರ್ಯಶ್ರೀ ಸಾನ್ನಿಧ್ಯ ವಹಿಸಿದ್ದರು. ವೇದಿಕೆಯಲ್ಲಿ ಬಾಗಲಕೋಟೆ ಶಾಸಕ ಎಚ್.ವೈ. ಮೇಟಿ, ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಗ್ರಾಪಂ ಅಧ್ಯಕ್ಷ ಪಿಡ್ಡಪ್ಪ ಕುರಿ ಮುಂತಾದವರು ಇದ್ದರು.

ಇದೇ ಸಂಧರ್ಭದಲ್ಲಿ ಸಂವಿಧಾನ ಪೀಠಿಕೆ ಓದಿದ ಪುಟ್ಟ ವಿಧ್ಯಾರ್ಥಿ ಸೋಮನಾಥ ಸುಂಕಲಾಪುರ ಅವರಿಗೆ ಸಚಿವ ಮಧು ಬಂಗಾರಪ್ಪ ಶಾಲು ಹೊದಿಸಿ ಸನ್ಮಾನಿಸಿದರು.ಜ್ಞಾನದೀಪ್ತಿ ಸ್ಮರಣ ಸಂಚಿಕೆ ಬಿಡುಗಡೆ, ವಿವಿಧ ದಾನಿಗಳಿಗೆ ಸನ್ಮಾನ ಜರುಗಿತು. ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ್ ಸ್ವಾಗತಿಸಿದರು. ಶಿಕ್ಷಕರು,ಗ್ರಾಮದ ಗುರುಹಿರಿಯರು ಪಾಲ್ಗೂಂಡಿದ್ದರು.