ಕನ್ನಡಪ್ರಭ ವಾರ್ತೆ ಬಾಗಲಕೋಟೆ ತಾಲೂಕಿನ ಮುಡಪಲಜೀವಿ ಗ್ರಾಮದಲ್ಲಿ ₹ 65 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಯುಷ್ಮಾನ ಆರೋಗ್ಯ ಮಂದಿರ ಕಟ್ಟಡ ಹಾಗೂ ಬಾಗಲಕೋಟೆ ನಗರದಲ್ಲಿ ₹ 1 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಮರು ಡಾಂಬರೀಕರಣ ಕಾಮಗಾರಿಗಳಿಗೆ ಶಾಸಕ ಉಮೇಶ ಮೇಟಿ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ತಾಲೂಕಿನ ಮುಡಪಲಜೀವಿ ಗ್ರಾಮದಲ್ಲಿ ₹ 65 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಯುಷ್ಮಾನ ಆರೋಗ್ಯ ಮಂದಿರ ಕಟ್ಟಡ ಹಾಗೂ ಬಾಗಲಕೋಟೆ ನಗರದಲ್ಲಿ ₹ 1 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಮರು ಡಾಂಬರೀಕರಣ ಕಾಮಗಾರಿಗಳಿಗೆ ಶಾಸಕ ಉಮೇಶ ಮೇಟಿ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಮುಡಪಲಜೀವಿ ಗ್ರಾಮದಲ್ಲಿ 15ನೇ ಹಣಕಾಸು ಯೋಜನೆಯ ಅನುದಾನದಡಿ ಆಯುಷ್ಮಾನ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳು ಸ್ಥಳೀಯವಾಗಿಯೇ ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಲಾಗುತ್ತಿದೆ ಎಂದರು. ಅದೇ ರೀತಿ ಮುಖ್ಯಂತ್ರಿಗಳ ಮೂಲಸೌಕರ್ಯ ಅಭಿವೃದ್ದಿ ಯೋಜನೆಯಡಿ ಬಾಗಲಕೋಟೆ ನಗರದ ರೋಟರಿ ಸರ್ಕಲ್ನಿಂದ ಹಳೆ ಐಬಿವರೆಗೆ ಇರುವ 2 ಕಿ.ಮೀ ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ₹ 1 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಸುಗಮಗೊಳಿಸುವುದು ಹಾಗೂ ಸಾರ್ವಜನಿಕರಿಗೆ ಉತ್ತಮ ರಸ್ತೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದ್ದು, ಸಾರ್ವಜನಿಕರಿಗೆ ಕಾಮಗಾರಿಗಳ ಸಂಪೂರ್ಣ ಪ್ರಯೋಜನ ದೊರೆಯುವಂತೆ ಕ್ರಮವಹಿಸಲಾಗುವುದು ಎಂದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಬ್ದುಲರಜಾಕ ಬೇನೂರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ಹೂಲಗೇರಿ, ಸಹಾಯಕ ಇಂಜಿನೀಯರ್ ಆಂಜನೇಯ ಲಮಾಣಿ ಸೇರಿ ನಿಂಗಣ್ಣ ಕೊಟ್ಟಿ, ಲಕ್ಷ್ಮಣ ದಡ್ಡಿ, ರಾಚಪ್ಪ ಪಟ್ಟಣದ, ಮಲ್ಲಯ್ಯಸ್ವಾಮಿ ಹಿರೇಮಠ, ಅಶೋಕ ದೇಸಾಯಿ, ರಾಜು ಮನ್ನಿಕೇರಿ ಹಾಗೂ ಇತರರು ಇದ್ದರು.