ಕನ್ನಡಪ್ರಭ ವಾರ್ತೆ ಮಡಿಕೇರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರಕ್ಕೆ ಮೂರು ವರ್ಷ ಪೂರ್ಣಗೊಂಡಿದ್ದು, ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಭೂ ಗ್ಯಾರಂಟಿ ಯೋಜನೆಯನ್ನು ಸಹ ಜಾರಿಗೊಳಿಸಿದ್ದು, ಸರ್ಕಾರದ ಗ್ಯಾರಂಟಿ ಯೋಜನೆ ತಲುಪಿಸುವಲ್ಲಿ ಇನ್ನಷ್ಟು ಪ್ರಯತ್ನ ಮಾಡಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಸೂಚಿಸಿದ್ದಾರೆ.

ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆ ಸಂಬಂಧ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿದಿ ಹಾಗೆಯೇ ಭೂ ಒಡೆತನ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಪ್ರಗತಿಯತ್ತ ಸಾಗುತ್ತಿದೆ. ಜೊತೆಗೆ ಬಡ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡುತ್ತಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳು ತಲುಪುವಂತಾಗಲು ಅಧಿಕಾರಿಗಳ ಕರ್ತವ್ಯ ಮಹತ್ತರ ಎಂದು ಧರ್ಮಜ ಉತ್ತಪ್ಪ ಅವರು ನುಡಿದರು.

ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲ:


ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಜೊತೆಗೆ ಕೆಎಸ್‍ಆರ್‍ಟಿಸಿ ಬಲಪಡಿಸುವಲ್ಲಿಯೂ ಸಹ ಇದೊಂದು ಅತ್ಯುತ್ತಮ ಯೋಜನೆಯಾಗಿದೆ ಎಂದು ಧರ್ಮಜ ಉತ್ತಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವಲ್ಲಿ ಬೃಹತ್ ಆರ್ಥಿಕ ಕ್ರಾಂತಿ ಎಂದರೆ ತಪ್ಪಾಗಲಾರದು. ಗೃಹಲಕ್ಷ್ಮಿ ಯೋಜನೆಯಡಿ ನೀಡಲಾಗುವ 2 ಸಾವಿರ ರು. ಕುಟುಂಬದ ನಿರ್ವಹಣೆಗೆ ಸಹಕಾರಿಯಾಗಿದೆ ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಮೂಲಕ ಸರ್ಕಾರ ಬಡ ಕುಟುಂಬದ ಜನರಿಗೆ ಅನುಕೂಲ ಮಾಡಿದೆ ಎಂದರು.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಆಹಾರ ಭದ್ರತೆಯನ್ನು ಖಾತರಿ ಪಡಿಸುವ ಅನ್ನಭಾಗ್ಯ ಯೋಜನೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಯೋಜನೆಯನ್ನು ಸಮರ್ಪಕವಾಗಿ ತಲುಪಿಸಬೇಕು ಎಂದರು.

ಯುವನಿಧಿ ಯೋಜನೆಯಡಿ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಂಡ ಉದ್ಯೋಗ ಹುಡುಕಾಟದಲ್ಲಿರುವ ಯುವ ಸಮೂಹಕ್ಕೆ ಆರ್ಥಿಕ ಸ್ಥೈರ್ಯ ತುಂಬಲು ಈ ಯೋಜನೆ ಸಹಕಾರಿಯಾಗಿದ್ದು, ಎಲ್ಲಾ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ತಲುಪಿಸಿ, ಸರ್ಕಾರಕ್ಕೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಅವರು ಹೇಳಿದರು.

ಕ್ರಾಂತಿಕಾರಕ ಹೆಜ್ಜೆ ಸರ್ಕಾರ ಇಟ್ಟಿದೆ:

ಕಂದಾಯ ಇಲಾಖೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಮಾಡುವತ್ತ ಹೆಜ್ಜೆ ಇಡಲಾಗಿದ್ದು, ಆ ದಿಸೆಯಲ್ಲಿ ಭೂ ದಾಖಲೆಗಳಿಗೆ ಡಿಜಿಟಲ್ ಸ್ಪರ್ಶ ನೀಡುವಲ್ಲಿ ಕ್ರಾಂತಿಕಾರಕ ಹೆಜ್ಜೆ ಸರ್ಕಾರ ಇಟ್ಟಿದೆ. ಆಸ್ತಿ ಮತ್ತು ಆರ್‍ಟಿಸಿ ಆಧಾರ್ ಜೋಡಣೆ ಮೂಲಕ ನಕಲಿ ದಾಖಲೆ ಸೃಷ್ಟಿಗೆ ಕಡಿವಾಣ ಹಾಕಲಾಗಿದೆ. ಲ್ಯಾಂಡ್ ಬೀಟ್, ಇ-ಪೌತಿ ಖಾತೆ ಸೇರಿದಂತೆ ಕಂದಾಯ ಇಲಾಖೆಯಲ್ಲಿ ಹೊಸ ಬದಲಾವಣೆಗೆ ಕಂದಾಯ ಸಚಿವರು ಮುಂದಾಗಿದ್ದು, ಈ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರು ವಿವರಿಸಿದರು.

ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕರು ಮಾಹಿತಿ ನೀಡಿ ಶಕ್ತಿ ಯೋಜನೆಯಡಿ ಒಟ್ಟು 1,66,47,567 ವಯಸ್ಕ ಮಹಿಳಾ ಪ್ರಯಾಣಿಕರು ಮತ್ತು 4,02,999 ಹೆಣ್ಣು ಮಕ್ಕಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿನಿಯರು ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿ, ಯೋಜನೆಯ ಪ್ರಯೋಜನೆಯನ್ನು ಪಡೆದು ಕೊಂಡಿದ್ದಾರೆ. ಸರಾಸರಿ 16, 348 ಪ್ರಯಾಣಿಕರು ಒಂದು ದಿನಕ್ಕೆ ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿರುತ್ತಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಏಪ್ರಿಲ್ 2026 ಮಾಹೆಯವರೆಗೆ ಶೇ.32.65 ರಷ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ ಎಂದರು.

ಆಹಾರ ಇಲಾಖೆ ಉಪ ನಿರ್ದೇಶಕರಾದ ಭೀಮರಾಯ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 8,670 ಎಎವೈ (ಅಂತ್ಯೋದಯ) ಹಾಗೂ 97,284 ಬಿಪಿಎಲ್ (ಆದ್ಯತಾ) ಪಡಿತರ ಚೀಟಿಗಳು ಇವೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಎಎವೈ ಪ್ರತೀ ಪಡಿತರ ಚೀಟಿದಾರರಿಗೆ 35 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಹಾಗೂ ಬಿಪಿಎಲ್ (ಅದ್ಯತಾ) ಪಡಿತರ ಚೀಟಿ ದಾರರ ಪ್ರತೀ ಸದಸ್ಯರಿಗೆ 10 ಕೆ.ಜಿ ಅಕ್ಕಿಯಂತೆ ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಒಟ್ಟು 1,05,954 ಪಡಿತರ ಚೀಟಿ ಕುಟುಂಬಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಗೃಹಲಕ್ಷ್ಮಿ ಯೋಜನೆಯಡಿ 1,17,905 ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 2,000 ರು..ನಂತೆ ಫೆಬ್ರವರಿವರೆಗೆ ಹಣ ಪಾವತಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಅವರು ಮಾಹಿತಿ ನೀಡಿದರು.

ಗೃಹಜ್ಯೋತಿ ಯೋಜನೆಯಡಿ ಶೇ.99.1 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸೆಸ್ಕ್ ಇಲಾಖೆ ಎಂಜಿನಿಯರ್ ಅವರು ಮಾಹಿತಿ ನೀಡಿದರು.

ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್ ಅವರು ಮಾಹಿತಿ ನೀಡಿ 2026 ರ ಏಪ್ರಿಲ್ ಮಾಸಾಂತ್ಯಕ್ಕೆ 1850 ಪದವೀದರ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಹಾಗೆಯೇ 30 ಡಿಪ್ಲೋಮಾ ಫಲಾನುಭವಿಗಳಿಗೆ ಸಹಾಯಧನ ಕಲ್ಪಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಕೆ.ಸಿ.ಭೀಮಯ್ಯ, ಪಿ.ಆರ್.ಪಂಕಜ, ನಾಸೀರ್, ಸದಸ್ಯರಾದ ಬಿ.ಡಿ.ಅಣ್ಣಯ್ಯ, ಕೆ.ಎಂ.ಬಶೀರ್, ಕೆ.ಎಂ.ಉಸ್ತಪ, ಪಿ.ಎಲ್.ಸುರೇಶ್, ಕೆ.ಜಿ.ಪೀಟರ್, ಕಾಂತರಾಜು, ಮಂದ್ರೀರ ಮೋಹನ್ ದಾಸ್, ಜಾನ್ಸನ್ ಪಿ.ವಿ., ಕಾಳಿಮಾಡ ಪ್ರಶಾಂತ್ ಇತರರು ತಮ್ಮ ವ್ಯಾಪ್ತಿಗೆ ಸಂಬಂಧಿಸಿಂತೆ ಹಲವು ಕುಂದುಕೊರತೆ ಬಗ್ಗೆ ಬೆಳಕು ಚೆಲ್ಲಿದರು. ಜಿ.ಪಂ.ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬೀ ಇದ್ದರು.