ಹುಬ್ಬಳ್ಳಿ: ಯಾವುದೇ ಪಕ್ಷಭೇದವಿಲ್ಲದೆ ಎಲ್ಲರಿಗೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ತಲುಪಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ಸಂತೋಷಮಯ ಜೀವನ ನಡೆಸುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಶ್ಲಾಘಿಸಿದರು.
ಇಲ್ಲಿನ ಅಶೋಕನಗರದ ಕನ್ನಡ ಭವನದಲ್ಲಿ ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ಭಾನುವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಶಿಬಿರ ಉದ್ಘಾಟಿಸಿ ಮಾತನಾಡಿದರು.ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿದ್ದು, ಪ್ರತಿಯೊಬ್ಬರ ಕಾರ್ಯಕರ್ತರು ಹಾಗೂ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು ಎಲ್ಲರಿಗೂ ಯೋಜನೆಗಳನ್ನು ತಲುಪಿಸುವಂತೆ ಮಾಡಬೇಕು ಎಂದರು.
ರಾಜ್ಯದ ಜಿಡಿಪಿ ಉತ್ತಮ ಸ್ಥಿತಿಯಲ್ಲಿದ್ದು, ಸರ್ಕಾರ ಪಂಚ ಯೋಜನೆಗಳನ್ನು ಜಾರಿಗೆ ತಂದರೂ ಯಾವುದೇ ಆರ್ಥಿಕ ಸಮಸ್ಯೆ ಇಲ್ಲದೇ ಆಡಳಿತ ಮುನ್ನಡೆಸಿಕೊಂಡು ಬರುತ್ತಿದೆ. ವಿರೋಧ ಪಕ್ಷದವರು ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಇಲ್ಲ-ಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ಅವುಗಳಿಗೆ ಫಲಾನುಭವಿಗಳು ಹಾಗೂ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳಬಾರದು ಎಂದು ಸಲಹೆ ನೀಡಿದರು.ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಿಂದ ಕುಟುಂಬದ ಆರ್ಥಿಕ ನಿರ್ಧಾರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳು ಕೇವಲ ಹಣದ ಸಹಾಯವಲ್ಲ, ಗೌರವದ ಭರವಸೆ ಎಂತಾಗಿದೆ ಎಂದರು.
ಹು-ಧಾ ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್ ಹಳಿಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾರಂಭದಲ್ಲಿ ಮಾಜಿ ಸಂಸದ ಐ.ಜಿ. ಸನದಿ, ಹು-ಧಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ವೀರೇಶ್ ಕಡಕೊಳಮಠ, ಸಂಗಮೇಶ್ ಗೌರಕ್ಕನವರ, ಹು-ಡಾ ಅಧ್ಯಕ್ಷ ಶಾಕೀರ್ ಸನದಿ, ಅಲ್ತಾಫ ಹಳ್ಳೂರ, ಅನಿಲ್ಕುಮಾರ ಪಾಟೀಲ, ಸದಾನಂದ ಡಂಗನವರ, ಸಿಡಿಪಿಒ ಸುನೀತಾ ಪಾಟೀಲ, ಆಹಾರ ಇಲಾಖೆಯ ಕೇಶವ ರಾಯಕರ, ವಾ.ಕ.ರ.ಸ. ಅಧಿಕಾರಿ ವಿನಾಯಕಸ್ವಾಮಿ ಸಾಲಿಮಠ, ಬಾಳಮ್ಮ ಜಂಗನವರ, ಕಲಾವತಿ ದತ್ತವಾಡ, ಉಮೇಶ್ ಕೊಟ್ಟರನವರ, ಸಂತೋಷ್ ನಾಯಕ ಸೇರಿದಂತೆ 46ನೇ ವಾರ್ಡಿನ ಸುಮಾರು 600 ಫಲಾನುಭವಿಗಳು ಉಪಸ್ಥಿತರಿದ್ದರು.