ಕನ್ನಡಪ್ರಭ ವಾರ್ತೆ ಹಾಸನ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಹಾಗೂ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ ತಿಳಿಸಿದ್ದಾರೆ.ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಪ್ರಗತಿ ಸಾಧಿಸಲಾಗುವುದು ಎಂದರು. ಜಿಲ್ಲಾಡಳಿತ ಹಾಗೂ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಸಮನ್ವಯತೆ ಸಾಧಿಸಿ, ಎಲ್ಲರ ಸಹಕಾರದಿಂದ ಒಳ್ಳೆಯ ಕೆಲಸ ಮಾಡುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಈಗಾಗಲೇ ಸರ್ಕಾರದಿಂದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಹಾಗೂ ಉಪವಿಭಾಗಾಧಿ ಕಾರಿಗಳಿಗೆ ಮಾರ್ಗದರ್ಶನ ಬಂದಿದೆ. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಲು ಸೂಚನೆ ನೀಡಲಾಗಿದೆ ಅದರಂತೆ ಎಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್ ಇದ್ದು, ಅದರ ಮೂಲಕ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲೂ ಟಾಸ್ಕ್‌ಫೋರ್ಸ್ ರಚಿಸಿ, ಚರ್ಚಿಸಿ ಸರ್ಕಾರದ ಮಾರ್ಗದರ್ಶನ, ನಿಯಮಾವಳಿ ಪ್ರಕಾರ ಖಾಸಗಿ ಬೋರ್‌ವೆಲ್‌ಗಳು ಅಥವಾ ಟ್ಯಾಂಕರ್‍ಸ್ ಮೂಲಕ ನೀರು ಪೂರೈಸಲಾಗುವುದು ಎಂದು ತಿಳಿಸಿದರು. ಜಿಲ್ಲೆಯ ಯಾವುದೇ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಗಮನ ಹರಿಸಲಾಗುವುದು ಎಂದು ಅವರು ತಿಳಿಸಿದರು.