ಸಾರಾಂಶ
ಕನ್ನಡಪ್ರಭ ವಾರ್ತೆ, ಚಾಮರಾಜನಗರ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ ತಲಾ ೫ ಸಾವಿರ ರು. ದೊರೆಯುತ್ತಿರುವುದರಿಂದ ಬಡಕುಟುಂಬಗಳು ಆರ್ಥಿಕವಾಗಿ ಸದೃಢಗೊಳ್ಳಲಿವೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ, ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.ಚಾಮರಾಜನಗರ ತಾಲೂಕಿನ ಬಂಡಿಗೆರೆ ಗ್ರಾಮದ ಉಪ್ಪಾರ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ಹರದನಹಳ್ಳಿ ಹೋಬಳಿಮಟ್ಟದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಹಾಗೂ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶ ಸ್ವಾತಂತ್ರ್ಯಗೊಂಡು ೭೮ ವರ್ಷಗಳೇ ಕಳೆದಿದ್ದರೂ ಸಾಮಾಜಿಕವಾಗಿ ಬಡವರ ಪರವಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು ಕಡಿಮೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವು ಬಡವರು, ಮಹಿಳೆಯರು, ಶೋಷಿತರು, ಹಿಂದುಳಿದವರ ಅಭಿವೃದ್ಧಿಗಾಗಿ ಸಾಕಷ್ಟು ಜನಪರ ಯೋಜನೆಗಳನ್ನು ಅನುಷ್ಟಾನಗೊಳಿಸಿದೆ. ಪ್ರಸ್ತುತ ಸರ್ಕಾರವು ಅನುಷ್ಟಾನ ಮಾಡಿರುವ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಎಂಬ ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಗಳು ಸದೃಢವಾಗಲಿವೆ ಎಂದು ತಿಳಿಸಿದರು.ನುಡಿದಂತೆ ನಡೆದ ಸರ್ಕಾರ ನಮ್ಮದು, ಡಿ. ದೇವರಾಜ ಅರಸು ಅವರನ್ನು ಹೊರತುಪಡಿಸಿದರೆ ಸಾಮಾಜಿಕ ಕಳಕಳಿ ಇರುವ ಮುಖ್ಯಮಂತ್ರಿ ಎಂದರೇ ಅದು ಸಿದ್ದರಾಮಯ್ಯ ಮಾತ್ರ. ಪಂಚ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರವು ಪ್ರತಿ ವರ್ಷಕ್ಕೆ ೫೩ ಸಾವಿರ ಕೋಟಿ ರು. ಮೀಸಲಿರಿಸಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದ ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಿಗೆ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಗೃಹಲಕ್ಷ್ಮೀ ಯೋಜನೆಯಿಂದ ಆರ್ಥಿಕ ಸ್ವಾವಲಂಬನೆ, ಅನ್ನಭಾಗ್ಯದಡಿ ಬಡ ಕುಟುಂಬಗಳು ನೆಮ್ಮದಿ ಕಾಣುತ್ತಿವೆ. ಯುವನಿಧಿಯಿಂದ ವಿದ್ಯಾರ್ಥಿಗಳಿಗೆ ಸಹಾಯವಾಗುತ್ತಿದೆ. ಗೃಹಜ್ಯೋತಿಯಡಿ ವಿದ್ಯುತ್ ಹಣ ಉಳಿತಾಯವಾಗುತ್ತಿದೆ. ಒಟ್ಟಿನಲ್ಲಿ ಸರ್ಕಾರ ಬಡವರ ಪರವಾಗಿದೆ ಎಂದರು.
ಜಿಲ್ಲೆಯ ಅಭಿವೃದ್ಧಿಗೂ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ಚಾಮರಾಜನಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಸಮುದಾಯ ಭವನಗಳು, ರಸ್ತೆಗಳ ಪ್ರಗತಿಗಾಗಿ ೧೦೦.೬೨ ಕೋಟಿ ರು. ವೆಚ್ಚದಲ್ಲಿ ಗುದ್ದಲಿಪೂಜೆ ನೆರವೇರಿಸಲಾಗಿದೆ. ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸಲು ತಾಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸಲಾಗುತ್ತಿದೆ. ರೈತರಿಗೂ ಇದರಿಂದ ಅನುಕೂಲವಾಗಿದೆ. ಕೆಲ್ಲಂಬಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ೨೦ರಿಂದ ೩೦ ಸಾವಿರ ಜನರಿಗೆ ಕೆಲಸ ದೊರೆತಿದೆ. ಜಿಲ್ಲೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ವೈದ್ಯಕೀಯ, ಇಂಜಿನಿಯರಿಂಗ್, ಕಾನೂನು ಕಾಲೇಜುಗಳನ್ನು ತೆರೆಯಲಾಗಿದೆ. ತಾಲೂಕಿನ ಜನತೆ ಬಾಲ್ಯವಿವಾಹಕ್ಕೆ ಆದ್ಯತೆ ನೀಡದೇ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ. ಸರ್ಕಾರದ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕರಾದ ಪುಟ್ಟರಂಗಶೆಟ್ಟಿ ಸಲಹೆ ಮಾಡಿದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು ಮಾತನಾಡಿ, ಗ್ಯಾರಂಟಿ ಯೋಜನೆಗಳಲ್ಲಿ ಚಾಮರಾಜನಗರ ಜಿಲ್ಲೆ ಮುನ್ನಡೆ ಸಾಧಿಸಿರುವುದು ಸಂತಸದಾಯಕ ವಿಚಾರವಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಚಾಮರಾಜನಗರ ತಾಲೂಕು ಅಧ್ಯಕ್ಷ ಸೋಮೇಶ್ವರ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ಕೆಲ ತಾಂತ್ರಿಕ ತೊಡಕುಗಳು ಎದುರಾಗಿದೆ. ಕೆಲ ಫಲಾನುಭವಿಗಳು ತೆರಿಗೆ ಕಟ್ಟದಿದ್ದರೂ ತೆರಿಗೆದಾರರೆಂದು ಪ್ರದರ್ಶಿತವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.ಪಂಚ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಯೋಜನೆಗಳಿಂದ ತಮಗಾಗಿರುವ ಪ್ರಯೋಜನ ಬಗ್ಗೆ ಅನಿಸಿಕೆಗಳನ್ನು ಕಾರ್ಯಕ್ರಮದಲ್ಲಿ ಹಂಚಿಕೊಂಡರು.
ಹರದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷೆ ಯಶೋಧಮ್ಮ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಿರಿಧರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಮಾದಾಪುರ ಕುಮಾರ್, ಮೂಡಹಳ್ಳಿ ರಾಜೇಶ್, ಗಣೇಶ್ ಕುಮಾರ್, ಮಂಜುಳ, ಮರಿಯಾಲದಹುಂಡಿ ಕುಮಾರ್, ರಾಜು, ರಮೇಶ್, ಮಲ್ಲಿಕಾರ್ಜುನ, ಚಿನ್ನಸ್ವಾಮಿ, ಜಡೆಯಪ್ಪ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.