ಉಡುಪಿ: ಚಾಮರಾಜನಗರದಲ್ಲಿ ನಡೆದಿರುವ ಅಮಾನವೀಯ ಘಟನೆ ಗಂಭೀರ ಹಾಗೂ ಖಂಡನೀಯವಾಗಿದೆ. ನಕಲಿ ಎನ್‌ಕೌಂಟರ್ ಮೂಲಕ ಕ್ರೈಸ್ತರ ಮಾರಣ ಹೋಮ ಮಾಡಿದ ಕಾಂಗ್ರೆಸ್ ಸರ್ಕಾರ ಎಂಬ ಗಂಭೀರ ಆರೋಪಗಳ ಕುರಿತು ಸರ್ಕಾರ ತಕ್ಷಣ ಉತ್ತರಿಸಬೇಕು. ಪ್ರಕರಣವನ್ನು ಇಲಾಖೆಯ ಆಂತರಿಕ ತನಿಖೆಗೆ ಸೀಮಿತಗೊಳಿಸದೆ, ಕರ್ನಾಟಕ ಹೈಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ಅಥವಾ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ ಆಗ್ರಹಿಸಿದ್ದಾರೆ.

ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಪಟ್ಟ ಅರಣ್ಯ ಅಧಿಕಾರಿಗಳನ್ನು ತಕ್ಷಣ ವಜಾಗೊಳಿಸಬೇಕು. ಎನ್‌ಕೌಂಟರ್‌ನಲ್ಲಿ ನೇರವಾಗಿ ಭಾಗಿಯಾಗಿರುವ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅರಣ್ಯ ಸಚಿವರು ಈ ಘಟನೆಯ ನೈತಿಕ ಹೊಣೆಗಾರಿಕೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕ್ರೈಸ್ತ ಸಮುದಾಯದ ಮುಖಂಡರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕ್ರೈಸ್ತ ಅಭಿವೃದ್ಧಿ ನಿಗಮದ ಸದಸ್ಯ ಪ್ರಶಾಂತ್ ಜತ್ತನ್ನ ಅವರು ಕ್ರಿಶ್ಚಿಯನ್ ವ್ಯಕ್ತಿಗಳ ನರಮೇಧ ನಡೆದರೂ ಘಟನೆಯನ್ನು ಖಂಡಿಸದೆ ಮೌನ ವಹಿಸಿರುವುದು ನಾಚಿಕೆಗೇಡು. ಸರಕಾರ ತಪ್ಪಿತಸ್ಥರ ವಿರುದ್ಧ ತಕ್ಷಣ ಕೊಲೆ ಪ್ರಕರಣ ದಾಖಲಿಸಿ, ಸ್ವತಂತ್ರ ನ್ಯಾಯಾಂಗ ಅಥವಾ ಸಿಬಿಐ ತನಿಖೆ ನಡೆಸಿ ಕಾನೂನಾತ್ಮಕ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.