ಕರ ವಸೂಲಿ ಸೇರಿದಂತೆ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಹಳಿಯಾಳ ತಾಪಂ ಅತ್ಯುತ್ತಮ ಸಾಧನೆಯನ್ನು ಮಾಡಿದ್ದು, ಜಿಲ್ಲೆಯ ಎಲ್ಲಾ ತಾಲೂಕಗಳಿಗೆ ಮಾದರಿಯಾಗಿದೆ.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕಕನ್ನಡಪ್ರಭ ವಾರ್ತೆ ಹಳಿಯಾಳ
ಕರ ವಸೂಲಿ ಸೇರಿದಂತೆ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಹಳಿಯಾಳ ತಾಪಂ ಅತ್ಯುತ್ತಮ ಸಾಧನೆಯನ್ನು ಮಾಡಿದ್ದು, ಜಿಲ್ಲೆಯ ಎಲ್ಲಾ ತಾಲೂಕಗಳಿಗೆ ಮಾದರಿಯಾಗಿದೆ ಎಂದು ಉತ್ತರ ಕನ್ನಡ ಜಿಪಂ ಯೋಜನಾ ನಿರ್ದೇಶಕ ಕರೀಂ ಬಸದಿ ಮೆಚ್ಚುಗೆ ವ್ಯಕ್ತಪಡಿಸಿದರು.ಮಂಗಳವಾರ ಹಳಿಯಾಳ ತಾಲೂಕಿಗೆ ಭೇಟಿ ನೀಡಿದ ಅವರು ತಾಪಂ ಸಭಾ ಭವನದಲ್ಲಿ ಆಯೋಜಿಸಿದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ತಾಲೂಕಿನಲ್ಲಿ ಕೆಲವು ಗ್ರಾಪಂಗಳು ಕಡಿಮೆ ಮಾನವ ದಿನಗಳ ಸೃಜನೆ ಹಾಗೂ ಇಕೆವೈಸಿಯಲ್ಲಿ ನಿರೀಕ್ಷೆಗಿಂತ ಕಡಿಮೆ ಪ್ರಗತಿ ಸಾಧಿಸಿರುವುದು ಕಂಡು ಬಂದಿದೆ. ಮುಂಬರುವ ದಿನಗಳಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಬೇಕೆಂದು ಕರೆ ನೀಡಿದರು.ಜುಲೈ ತಿಂಗಳಿನಿಂದ ಈ ಯೋಜನೆಯ ಮರುನಾಮಕರಣವಾಗುತ್ತಿರುವುದರಿಂದ, ಈ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸಬೇಕೆಂದು ಸೂಚಿಸಿದರು.
ತಾಪಂ ಇಒ ವಿಲಾಸರಾಜ್ ಪ್ರಸನ್ನ, ಸಹಾಯಕ ನಿರ್ದೇಶಕ ಅನುಪಮ ಬೆನ್ನೂರ, ತಾಲೂಕಿನ ಎಲ್ಲಾ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳು, ನರೇಗಾ ಹಾಗೂ ಎನ್.ಆರ್.ಎಲ್.ಎಂ ಸಿಬ್ಬಂದಿ ಉಪಸ್ಥಿತರಿದ್ದರು.ಗ್ರಾಮೀಣ ಭಾಗಗಳಿಗೆ ಭೇಟಿ:
ಸಭೆಯ ನಂತರ ಗ್ರಾಮೀಣ ಸಂಚಾರ ಕೈಗೊಂಡ ಅವರು ಯಡೋಗಾ ಹಾಗೂ ಬಿ.ಕೆ. ಹಳ್ಳಿ ಗ್ರಾಪಂಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಡತ ಪರಿಶೀಲಿಸಿದರು. ಯಡೋಗಾ ಗ್ರಾಪಂಯು ಇಕೆವೈಸಿಯಲ್ಲಿ ಅತ್ಯಂತ ಕಡಿಮೆ ಪ್ರಗತಿ ಸಾಧಿಸಿದ್ದು ಅಭಿಯಾನ ಹಮ್ಮಿಕೊಂಡು ಪ್ರಗತಿ ಸಾಧಿಸುವಂತೆ ಸೂಚಿಸಿದರು.