ಮೂಲ್ಕಿ: ಪ್ರಜಾಪ್ರಭುತ್ವದಲ್ಲಿ ಜನರಿಗೆ ಇಂದಿಗೂ ಪತ್ರಿಕೆ ಮೇಲೆ ನಂಬಿಕೆ ಉಳಿದಿದ್ದು, ಸಮೂಹ ಮಾಧ್ಯಮಗಳು ವಿವಿಧ ಕ್ಷೇತ್ರದಲ್ಲಿ ಬೆಳೆದಿದ್ದರೂ ಇಂದಿಗೂ ಸುದ್ದಿ ವಿಶ್ವಾಸರ್ಹತೆಯಲ್ಲಿ ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮಂಚೂಣಿಯಲ್ಲಿದೆ ಎಂದು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಹೇಳಿದರು.
ಮೂಲ್ಕಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮ ಕಿಲ್ಪಾಡಿಯ ಸಹಯೋಗದಲ್ಲಿ ಮೂಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮದ ಬೆಳವಣಿಗೆಯ ಬಗ್ಗೆ ದಿಕ್ಸೂಚಿ ಮಾತುಗಳನ್ನಾಡಿದರು.ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಸುರತ್ಕಲ್ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ, ಸಮಾಜದ ಡೊಂಕುಗಳನ್ನು ತಿದ್ದುವ ಮೂಲಕ ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಾಗಿ ಪತ್ರಿಕೆ ಹಾಗೂ ಪತ್ರಕರ್ತರ ಸೇವೆ ಅನನ್ಯ ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿದರು. ಹಿರಿಯ ಪತ್ರಕರ್ತ ಐಕಳ ಜಯಪಾಲ ಶೆಟ್ಟಿ, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ವಕೀಲ ಹಾಗೂ ನೋಟರಿ ಡೇನಿಯಲ್ ದೇವರಾಜ್, ಮೂಲ್ಕಿ ರೋಟರಿ ಕ್ಲಬ್ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು ಮತ್ತು ಮೂಲ್ಕಿ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ, ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ಸಂಚಾಲಕ ಪುನೀತಕೃಷ್ಣ ಉಪಸ್ಥಿತರಿದ್ದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಸುರತ್ಕಲ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪುನೀತ್ ಕೃಷ್ಣ ವಂದಿಸಿದರು. ಹರೀಶ್ ಹೆಜ್ಮಾಡಿ ನಿರೂಪಿಸಿದರು.