ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬ ಸಾಮಾನ್ಯ ನಾಗರಿಕರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಗ್ಯಾರಂಟಿ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಉಳ್ಳಾಲ: ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬ ಸಾಮಾನ್ಯ ನಾಗರಿಕರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಗ್ಯಾರಂಟಿ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ತೊಕ್ಕೊಟ್ಟಿನ ಸೇವಾ ಸೌಧದಲ್ಲಿ ನಿರ್ಮಾಣಗೊಂಡ ನೂತನ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಳ್ಳಾಲ ತಾಲೂಕು ಕಚೇರಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಶಕ್ತಿ ಯೋಜನೆಗಳು ಜನಸಾಮಾನ್ಯರ ಜೀವನಕ್ಕೆ ಆಸರೆಯಾಗಿದ್ದು, ಲಕ್ಷಾಂತರ ಕುಟುಂಬಗಳಿಗೆ ನೇರ ಪ್ರಯೋಜನ ಒದಗಿಸಿವೆ. ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದಲೂ ವಿವಿಧ ಬೇಡಿಕೆಗಳು ಕೇಳಿಬರುತ್ತಿದ್ದು, ಅವರ ಹಿತದೃಷ್ಟಿಯಿಂದ ಅವರಿಗೂ ಉಚಿತ ಬಸ್ ನೀಡಲಾಗುತ್ತಿದೆ ಎಂದು ಹೇಳಿದರು.ಉಳ್ಳಾಲ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಫೀಕ್ ಅಂಬ್ಲಮೊಗರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಉಪಾಧ್ಯಕ್ಷ ಸುರೇಖಾ ಚಂದ್ರಹಾಸ್ ,ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸುರೇಶ್ ಭಟ್ನಗರ, ಮಾಜಿ ಜಿಪಂ ಸದಸ್ಯ ಎನ್.ಎಸ್. ಕರೀಮ್, ಪ್ರಮುಖರಾದ ಮನ್ಸೂರ್ ಮಂಚಿಲ, ಮುಸ್ತಫಾ ಅಬ್ದುಲ್ಲಾ, ಚಂದ್ರಹಾಸ್ ಕರ್ಕೇರ, ಚಂದ್ರಿಕಾ ರೈ, ಅಮಿತಾ ಅಶ್ವಿನ್ ಬಂಡಿಕೊಟ್ಯ, ಪವನ್ ರಾಜ್ ಕೊಲ್ಯ ಉಪಸ್ಥಿತರಿದ್ದರು. ಗ್ಯಾರಂಟಿ ಸಮಿತಿ ಸದಸ್ಯ ಸಮೀರ್ ಫಜೀರ್ ಸ್ವಾಗತಿಸಿ, ಫಾರೂಕ್ ನಿರೂಪಿಸಿದರು.