ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಜೀವನಾವಶ್ಯಕ ವಸ್ತುಗಳ ದರ ಏರಿಕೆ ಮಾಡಿದ್ದರೆ ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿಗಳಿಂದ ಜನ ಆ ದರ ಏರಿಕೆಯ ಹೊರೆ ತಡೆದುಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ, ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೀದರ್‌

ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಜೀವನಾವಶ್ಯಕ ವಸ್ತುಗಳ ದರ ಏರಿಕೆ ಮಾಡಿದ್ದರೆ ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿಗಳಿಂದ ಜನ ಆ ದರ ಏರಿಕೆಯ ಹೊರೆ ತಡೆದುಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ, ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಭಾಲ್ಕಿ ತಾಲೂಕಿನ ಮೆಹಕರ್‌ನಲ್ಲಿ ನಡೆದ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಉದ್ಘಾಟಿಸಿ ಮಾತನಾಡಿ, ಗ್ಯಾರಂಟಿ ಜಾರಿಗೆ ತಂದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರತಿಪಕ್ಷಗಳು ಕೂಗುತ್ತಿದ್ದವು. ಆದರೆ ನಮ್ಮ ಸರ್ಕಾರ ಗ್ಯಾರಂಟಿಯನ್ನೂ ಜಾರಿ ಮಾಡಿದೆ, ರಾಜ್ಯದ ಅಭಿವೃದ್ಧಿಯನ್ನೂ ಮಾಡುತ್ತಿದೆ. ಅದಕ್ಕೆ ಇಂದು ಉದ್ಘಾಟನೆಯಾದ 4.5 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಹಕರ್‌ ಸರ್ಕಾರಿ ಪ್ರಾಥಮಿಕ ಶಾಲೆಯ ನೂತನ ಭವ್ಯ ಕಟ್ಟಡ ಸಾಕ್ಷಿ ಎಂದರು.

ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದಿದ್ದು, ಚುನಾವಣಾ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ನಮ್ಮ ಗ್ಯಾರಂಟಿ ಜನಪ್ರಿಯತೆಯಿಂದ ಪ್ರತಿಪಕ್ಷಗಳು ಕಂಗೆಟ್ಟುಹೋಗಿವೆ ಎಂದು ಅವರು ಪ್ರತಿಪಾದಿಸಿದರು.ಇದೇ ವೇಳೆ ಸಾಯಗಾಂವ್‌ ಮಾರ್ಗವಾಗಿ ಭಾಲ್ಕಿ – ಮೆಹಕರ್‌ ರಸ್ತೆಯ ಅಭಿವೃದ್ಧಿಗೆ 5 ಕೋಟಿ ರು., ಮಂಜೂರು ಮಾಡಲಾಗಿದ್ದು, ಈ ಕಾಮಗಾರಿಗೂ ಇಂದು ಚಾಲನೆ ನೀಡಲಾಗಿದೆ. ಮೆಹಕರ್‌ ಜನರು ಊರಿನಲ್ಲಿ ಆಗುತ್ತಿರುವ ಪ್ರಗತಿಯನ್ನು ನೋಡಿ ತಮ್ಮ ಊರು ಮಹಾರಾಷ್ಟ್ರಕ್ಕೆ ಸೇರದಿರುವುದು ಉತ್ತಮವಾಯಿತು, ಕರ್ನಾಟಕದಲ್ಲಿ ಉಳಿದಿದ್ದೇ ಒಳ್ಳೆಯದಾಯಿತು ಎಂದು ಹೆಮ್ಮೆಯಿಂದ ಹೇಳುತ್ತಿದ್ದಾರೆ ಎಂದರು.ರಾಜ್ಯದಲ್ಲಿ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ರಾಜ್ಯ ಸರ್ಕಾರ ಈಗಾಗಲೇ 101 ತಾಲೂಕುಗಳನ್ನು ಕೇಂದ್ರ ಸರ್ಕಾರದ ನಿಯಮಗಳ ರೀತ್ಯ ಬರಪೀಡಿತ ಎಂದು ಘೋಷಿಸಿದೆ. ಶೀಘ್ರವೇ ಭಾಲ್ಕಿ ತಾಲೂಕನ್ನೂ ಬರಪೀಡಿತ ಎಂದು ಘೋಷಣೆಯಾಗಲಿದೆ ಎಂದು ಖಂಡ್ರೆ ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ. ರಂದೀಪ್‌, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಗಿಟ್ಟೆ ವಿಠ್ಠಲ ಮಾಧವರಾವ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ, ಗ್ಯಾರಂಟಿ ಸಮಿತಿಯ ಚಿಮಕೋಡ್‌, ಅರಣ್ಯ ಅಭಿವೃದ್ಧಿ ನಿಗಮದ ಹನುಮಂತರಾವ್‌ ಚವ್ಹಾಣ್‌ ಮತ್ತಿತರರು ಇದ್ದರು.