ಸಾರಾಂಶ
ಕೋವಿಡ್ಗೆ ಸಂಬಂಧಿಸಿದಂತೆ ಕೆಲ ನಿಯಮಗಳನ್ನು ಜಾರಿ ಮಾಡಲಾಗಿದ್ದು, ಹೆಚ್ಚಾದರೆ ಮುಂದೆ ಕ್ರಮ ವಹಿಸಲಾಗುತ್ತದೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಾಗದಂತೆ ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ
ಕನ್ನಡಪ್ರಭವಾರ್ತೆ ಕೊಪ್ಪಳ
ರಾಜ್ಯದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಹಾಕಬೇಕು ಎಂದು ಸರ್ಕಾರದಿಂದ ಸೂಚನೆ ನೀಡಲಾಗಿದ್ದು, ಕೋವಿಡ್ ನಿಯಂತ್ರಣಕ್ಕೆ ಎಲ್ಲರೂ ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ತಾಲೂಕಿನ ಶ್ರೀಹುಲಿಗೆಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ಗೆ ಸಂಬಂಧಿಸಿದಂತೆ ಕೆಲ ನಿಯಮಗಳನ್ನು ಜಾರಿ ಮಾಡಲಾಗಿದ್ದು, ಹೆಚ್ಚಾದರೆ ಮುಂದೆ ಕ್ರಮ ವಹಿಸಲಾಗುತ್ತದೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಾಗದಂತೆ ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.
ಶಕ್ತಿ ಯೋಜನೆ ಸಮರ್ಪಕ ಜಾರಿಗೆ 5500 ಬಸ್ ಹಾಗೂ 9000 ಸಿಬ್ಬಂದಿಯನ್ನು ಶೀಘ್ರ ನೇಮಕಾತಿ ಮಾಡಲಾಗುವುದು. ಅಟೋ ಹಳೆ ಪರ್ಮಿಟ್ಗಳಲ್ಲಿ ಭ್ರಷ್ಟಾಚಾರ ನಡೆದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.ಅಂಜನಾದ್ರಿ ಅಭಿವೃದ್ಧಿಗೆ 121 ಕೋಟಿ ನೀಡಲಾಗುವುದು, ಈಗ 21 ಕೋಟಿ ನೀಡಲಾಗಿದೆ. ಹಿಂದಿನ ಸರ್ಕಾರ ಒಳ್ಳೆಯ ಉದ್ದೇಶಕ್ಕಾಗಿ ಹಣ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ಭರವಸೆ ವ್ಯಕ್ತಪಡಿಸಿದರು.
ಚಾಮುಂಡಿ, ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡಲಾಗುವುದು. ಹುಲಿಗೆಮ್ಮ ಹಾಗು ಅಂಜನಾದ್ರಿ, ನಂಜುಂಡೇಶ್ವರ, ಮೈಲಾರಲಿಂಗೇಶ್ವರ ಮೂಲಭೂತ ಸೌಲಭ್ಯಕ್ಕಾಗಿ ಒತ್ತು ನೀಡಲಾಗುವುದು. ಅಂಜನಾದ್ರಿ ಹಾಗೂ ಹುಲಿಗೆಮ್ಮ ಪ್ರಾಧಿಕಾರದ ಬಗ್ಗೆಯೂ ಚಿಂತಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ಶಾಸಕ ಜನಾರ್ದನ ರಡ್ಡಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ, ಆಯುಕ್ತ ಬಸವರಾಜೇಂದ್ರನ್ ಇದ್ದರು.