ಸಾರಾಂಶ
ಪಟ್ಟಣದ ಕ್ರೀಡಾಂಗಣದಲ್ಲಿ 60 ಲಕ್ಷ ರು. ವೆಚ್ಚದಲ್ಲಿ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದ್ದು, ಕ್ರೀಡಾಂಗಣದ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ದೇಶದಲ್ಲಿನ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿ, ದೇಶಕ್ಕೆ ಕೀರ್ತಿ ತರಬೇಕಾದಲ್ಲಿ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಸೇರಿ ಕ್ರೀಡಾ ಸೌಲಭ್ಯ ಒದಗಿಸಬೇಕೆಂದು ಶಾಸಕ ಸಿ.ಎನ್.ಬಾಲಕೃಷ್ಣ ಆಗ್ರಹಿಸಿದರು.ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಸಬಾ ಹೋಬಳಿ ಮಟ್ಟದ 2025-26ನೇ ಸಾಲಿನ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣದ ಕ್ರೀಡಾಂಗಣದಲ್ಲಿ 60 ಲಕ್ಷ ರು. ವೆಚ್ಚದಲ್ಲಿ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದ್ದು, ಕ್ರೀಡಾಂಗಣದ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದ್ದು, ರಾಜ್ಯದ ಪಡಿಸಿರುವ ಕ್ರೀಡಾಂಗಣಗಳ ಅಭಿವೃದ್ಧಿಗೆ ನಿಗದಿಪಡಿಸಿರುವ 14 ಕೋಟಿ ರು. ಗಳಲ್ಲಿ ಕ್ರೀಡಾಂಗಣಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗುವುದಿಲ್ಲ. ಕ್ರೀಡಾಂಗಣ ಅಭಿವೃದ್ಧಿಗೆ ಕನಿಷ್ಟ 100 ಕೋಟಿ ರು. ಮೀಸಲಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.ಮಕ್ಕಳು ಶಿಕ್ಷಣದ ಜೊತೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಬೇಕು. ಕ್ರೀಡೆಯಲ್ಲಿ ತೊಡಗಿಸಿ ಕೊಂಡರೆ ಶಾರೀರಿಕ ಹಾಗೂ ಮಾನಸಿಕ ವಿಕಸನ ಸಾಧ್ಯ. ಕೇವಲ ಪಠ್ಯ ಪುಸ್ತಕಗಳ ಅಧ್ಯಯನಕ್ಕೆ ಮಾತ್ರ ಸೀಮಿತರಾಗಬಾರದು. ಶಾಲಾ ಹಂತದಲ್ಲೇ ಕ್ರೀಡಾ ಮನೋಭಾವ ಬೆಳೆಸಿಕೊಂಡು ಹೋಬಳಿ ಮಟ್ಟದಿಂದ ಜಿಲ್ಲಾ, ರಾಜ್ಯ, ರಾಷ್ಟಮಟ್ಟದವರೆಗೂ ಕ್ರೀಡೆಯಲ್ಲಿ ಸಾಧನೆ ಮಾಡಬಹುದು. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಕ್ಷೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳ ಬೇಕು. ಮಕ್ಕಳ ಕ್ರೀಡಾ ಪ್ರತಿಭೆ ಗುರುತಿಸಲು ಹಾಗೂ ಸವಾಂಗೀಣ ಅಭಿವೃದ್ಧಿಗೆ ಕ್ರೀಡಾ ಕೂಟ ಸಹಕಾರಿ ಎಂದರು.ಕ್ರೀಡಾಕೂಟದಲ್ಲಿ ಪುರಸಭಾ ಉಪಾಧ್ಯಕ್ಷೆ ಕವಿತಾರಾಜು ಧ್ವಜಾರೋಹಣ ನೆರವೇರಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎ.ಗಣೇಶ್ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಪುರಸಭಾ ಮಾಜಿ ಅಧ್ಯಕ್ಷೆ ಬನಶಂಕರಿ ರಘು, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ದೀಪ, ಕ್ಷೇತ್ರ ಸಮನ್ವಯಾ ಧಿಕಾರಿ ಕೆ.ಎನ್.ಅನಿಲ್, ಅಕ್ಷರ ದಾಸೋಹ ಅಧಿಕಾರಿ ಉಮಾಶಂಕರ್, ತಾಲೂಕು ದೈಹಿಕ ಶಿಕ್ಷಣ ಪರೀಕ್ಷಕ ಕೆ.ಟಿ.ಆನಂದ್, ಪಿಎಂಶ್ರೀ ಶಾಲೆಯ ಮುಖ್ಯ ಶಿಕ್ಷಕ ಪ್ರಕಾಶ್, ಪುರಸಭಾ ಮುಖ್ಯಾಧಿಕಾರಿ ಆರ್.ಯತೀಶ್ಕುಮಾರ್, ರಾಜ್ಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಮಂಜುನಾಥ್, ಶಿಕ್ಷಣ ಇಲಾಖೆಯ ವಿ.ಜಿ. ದ್ಯಾವೇಗೌಡ, ಶಿವಾನಂದ್, ಜಿ.ಎನ್.ರವಿ, ಚಿಕ್ಕೇಗೌಡ, ಗಾಯತ್ರಮ್ಮ, ಕಾಳೇಗೌಡ, ಶ್ರೀನಿವಾಸ್, ನಾಗೇಂದ್ರ ಕುಮಾರ್, ನಾಗರಾಜು, ಲೋಕೇಶ್, ಜಯಪ್ರಕಾಶ್, ಯಾದವ ರಾಜ್, ರಂಗಸ್ವಾಮಿ ಕಸಬಾ ಹೋಬಳಿಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.