ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಸಾಧನೆ ಅನನ್ಯ: ಶಂಕರ್ ಐತಾಳ್

| Published : Jun 13 2025, 02:51 AM IST

ಸಾರಾಂಶ

ಹಂಗಾರಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಬುಕ್ಸ್, ಬ್ಯಾಗ್, ಸಮವಸ್ತ್ರ, ಎಲ್‌ಕೆಜಿ ಮತ್ತು ಯುಕೆಜಿ ಪಠ್ಯಪುಸ್ತಕ, ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಾಧನೆ ಅನನ್ಯವಾದದ್ದು ಎಂದು ಗೀತಾ ಫೌಂಡೇಶನ್ ಪ್ರವರ್ತಕ ಶಂಕರ್ ಐತಾಳ್ ಹೇಳಿದರು.

ಅವರು ಬುಧವಾರ ಇಲ್ಲಿನ ಹಂಗಾರಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಬುಕ್ಸ್, ಬ್ಯಾಗ್, ಸಮವಸ್ತ್ರ, ಎಲ್‌ಕೆಜಿ ಮತ್ತು ಯುಕೆಜಿ ಪಠ್ಯಪುಸ್ತಕ, ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪ್ರಸ್ತುತ ವರ್ಷಗಳಲ್ಲಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಟಾಪರ್ಸ್‌ ಆಗಿ ಹೊರ ಹೊಮ್ಮುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಈ ದಿಸೆಯಲ್ಲಿ ಸರ್ಕಾರಿ ಶಾಲೆಗಳ ಉಳಿವಿಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರಲ್ಲದೆ ಖಾಸಗಿ ಶಾಲೆಗಳ ಶೈಕ್ಷಣಿಕ ವ್ಯಾಮೋಹದಿಂದ ಹೊರಬರಬೇಕು ಎಂದು ಫೋಷಕರಿಗೆ ಕರೆ ನೀಡಿದರು.ಕಾರ್ಯಕ್ರಮದಲ್ಲಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರವನ್ನು ಹಸ್ತಾಂತರಿಸಿದರು. ಇದೇ ವೇಳೆ ತಮ್ಮದೇ ಶಾಲೆಯಲ್ಲಿ ಕಲಿತು ಎಸ್ಎಸ್ಎಲ್ಸಿಯಲ್ಲಿ ೬ನೇ ರ್‍ಯಾಂಕ್ ಪಡೆದ ವೈಷ್ಣವಿ ಅಲ್ಸೆ ಅವರನ್ನು ಸನ್ಮಾನಿಸಲಾಯಿತು.ಹಂಗಾರಕಟ್ಟೆ ಕ್ಲಸ್ಟರ್ ಹೆಡ್ ಮಾಲಿನಿ ಶಾಲೆಗೆ ವಿವಿಧ ಪರಿಕರವನ್ನು ಕೊಡುಗೆಯಾಗಿ ನೀಡಿದರು. ಐರೋಡಿ ಗ್ರಾಪಂ ಉಪಾಧ್ಯಕ್ಷೆ ಗೀತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಪಂಚಾಯಿತಿ ಸದಸ್ಯ ಶೇಖರ್ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರೇಖಾ ಉಡುಪ, ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್, ಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ಸೇಸು ಟೀಚರ್, ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ., ಚೇತನಾ ಪ್ರೌಢಶಾಲಾ ಮುಖ್ಯಶಿಕ್ಷಕಿ ಕಲ್ಪನಾ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಪ್ರಸಿಲ್ಲಾ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕಿ ವೀಣಾ ಶೆಟ್ಟಿ ಶೈಕ್ಷಣಿಕ ಪರಿಕರದ ಪತ್ರ ವಾಚಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ಉಷಾರಾಣಿ ನಿರೂಪಿಸಿದರು.