ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ರಾಜ್ಯದ ಅಭಿವೃದ್ಧಿ ಸಂಪೂರ್ಣ ಮರೀಚಿಕೆಯಾಗಿದೆ, ಸರ್ಕಾರಿ ಖಜಾನೆ ಸಂಪೂರ್ಣ ಬರಿದಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ರಾಜ್ಯದ ಅಭಿವೃದ್ಧಿ ಸಂಪೂರ್ಣ ಮರೀಚಿಕೆಯಾಗಿದೆ, ಸರ್ಕಾರಿ ಖಜಾನೆ ಸಂಪೂರ್ಣ ಬರಿದಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನರ ಕಾಳಜಿ ಇಲ್ಲ. ಕೇವಲ ಕುರ್ಚಿ ಕಾದಾಟದಲ್ಲಿಯೇ ಕಾಲಹರಣ ಮಾಡುತ್ತಿದೆ, 40 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ ಎಂಬ ಸುಳ್ಳು ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಅಧಿವೇಶನದಲ್ಲಿ ಸರ್ಕಾರ 8 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿದೆ ಎಂದು ಲಿಖಿತ ಹೇಳಿಕೆ ನೀಡಿದೆ. ಈ ರೀತಿ ಸುಳ್ಳು ಹೇಳಿ ಮುಖ್ಯಮಂತ್ರಿಗಳು ವಿದ್ಯಾರ್ಥಿ-ಯುವಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅತ್ತ ಆರೋಗ್ಯ ವ್ಯವಸ್ಥೆ ಅನಾರೋಗ್ಯಕ್ಕೀಡಾಗಿದೆ. ಜೀವನಾವಶ್ಯಕ ಔಷಧಿಗಳು ನಿಯಮಿತವಾಗಿ ಪೂರೈಕೆಯಾಗುತ್ತಿಲ್ಲ ಎಂದರು. ಶಿರಹಟ್ಟಿ ಶಾಸಕರ ಮೇಲಿನ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ, ಭ್ರಷ್ಟಾಚಾರ ಯಾರೂ ಮಾಡಿದರೂ ತಪ್ಪು, ಭ್ರಷ್ಟಾಚಾರವನ್ನು ನಾವು ಸಮರ್ಥಿಸಿಕೊಳ್ಳುವುದಿಲ್ಲ. ಆದರೆ, ವಾಲ್ಮೀಕಿ ಹಗರಣದ ದುರಪಯೋಗ ಆಗಿರುವ ಬಗ್ಗೆ ಸ್ವತ: ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಈ ಲಂಚಕ್ಕೆ ತಂದೆ-ತಾಯಿಯೇ ಕಾಂಗ್ರೆಸ್ ಎಂದು ದೂರಿದರು.ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸುರೇಶ ಬಿರಾದಾರ ಮಾತನಾಡಿ, ಶೂನ್ಯವೇ ಈ ಕಾಂಗ್ರೆಸ್ ಸರ್ಕಾರದ ಸಾಧನೆ, ಸರ್ಕಾರಿ ಹುದ್ದೆ ಭರ್ತಿಗಾಗಿ ವಿದ್ಯಾರ್ಥಿ-ಯುವಜನ ಸಮೂಹದಿಂದ ದೊಡ್ಡ ಪ್ರತಿಭಟನೆ ನಡೆಯುತ್ತಲೇ ಇದೆ. ಆಗ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ 6 ತಿಂಗಳು ಉರುಳಿದರೂ ಯಾವ ನೇಮಕಾತಿ ಪ್ರಕ್ರಿಯೆ ಆರಂಭವಾಗಿಲ್ಲ. ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಹೋಗಿ ಕಮೀಷನ್ ಧಂಧೆ ಅವ್ಯಾಹತವಾಗಿದೆ ಎಂದು ಆರೋಪಿಸಿದರು.ಗೋಷ್ಠಿಯಲ್ಲಿ ಬಿಜೆಪಿ ಮುಖಂಡ ರವಿ ಬಿರಾದಾರ, ಮಾಧ್ಯಮ ಪ್ರಮುಖ ವಿಜಯ ಜೋಶಿ ಇದ್ದರು.ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮುಂದೂಡುತ್ತಿದೆ. ಈ ರಾಜ್ಯ ಸರ್ಕಾರದ ವೈಫಲ್ಯ ಪಟ್ಟಿ ಮಾಡುತ್ತ ಹೋದರೇ ಅದಕ್ಕೆ ಅಂತ್ಯವೇ ಇಲ್ಲ.
-ಗುರುಲಿಂಗಪ್ಪ ಅಂಗಡಿ, ಬಿಜೆಪಿ ಜಿಲ್ಲಾಧ್ಯಕ್ಷರು.