ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಗೃಹಲಕ್ಷ್ಮಿ ಯೋಜನೆಯ 31ನೇ ಕಂತು ಬಿಡುಗಡೆಯಾಗುತ್ತಿದ್ದು, ಇನ್ನೊಂದೆರಡು ದಿನಗಳಲ್ಲಿ ಫಲಾನುಭವಿಗಳಿಗೆ ಹಣ ಜಮಾ ಆಗಲಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ‌ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದದ ನಂತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವು ಯಶಸ್ವಿಯಾಗಿ ಮುನ್ನಡೆಯುತ್ತಿವೆ ಎಂದರು.

ಗೃಹಲಕ್ಷ್ಮಿ ಯೋಜನೆ:

ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 31ನೇ ಕಂತಿನ ಹಣ ಬಿಡುಗಡೆಯಾಗಿದ್ದು ಜಿಲ್ಲೆಯ ಒಟ್ಟು 3,79,858 ಅರ್ಹ ಮಹಿಳಾ ಫಲಾನುಭವಿಗಳಿಗೆ ಈ ಕಂತಿನ ಲಾಭ ಸಿಗಲಿದೆ.


ಒಟ್ಟು 75.97 ಕೋಟಿ ರು. ಹಣ ಬಿಡುಗಡೆಯಾಗಿದೆ. ಪ್ರತಿಯೊಬ್ಬ ಫಲಾನುಭವಿಯ ಖಾತೆಗೆ ತಲಾ 2,000 ರು. ಹಣವು ಮುಂದಿನ ಒಂದೆರಡು ದಿನಗಳಲ್ಲಿ ನೇರವಾಗಿ ಜಮೆಯಾಗಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 30 ಕಂತುಗಳಲ್ಲಿ ಡಿ.ಬಿ.ಟಿ. ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಒಟ್ಟು 3,110.48 ಕೋಟಿಗೂ ಅಧಿಕ ರೂಪಾಯಿ ಜಮೆಯಾಗಿದೆ ಎಂದರು.

ಮೃತರ ಖಾತೆಯಿಂದ ವಾಪಸ್:

ಜಿಲ್ಲೆಯಲ್ಲಿ ಮರಣ ಹೊಂದಿದ 9,247 ಫಲಾನುಭವಿಗಳನ್ನು ಗುರುತಿಸಲಾಗಿದ್ದು, ತಾಂತ್ರಿಕ ಕಾರಣಗಳಿಂದ ಅವರ ಖಾತೆಗೆ ಜಮೆಯಾಗಿದ್ದ ಹಣವನ್ನು ಹಿಂಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಈ ಪೈಕಿ ಈಗಾಗಲೇ 3,600 ಫಲಾನುಭವಿಗಳಿಂದ 3,79,82,000 ರು.ಗಳನ್ನು ಯಶಸ್ವಿಯಾಗಿ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದರು.

ಗೃಹಜ್ಯೋತಿ ಯೋಜನೆ-ಸಮೀಕ್ಷೆ:

ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರ ಮಾಹಿತಿ ಪರಿಶೀಲನಾ ಕಾರ್ಯವು ಜುಲೈ 1 ರಿಂದ ಆರಂಭವಾಗಿದೆ. ಈ ಕುರಿತು ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಚಂದ್ರಭೂಪಾಲ್ ಸ್ಪಷ್ಟಪಡಿಸಿದರು.

ಮೆಸ್ಕಾಂ ಮೀಟರ್ ರೀಡರ್‌ಗಳು ಮತ್ತು ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಫಲಾನುಭವಿಗಳು ಈ ಸಮೀಕ್ಷೆಗಾಗಿ ಮೆಸ್ಕಾಂ ಕಚೇರಿಗೆ ಅಲೆಯುವ ಅಗತ್ಯವಿಲ್ಲ ಎಂದು ತಿಳಿಸಿದರು.

ಈ ಸಮೀಕ್ಷೆಯು ಕೇವಲ ಫಲಾನುಭವಿಗಳ ವಿವರಗಳನ್ನು ಅಪ್‌ಡೇಟ್ ಮಾಡಿಕೊಳ್ಳುವ ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಯಾವುದೇ ಕಾರಣಕ್ಕೂ ಉಚಿತ ವಿದ್ಯುತ್ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ.

ಜಿಲ್ಲೆಯಲ್ಲಿ ಯೋಜನೆಗೆ ನೋಂದಣಿಯಾಗಿರುವ ಒಟ್ಟು 5,09,133 ಗೃಹಗಳಲ್ಲಿ ಈಗಾಗಲೇ 1,38,566 ಮನೆಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಶೇ. 29 ರಷ್ಟು ಪ್ರಗತಿ ಸಾಧಿಸಲಾಗಿದೆ. ಸಾರ್ವಜನಿಕರು ಸಿಬ್ಬಂದಿಗೆ ಅಗತ್ಯ ದಾಖಲೆ ನೀಡಿ ಸಹಕರಿಸುವಂತೆ ಕೋರಿದರು.

ಅನ್ನಭಾಗ್ಯ ಯೋಜನೆ: ರೋಗಿಗಳಿಗೆ 15 ದಿನಗಳಲ್ಲಿ ಬಿಪಿಎಲ್ ಕಾರ್ಡ್ ತುರ್ತು ಆರೋಗ್ಯ ಸೇವೆಗಳ ಕಾರಣಕ್ಕಾಗಿ ಬಿ.ಪಿ.ಎಲ್. ಕಾರ್ಡ್ ಕೋರಿ ಅರ್ಜಿ ಸಲ್ಲಿಸುವ ಸಾರ್ವಜನಿಕರಿಗೆ ಸರ್ಕಾರ ಉತ್ತಮ ಅವಕಾಶ ನೀಡಿದೆ. ಅನಾರೋಗ್ಯ ಪೀಡಿತರಿಗೆ ಯಾವುದೇ ವಿಳಂಬವಿಲ್ಲದೆ 15 ದಿನಗಳ ಒಳಗಾಗಿ ಕಾರ್ಡ್ ವಿತರಿಸುವಂತೆ ಸರ್ಕಾರವು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ಸಿ.ಎಸ್. ಚಂದ್ರಭೂಪಾಲ ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷರಾದ ಎಂ.ಎಸ್. ಬಸವರಾಜಪ್ಪ, ಆರ್. ಶಿವಣ್ಣ, ಇಕ್ಕೇರಿ ರಮೇಶ್, ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್ ಎಂ ಮಧು, ಸದಸ್ಯರಾದ ಅಮೀರ್ ಅಮ್ಜಾ, ಎಸ್ ಪ್ರಭಾಕರ್, ಭವ್ಯ ಕೃಷ್ಣಮೂರ್ತಿ, ಎಂ ರಾಹುಲ್, ಅರ್ಚನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ‌ನಿರ್ದೇಶಕಿ ಭಾರತಿ ಬಣಕಾರ್, ಸಿಡಿಪಿಓ‌ ಗಂಗೂಬಾಯಿ, ಮೆಸ್ಕಾಂ ಇಲಾಖೆ ನಿಯಂತ್ರಣಾಧಿಕಾರಿ ಚಂದ್ರಕಲಾ ಮತ್ತಿತರರು ಇದ್ದರು.

-------------------

ಪೋಟೋ: 17ಎಸ್‌ಎಂಜಿಕೆಪಿ04

ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ‌ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದದ ನಂತರ ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ಮಾತನಾಡಿದರು.