ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕಿನಲ್ಲಿ ಹಿಂದೂ ಸಮಾಜವನ್ನು ಸಂಘಟಿಸಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಜಾಗೃತಿಯನ್ನು ಹೆಚ್ಚಿಸುವ ಉದ್ದೇಶದಿಂದ ಮಾ. 9ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಭವ್ಯ ಹಿಂದೂ ಮಹಾಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹಿಂದೂ ಮಹಾಸಂಗಮ ಆಯೋಜನಾ ಸಮಿತಿಯ ಕಾರ್ಯದರ್ಶಿ ಅರುಣ್ ಕುಮಾರ್‌ ತಿಳಿಸಿದರು.ನಗರದ ಪ್ರವಾಸಿಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ಕಾಲದಲ್ಲಿ ಸಮಾಜದಲ್ಲಿ ಏಕತೆ ಮತ್ತು ಸಾಂಸ್ಕೃತಿಕ ಮೌಲ್ಯಗಳ ಬಲಪಡಿಸುವ ಅಗತ್ಯ ಹೆಚ್ಚಾಗಿರುವುದರಿಂದ ಹಿಂದೂ ಸಮಾಜವನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದಿಂದ ಈ ಮಹಾಸಂಗಮವನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು. ಹಿಂದೂ ಸಮಾಜವು ತನ್ನ ಪರಂಪರೆ, ಸಂಸ್ಕೃತಿ ಮತ್ತು ಧಾರ್ಮಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪಸರಿಸಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಮಾಜದ ಎಲ್ಲ ವರ್ಗದವರು ಒಂದಾಗಿ ಕಾರ್ಯನಿರ್ವಹಿಸುವುದು ಕಾಲದ ಅವಶ್ಯಕತೆ ಎಂದು ಅವರು ಅಭಿಪ್ರಾಯಪಟ್ಟರು.

ಹಾಸನ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಮುಂಭಾಗದಿಂದ ಭವ್ಯ ಶೋಭಾಯಾತ್ರೆ ಪ್ರಾರಂಭವಾಗಲಿದ್ದು, ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ, ಶ್ರೀ ಚಲ್ಲಾಪುರ ಮಲ್ಲಿಕಾರ್ಜುನಸ್ವಾಮಿ ಹಾಗೂ ಗ್ರಾಮದೇವತೆಗಳಾದ ಶ್ರೀ ಕರಿಯಮ್ಮದೇವಿ ಮತ್ತು ಶ್ರೀ ಮಲ್ಲಿಗೆಮ್ಮದೇವಿ, ಭಾರತ ಮಾತೆಯ ಭವ್ಯ ಭಾವಚಿತ್ರ, ವಿವಿಧ ಸಾಂಸ್ಕೃತಿಕ ತಂಡಗಳು, ದೇಶಭಕ್ತರ ಸ್ಥಬ್ಧಚಿತ್ರಗಳು ಹಾಗೂ ಪರಂಪರೆಯ ಕಲಾತಂಡಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದೆ. ನಂತರ ಬಿ ಎಚ್. ರಸ್ತೆಯಲ್ಲಿರುವ ಶ್ರೀ ಬಸವರಾಜೇಂದ್ರ ಪ್ರೌಢಶಾಲಾ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಾಮಾಜಿಕ ಚಿಂತಕರು ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕರಾದ ಚಕ್ರವರ್ತಿ ಸೂಲಿಬೆಲೆ ಮುಖ್ಯ ಭಾಷಣ ಮಾಡಲಿದ್ದಾರೆ.ತಾಲೂಕಿನ ಎಲ್ಲಾ ಹಿಂದೂ ಬಾಂಧವರು ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಕಾರ್ಯಕ್ರಮದ ನಂತರ ಭಕ್ತರಿಗೆ ಪ್ರಸಾದ ವಿತರಣೆ ವ್ಯವಸ್ಥೆಯೂ ಮಾಡಲಾಗಿದೆ ಎಂದು ಹೇಳಿದರು. ವಿಶೇಷವಾಗಿ, ಅರಸೀಕೆರೆ ನಗರ ಹಾಗೂ ತಾಲೂಕಿನ ಉದ್ಯಮಿಗಳು, ವ್ಯಾಪಾರಸ್ಥರು ಮತ್ತು ಹೋಟೆಲ್ ಮಾಲೀಕರು ತಮ್ಮ ವ್ಯಾಪಾರಗಳನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಿ ಈ ಮಹಾಸಂಗಮದಲ್ಲಿ ಭಾಗವಹಿಸಿ ಹಿಂದೂ ಸಮಾಜದ ಏಕತೆಯನ್ನು ಪ್ರದರ್ಶಿಸಬೇಕೆಂದು ಆಯೋಜನಾ ಸಮಿತಿ ಮನವಿ ಮಾಡಿದೆ.ಸುದ್ದಿಗೋಷ್ಠಿಯಲ್ಲಿ ಹಿಂದೂ ಮಹಾಸಂಗಮ ಆಯೋಜನಾ ಸಮಿತಿಯ ಉಪಾಧ್ಯಕ್ಷ ರವಿಕುಮಾರ್, ಶಿವಾನಂದೇಗೌಡ, ಶೇಖರ್‌ ನಾಯಕ್, ನಾಗಪ್ಪ ನವಲಗುಂದ್, ಸುನಂದಾ ನಾಗರಾಜ್ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.