ಹಾನಗಲ್ಲ ಪ್ರಕರಣ ಅಲ್ಪಸಂಖ್ಯಾತರ ತುಷ್ಟೀಕರಣದ ಮುಂದುವರಿದ ಭಾಗ: ವಿಜಯೇಂದ್ರ ಆರೋಪ

| Published : Jan 15 2024, 01:46 AM IST

ಹಾನಗಲ್ಲ ಪ್ರಕರಣ ಅಲ್ಪಸಂಖ್ಯಾತರ ತುಷ್ಟೀಕರಣದ ಮುಂದುವರಿದ ಭಾಗ: ವಿಜಯೇಂದ್ರ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಅಲ್ಪಸಂಖ್ಯಾತರನ್ನು ತುಷ್ಟೀಕರಣಗೊಳಿಸುವ ಮನಸ್ಥಿತಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ ಮುಚ್ಚಿಹಾಕುವ ಎಲ್ಲ ರೀತಿಯ ಪ್ರಯತ್ನ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಬ್ಯಾಡಗಿ

ಅಲ್ಪಸಂಖ್ಯಾತರನ್ನು ತುಷ್ಟೀಕರಣಗೊಳಿಸುವ ಮನಸ್ಥಿತಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ ಮುಚ್ಚಿಹಾಕುವ ಎಲ್ಲ ರೀತಿಯ ಪ್ರಯತ್ನ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ತಾಲೂಕಿನ ಚಿಕ್ಕಬಾಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮುದಾಯದ ಮಹಿಳೆಯಾಗಿದ್ದರೂ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ರಾಜ್ಯದ ಸರ್ಕಾರದ ಪೊಲೀಸ್ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಇದರಿಂದ ರಾಜ್ಯದ ಜನತೆ ತಲೆ ತಗ್ಗಿಸುವಂತಾಗಿದೆ ಎಂದರು.

ತುಷ್ಟೀಕರಣದ ಮುಂದುವರಿದ ಭಾಗ: ಹಾನಗಲ್ಲನಲ್ಲಿ ಇತ್ತೀಚೆಗೆ ಮೆರವಣಿಗೆ ಸ್ಥಗಿತಗೊಳಿಸಿದ್ದು, ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ (ರಾಮಭಕ್ತನ) ವಿರುದ್ಧ ಪೊಲೀಸ್ ದೌರ್ಜನ್ಯ ಹಾಗೂ ಇಂದಿನ ಗ್ಯಾಂಗ್‌ರೇಪ್ ಪ್ರಕರಣಗಳು ಅಲ್ಪಸಂಖ್ಯಾತರ ತುಷ್ಟೀಕರಣದ ಮುಂದುವರಿದ ಭಾಗವಾಗಿವೆ ಎಂದರು.

ಘಟನೆ ನಡೆದು ನಾಲ್ಕೈದು ದಿನಗಳಾದರೂ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ಆಗಿಲ್ಲ. ವಿಡಿಯೋ ಹೊರಬಂದ ಬಳಿಕವಷ್ಟೇ ಎಫ್‌ಐಆರ್ ಹಾಗೂ ಇತರ ಕೆಲಸ ನಡೆಯುತ್ತಿದ್ದು, ಒಂದು ಸಮುದಾಯದ ಯುವಕರಿಗೆ ನಾವು ಏನು ಮಾಡಿದರೂ ನಮಗೆ ರಕ್ಷಣೆ ಸಿಗಲಿದೆ ಎಂಬ ಮೌಖಿಕ ಸಂದೇಶಗಳು ರವಾನೆಯಾಗುತ್ತಿದೆ. ನಾಳೆಯ ದಿವಸ ಇನ್ನೂ ಏನೇನು ನಡೆಯುತ್ತವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದರು.

ಜಿಲ್ಲೆಯಲ್ಲಿ ಪೊಲೀಸ್ ವೈಫಲ್ಯ: ಹಾವೇರಿ ಜಿಲ್ಲೆಯಲ್ಲಿ ಪೊಲೀಸ್ ವ್ಯವಸ್ಥೆ ವೈಫಲ್ಯತೆ ಕಂಡು ಬರುತ್ತದೆ. ಕೂಡಲೇ ಸಂಬಂಧಿಸಿದ ಠಾಣೆಯ ಇನ್‌ಸ್ಪೆಕ್ಟರ್ ಅವರನ್ನು ಅಮಾನತುಗೊಳಿಸುವ ಮೂಲಕ ನೈತಿಕ ಪೊಲೀಸ್‌ಗಿರಿ ನೆಪದಲ್ಲಿ ಆಗುತ್ತಿರುವ ಅನಾಹುತಗಳಿಗೆ ರಾಜ್ಯ ಸರ್ಕಾರ ಉತ್ತರಿಸಬೇಕಾಗಿದೆ ಎಂದರು.

ಸಂತ್ರಸ್ತೆಗೆ ಶಾಸಕ ಬಸವರಾಜ ಶಿವಣ್ಣನವರ ಸಾಂತ್ವನ:

ಇಲ್ಲಿಯ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಗ್ಯಾಂಗ್‌ ರೇಪ್‌ ಪ್ರಕರಣದ ಸಂತ್ರಸ್ತೆಗೆ ಬ್ಯಾಡಗಿ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣನವರ ಸಾಂತ್ವನ ಹೇಳಿ ₹೫೦ ಸಾವಿರ ನೆರವಿನ ಚೆಕ್ ನೀಡಿ ಧೈರ್ಯ ತುಂಬಿದರು.

ಶನಿವಾರ ಮಹಿಳಾ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮಹಿಳೆಗೆ ಪರಿಹಾರ ನೀಡುವ ಜತೆಗೆ ಧೈರ್ಯದಿಂದ ಇರುವಂತೆ ಹೇಳಿದ್ದೇವೆ. ಈ ಘಟನೆ ನಡೆದಿರುವುದು ಬಹಳ ನೋವಿನ ಸಂಗತಿಯಾಗಿದೆ. ಸರಿಯಾದ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಪೊಲೀಸರು ಈಗಾಗಲೇ ಕೆಲವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುತ್ತಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದರು.

ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ರೀತಿಯ ಘಟನೆಗಳು ಮರುಕಳಿಸಬಾರದು, ತಪ್ಪಿತಸ್ಥರು ಯಾರೇ ಆಗಲಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇತರರು ಇದ್ದರು.