ವಿದ್ಯಾರ್ಥಿಗಳಿಗೆ ಪುನರ್ ಮನನಕ್ಕೆ ಮಾರ್ಗದರ್ಶನ ನೀಡಿ​: ಬಸವರಾಜು

| Published : Feb 18 2024, 01:31 AM IST

ವಿದ್ಯಾರ್ಥಿಗಳಿಗೆ ಪುನರ್ ಮನನಕ್ಕೆ ಮಾರ್ಗದರ್ಶನ ನೀಡಿ​: ಬಸವರಾಜು
Share this Article
  • FB
  • TW
  • Linkdin
  • Email

ಸಾರಾಂಶ

ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮಪಡಿಸುವ ಸಂಬಂಧ ಹೊಳಲ್ಕೆರೆ ಪಟ್ಟಣದ ಎಂ.ಎಂ.ಪ್ರೌಢಶಾಲೆಗೆ ಡಯಟ್ ಉಪನ್ಯಾಸಕ ಎಸ್.ಬಸವರಾಜು ಭೇಟಿ ನೀಡಿ 2023ರ ಫಲಿತಾಂಶ ವಿಶ್ಲೇಷಣೆ ಹಾಗೂ ಶಿಕ್ಷಕರ ಕ್ರಿಯಾಯೋಜನೆಯನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಹೊಳಲ್ಕೆರೆ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲು ಕಲಿತ ವಿಷಯವನ್ನು ಪುನರ್ ಮನನ ಮಾಡಿಕೊಳ್ಳುವಂತೆ ಶಿಕ್ಷಕರು ಮಾರ್ಗದರ್ಶನ ಮಾಡಬೇಕು ಎಂದು ಡಯಟ್ ಉಪನ್ಯಾಸಕ ಎಸ್.ಬಸವರಾಜು ಸಲಹೆ ನೀಡಿದರು.

ಪಟ್ಟಣದ ಎಂ.ಎಂ. ಸರ್ಕಾರಿ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮ ಪಡಿಸುವ ಸಂಬಂಧ ಭೇಟಿ ನೀಡಿ 2023ರ ಫಲಿತಾಂಶ ವಿಶ್ಲೇಷಣೆ ಮತ್ತು ಶಿಕ್ಷಕರ ಕ್ರಿಯಾಯೋಜನೆ ಪರಿಶೀಲಿಸಿ ಮಾತನಾಡಿದರು.

ಚಿತ್ರದುರ್ಗ ಜಿಲ್ಲೆ 2023ರಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಪ್ರಸಕ್ತ ವರ್ಷವೂ ಪ್ರಥಮ ಸ್ಥಾನ ಪಡೆಯಲು ಶಿಕ್ಷಕರು ಪೂರ್ವ ಸಿದ್ಧತೆ ಮಾಡಿ ಕೊಂಡು ಕಾರ್ಯೋನ್ಮುಖರಾಗಬೇಕು. ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಸಮನ್ವಯತೆಯಿಂದ ಎಲ್ಲಾ ವಿಷಯಗಳಲ್ಲಿ ಮಕ್ಕಳ ಕಲಿಕಾ ಸಾಮರ್ಥ್ಯ ಗುರುತಿಸಿ ಕ್ಲಿಷ್ಟ ಪರಿಕಲ್ಪನೆ ಗಳಿಗೆ ಮಾರ್ಗದರ್ಶನ ಮಾಡಬೇಕು ಎಂದರು.

ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆಯ ಮಾದರಿಗಳನ್ನು ಪರಿಚಯಿಸಿ ಪ್ರಶ್ನೆಗಳ ವಿಧ, ನಿಗದಿಪಡಿಸಿರುವ ಸಮಯ, ಅಂಕಗಳ ಹಂಚಿಕೆ ಕುರಿತು ಮಾಹಿತಿ ನೀಡಬೇಕು. ಪ್ರತಿ ವಿಷಯ ದಲ್ಲಿ ಘಟಕವಾರು ಮುಖ್ಯಾಂಶಗಳನ್ನು ಟಿಪ್ಪಣಿ ಮಾಡಿಕೊಂಡು ಪನರ್ ಮನನ ಮಾಡಿಕೊಂಡು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬೇಕು ಎಂದರು.

ಎಂ.ಎಂ.ಸರ್ಕಾರಿ ಪ್ರೌಢಶಾಲೆ ಉಪ ಪ್ರಾಂಶುಪಾಲ ಗೋವಿಂದ ನಾಯ್ಕ್ ಮಾತನಾಡಿ, ಉತ್ತಮ ಫಲಿತಾಂಶ ಪಡೆಯಲು ಕ್ರಿಯಾಯೋಜನೆ ಸಿದ್ದಪಡಿಸಿಕೊಳ್ಳಲಾಗಿದೆ.ಶಿಕ್ಷಕರ ಸಭೆ, ಮನೆ ಭೇಟಿ, ವಿಶೇಷ ತರಗತಿ, ಗುಂಪು ಅಧ್ಯಯನ, ರಸಪ್ರಶ್ನೆ, ವಿಷಯಾವಾರು ಪರೀಕ್ಷೆ ನಡೆಸಿ ಮಾದರಿ ಪ್ರಶ್ನೆಪತ್ರಿಕೆ ಪರಿಚಯಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಶಿಕ್ಷಕರಾದ ಸೈಯದ್ಇನಾಯತ್, ಕುಮಾರಸ್ವಾಮಿ, ಮೈತ್ರೇಯಿ, ಭವ್ಯಾ, ಶೋಭಾ, ಮಾರುತಿ ಮತ್ತಿತರರಿದ್ದರು.