ಬ್ಯಾಂಕ್‌ ಖಾತೆಗೆ ಕೆವೈಸಿ, ಬಯೋಮೆಟ್ರಿಕ್‌ನಡಿ ಗ್ಯಾರಂಟಿ ಹಣ

| Published : Oct 09 2024, 01:40 AM IST

ಸಾರಾಂಶ

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಅವರ ಖಾತೆಗೆ ಹಣ ಜಮೆ ಆಗುವಂತೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಜಿಪಂನಲ್ಲಿ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ಹೇಳಿಕೆ

- - - ಕನ್ನಡಪ್ರಭ ವಾರ್ತೆ ದಾವಣಗೆರೆ

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಅವರ ಖಾತೆಗೆ ಹಣ ಜಮೆ ಆಗುವಂತೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ಹೇಳಿದರು.

ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಸೀಲ್ದಾರರು ಹಾಗೂ ಉಪವಿಭಾಗಾಧಿಕಾರಿ ಅವರು ಜಂಟಿಯಾಗಿ ಎಲ್ಲ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪಡಿತರ ವಿತರಣೆ, ಪಡಿತರ ಧಾನ್ಯಗಳ ವಿತರಣೆಯಲ್ಲಿ ಆಗುವ ತೂಕದ ವ್ಯತ್ಯಾಸ, ಆಹಾರ ಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಮಾತನಾಡಿ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಅರ್ಹ ಎಲ್ಲ ನಾಗರಿಕರಿಗೂ ಸಿಗುವಂತಾಗಬೇಕು. ಆದ್ದರಿಂದ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆಗಳ ಮಾಹಿತಿ ಕುರಿತು ಆಂದೋಲನ ಕೈಗೊಳ್ಳಬೇಕೆಂದು ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಈ ಯೋಜನೆಗಳು ಯಾರಿಗೆ ತಲುಪುತ್ತಿಲ್ಲವೋ, ಅಂಥವರಿಗೆ ಅರಿವು ಮೂಡಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ದಾಸ್ತಾನು ನೀಡುವ ಸಮಯದ ವೇಳಾಪಟ್ಟಿಯನ್ನು ಸೂಚನಾ ಫಲಕದಲ್ಲಿ ಅಳವಡಿಸಬೇಕು ಎಂದು ತಿಳಿಸಿದರು.

₹247.28 ಕೋಟಿ ವೆಚ್ಚ:

ಅನ್ಯಭಾಗ್ಯ ಯೋಜನೆ ಕುರಿತು ಉಪನಿರ್ದೇಶಕರು ಮಾಹಿತಿ ನೀಡಿ, ದಾವಣಗೆರೆ ಜಿಲ್ಲೆಯಲ್ಲಿ ಜುಲೈ 2023ರಿಂದ ಜೂನ್ 2024 ರವರೆಗೆ ಒಟ್ಟಾರೆ 341792 ಪಡಿತರ ಚೀಟಿದಾರರಿದ್ದಾರೆ. ಅದರಲ್ಲಿ 1226537 ಫಲಾನುಭವಿಗಳು ಅನ್ಯಭಾಗ್ಯ ಯೋಜನೆ ವ್ಯಾಪ್ತಿಗೆ ಬರುತ್ತಿದ್ದು, ಈ ಎಲ್ಲ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಹಣವನ್ನು ಡಿ.ಬಿ.ಟಿ. ಮೂಲಕ ಪ್ರತಿ ತಿಂಗಳು ಪಾವತಿಸಲಾಗಿದೆ. 2023 ರ ಜುಲೈನಿಂದ 2024ರ ಜುಲೈವರೆಗೆ ₹247.28 ಕೋಟಿ ವೆಚ್ಚ ಮಾಡಲಾಗಿದೆ ಎಂದರು.

53470 ಆರ್‌ಆರ್ ಸಂಖ್ಯೆಯವರು ಗೃಹಜ್ಯೋತಿಗೆ ನೋಂದಣಿ ಆಗಿಲ್ಲ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿ, ಗೃಹಲಕ್ಷ್ಮೀ ಯೋಜನೆಯಡಿ ಎಲ್ಲ ತಾಲೂಕುಗಳಿಂದ 366937 ಫಲಾನುಭವಿಗಳು ನೋಂದಣಿಯಾಗಿದ್ದು, ಇದರಲ್ಲಿ 358289 ಫಲಾನುಭವಿಗಳು ಯೋಜನೆ ಲಾಭ ಪಡೆಯುತ್ತಿದ್ದಾರೆ. ಯೋಜನೆ ಆರಂಭವಾದ 2023ರ ಆಗಸ್ಟ್‌ನಿಂದ 2024ರ ಮಾರ್ಚ್‌ವರೆಗೆ ₹751.38 ಕೋಟಿ ಡಿಬಿಟಿ ಮೂಲಕ ಮಹಿಳೆಯರಿಗೆ ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಚಾಲ್ತಿಯಲ್ಲಿರುವ 487228 ಸ್ಥಾವರಗಳಲ್ಲಿ 433758 ಸ್ಥಾವರಗಳ ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ. 53470 ಆರ್.ಆರ್. ಸಂಖ್ಯೆಯವರು ಮಾತ್ರ ಗೃಹಜ್ಯೋತಿ ಯೋಜನೆಗೆ ನೋಂದಣಿ ಆಗಿಲ್ಲ ಎಂದು ಮಾಹಿತಿ ನೀಡಿದರು.

₹136,65,25,048 "ಶಕ್ತಿ " ವೆಚ್ಚ ಭರಿಸಿದೆ:

ಶಕ್ತಿ ಯೋಜನೆಯಡಿ ದಾವಣಗೆರೆ ವಿಭಾಗ ವ್ಯಾಪ್ತಿಯಲ್ಲಿ 2023ರ ಜೂನ್‌ 11ರಿಂದ 2024ರ ಸೆಪ್ಟೆಂಬರ್‌ವರೆಗೆ ಒಟ್ಟಾರೆ 5,02,97,487 ಪ್ರಯಾಣಿಕರು ಬಸ್‌ಗಳಲ್ಲಿ ಸಂಚರಿಸಿದ್ದಾರೆ. ಪ್ರಯಾಣ ವೆಚ್ಚವಾಗಿ ಒಟ್ಟು ₹136,65,25,048 ಸರ್ಕಾರ ಭರಿಸುತ್ತಿದೆ ಎಂದರು.

ಸಭೆಯಲ್ಲಿ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಕೆ.ಎನ್.ಮಂಜುನಾಥ, ನಂಜಾನಾಯ್ಕ, ಅನೀಫ್‌ ಪಾಷಾ ಹಾಗೂ ಅನುಷ್ಠಾನ ಸಮಿತಿ ಎಲ್ಲಾ ಸದಸ್ಯರು, ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

- - -

ಬಾಕ್ಸ್‌ * ಯುವನಿಧಿಯಡಿ ಪಾವತಿ ಯುವನಿಧಿ ಯೋಜನೆಯಡಿ ಜನವರಿ 2024 ರಿಂದ ಜುಲೈ 2024 ರವರೆಗೆ 12243 ಪದವಿ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಪಾವತಿಯಾದ ಮೊತ್ತ ₹3,67,29,000 ಹಾಗೂ 147 ಡಿಪ್ಲೊಮಾ ಫಲಾನುಭವಿಗಳಿಗೆ ₹2,20,500 ಪಾವತಿಸಲಾಗಿದೆ.

- - - -8ಕೆಡಿವಿಜಿ42ಃ: ದಾವಣಗೆರೆಯ ಜಿಪಂ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ನಡೆಯಿತು.