ತಾಲೂಕಿನ ಹಾರೇಹೊಸೂರು ಗ್ರಾಮದ ಹಾಡಿಗೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಪದಾಧಿಕಾರಿಗಳ ತಂಡ ಭೇಟಿ ನೀಡಿ, ಹಾಡಿ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ತಾಲೂಕಿನ ಹಾರೇಹೊಸೂರು ಗ್ರಾಮದ ಹಾಡಿಗೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಪದಾಧಿಕಾರಿಗಳ ತಂಡ ಭೇಟಿ ನೀಡಿ, ಹಾಡಿ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿತು.

ಈ ವೇಳೆ ಹಾಡಿ ಕುಟುಂಬಗಳಿಗೆ ಪಡಿತರ ಚೀಟಿ ಇದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಿ, ಅರ್ಹರಿಗೆ ಪಡಿತರ ಚೀಟಿ ವಿತರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಅಲ್ಲದೆ ಕಂದಾಯ ಇಲಾಖೆಯ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಅವುಗಳ ಸೌಲಭ್ಯಗಳನ್ನು ಗ್ರಾಮ ಆಡಳಿತಾಧಿಕಾರಿ ಅಬ್ದುಲ್ ರಜಾಕ್ ವಿವರಿಸಿದರು.

ಸ್ಥಳದಲ್ಲೇ ಮತಗಟ್ಟೆ ಮಟ್ಟದ ಅಧಿಕಾರಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ, ಅಗತ್ಯ ದಾಖಲೆಗಳನ್ನು ಸಲ್ಲಿಸಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.

ಹಾಡಿ ನಿವಾಸಿಗಳು ಕುಡಿಯುವ ನೀರು, ರಸ್ತೆ ಸೇರಿದಂತೆ ವಿವಿಧ ಮೂಲ ಸೌಲಭ್ಯಗಳ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದು, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜು, ಸಮಿತಿ ಸದಸ್ಯ ಸಂದೀಪ್ ಹಾರೇಹೊಸೂರು, ರಂಗಸ್ವಾಮಿ, ಆಹಾರ ನಿರೀಕ್ಷಕಿ ಯಶಸ್ವಿನಿ, ಸಿಬ್ಬಂದಿಗಳಾದ ಯಲ್ಲಾಲಿಂಗ, ವಿನೋದ್ ಕುಮಾರ್, ಹಾಡಿ ಮುಖ್ಯಸ್ಥ ಗಣೇಶ್ ಮತ್ತಿತರರು ಇದ್ದರು.