ಬಡವರ ಮನೆ ಮನೆಗಳಿಗೀಗ ಗ್ಯಾರಂಟಿ ಯೋಜನೆಗಳು ಆಸರ: ಸಚಿವ ಸಂತೋಷ ಲಾಡ್

| Published : Mar 10 2024, 01:32 AM IST

ಬಡವರ ಮನೆ ಮನೆಗಳಿಗೀಗ ಗ್ಯಾರಂಟಿ ಯೋಜನೆಗಳು ಆಸರ: ಸಚಿವ ಸಂತೋಷ ಲಾಡ್
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ 4,04,848 ಮನೆಗಳಿಗೆ ಗೃಹಲಕ್ಷ್ಮಿ ಹಾಗೂ 4,74,548 ಫಲಾನುಭವಿಗಳು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಕನ್ನಡಪ್ರಭ ವಾರ್ತೆ ಕುಂದಗೋಳ

ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಮನೆ ಮನೆಗಳಿಗೆ ತಲುಪಿಸಲಾಗಿದೆ. ಈ ಯೋಜನೆಗಳಿಗೆ ಸರ್ಕಾರ ₹56 ಸಾವಿರ ಕೋಟಿ ಹಣವನ್ನು ಖರ್ಚು ಮಾಡುತ್ತಿದೆ ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಕುಂದಗೋಳ ಪಟ್ಟಣದ ನಂಜಪ್ಪ ನಲವಡಿ ಜಮೀನಿನಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಆಯೋಜಿಸಿದ್ದ ಗ್ಯಾರಂಟಿ ಸಮಾವೇಶವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 4,04,848 ಮನೆಗಳಿಗೆ ಗೃಹಲಕ್ಷ್ಮಿ ಹಾಗೂ 4,74,548 ಫಲಾನುಭವಿಗಳು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ. 8.43 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ. ಒಟ್ಟಾರೆಯಾಗಿ ರಾಜ್ಯದಲ್ಲಿ 150 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಪ್ರಯೋಜನ ಪಡೆದಿರುತ್ತಾರೆ. 3,55,794 ಕುಟುಂಬಗಳು ಅನ್ನಭಾಗ್ಯ ಯೋಜನೆಯ ಅಡಿ ಪಡಿತರ ವಿತರಿಸಲಾಗುತ್ತಿದೆ. ಅಲ್ಲದೇ ಅಕ್ಕಿಯ ಬದಲು ಹಣವನ್ನು ಒದಗಿಸಲಾಗುತ್ತಿದೆ. ಗ್ರಾಪಂ ವಿಕೇಂದ್ರೀಕರಣ, ಪಂಚಾಯತ್ ಚುನಾವಣೆಯಲ್ಲಿ ಶೇ. 50 ರಷ್ಟು ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿರುವುದು ಕಾಂಗ್ರೆಸ್ ಸರ್ಕಾರವಾಗಿದೆ. 26 ಕೋಟಿ ಜನರು ನರೇಗಾ ಯೋಜನೆಯ ಅಡಿ ಉದ್ಯೋಗ ಒದಗಿಸಲಾಗಿದೆ. ಅವರಿಗೆ ₹320 ದಿನಗೂಲಿ ಹಣವನ್ನು ನೇರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಹೀಗಾಗಿ ಬಡವರ ಪರ ಇರುವ ಸರ್ಕಾರ ನಮ್ಮದಾಗಿದೆ ಎಂದರು.

ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಒಂದೆಡೆ ಸೇರಿಸುವ ಕಾರ್ಯಕ್ರಮ ಇದಾಗಿದೆ. 20 ಸಾವಿರಕ್ಕೂ ಅಧಿಕ ಜನರು ಇಂದು ಸೇರಿದ್ದಾರೆ‌. ಅವರಿಗೆ ನಾನು ಆಭಾರಿಯಾಗಿದ್ದೇನೆ. ಎಲ್ಲ ಅಧಿಕಾರಿಗಳ ಜವಾಬ್ದಾರಿಯಿಂದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿವೆ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು. ಮಾಜಿ ಸಂಸದ ಐ.ಜಿ. ಸನದಿ, ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಎಂ‌.ಎಸ್. ಅಕ್ಕಿ, ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಪಂ ಸಿಇಒ ಸ್ವರೂಪ ಟಿ.ಕೆ, ಎಸ್ಪಿ ಗೋಪಾಲ ಬ್ಯಾಕೋಡ, ಹು-ಧಾ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರುದ್ರೇಶ ಗಾಳಿ, ಮುಖಂಡರಾದ ಅನಿಲಕುಮಾರ ಪಾಟೀಲ, ಚಂದ್ರಶೇಖರ ಜುಟ್ಟಲ, ಅರವಿಂದ ಕಟಗಿ, ಸದಾನಂದ ಡಂಗನವರ, ಶಿವಾನಂದ ಬೆಂತೂರ‌, ಕುಂದಗೋಳದ ತಹಸೀಲ್ದಾರ್‌ ಎಚ್. ಪ್ರಾಣೇಶ, ತಾಪಂ ಇಒ ಎಸ್.ಎಸ್. ಕಾದ್ರೋಳಿ, ಪಪಂ ಮುಖ್ಯಾಧಿಕಾರಿ ಸಂತೋಷ ಕುರಬೇಟ್ ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಇದ್ದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸ್ವಾಗತಿಸಿದರು. ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಅವರು ಸಂವಿಧಾನ ಪೀಠಿಕೆ ಬೋಧಿಸಿದರು. ಸಂಜೀವಕುಮಾರ ಬೆಳವಟಗಿ ವಂದಿಸಿದರು‌.