ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಕಾಂಟೋನ್ಮೆಂಟ್ ವಸತಿ ಪ್ರದೇಶಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ವರ್ಗಾಯಿಸುವ ಕುರಿತಂತೆ ನಡೆಯುಲಿರುವ ಜಂಟಿ ಸಮೀಕ್ಷೆಗೂ ಮುಂಚೆ ಅಗತ್ಯ ದಾಖಲೆಗಳನ್ನು ಕ್ರೋಡೀಕರಣ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಕಾಂಟೋನ್ಮೆಂಟ್ ವಸತಿ ಪ್ರದೇಶವನ್ನು ಮಹಾನಗರ ಪಾಲಿಕೆಗೆ ಹಸ್ತಾಂತರ ಕುರಿತ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾಂಟೋನ್ಮೆಂಟ್ ವಸತಿಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ ಪ್ರಕ್ರಿಯೆ ಕ್ಲಿಷ್ಟಕರವಾದ ಕಾರ್ಯವಾಗಿದ್ದು, ಈ ಪ್ರಕ್ರಿಯೆಯಲ್ಲಿ ಸಮಿತಿಯ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕಾರ್ಯವನ್ನು ಪಾರದರ್ಶಕವಾಗಿ ನಿರ್ವಹಿಸುವಂತೆ ತಿಳಿಸಿದರು.
ಶಾಸಕ ರಾಜು(ಆಸೀಫ್) ಸೇಠ ಮಾತನಾಡಿ, ಕಾಂಟೋನ್ಮೆಂಟ್ ವಸತಿ ಪ್ರದೇಶ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸಮಿತಿಯ, ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಹಸ್ತಾಂತರ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.ಸಭೆಯಲ್ಲಿ ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ದಿನೇಶ ಕುಮಾರ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಉಪ ಆಯುಕ್ತೆ ರೇಷ್ಮಾ ತಾಳಿಕೋಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ ಸೇರಿದಂತೆ ಕಾಂಟೋನ್ಮೆಂಟ್, ವಿವಿಧ ಇಲಾಖೆ ಅಧಿಕಾರಿಗಳು, ಸಲಹಾ ಸಮಿತಿ ಸದಸ್ಯರು ಹಾಜರಿದ್ದರು.----ಹೇಳಿಕೆ---
ಕಾಂಟೋನ್ಮೆಂಟ್ ಪ್ರದೇಶಗಳಲ್ಲಿನ ವಾಸಿಸುವ ಸಾರ್ವಜನಿಕರು ತಮ್ಮ ಹಳೆಯ ಕಟ್ಟಡಗಳ ಮೇಲೆ ಮಾಲೀಕತ್ವ ಹೊಂದಿದ್ದು, ಭೂಮಿಯ ಮೇಲೆ ಮಾಲೀಕತ್ವ ಹೊಂದಿರುವ ಕುರಿತು ದಾಖಲೆ ಹೊಂದಿಲ್ಲ. ನಾಗರಿಕ ಸೌಲಭ್ಯ ಒದಗಿಸುವ ರಸ್ತೆ, ಉದ್ಯಾನವನ, ಧಾರ್ಮಿಕ ಸ್ಥಳಗಳನ್ನು ಗುರುತಿಸಿದ ಜಾಗವನ್ನು ಮಹಾನಗರ ಪಾಲಿಕೆಗೆ ಉಚಿತವಾಗಿ ಹಸ್ತಾಂತರಿಸಿಕೊಳ್ಳಲು ಕ್ರಮ ಜರುಗಿಸಬೇಕು. ಈ ಕುರಿತು ಜಂಟಿ ಸಮೀಕ್ಷೆ ಜರುಗಿಸಿ ವರದಿ ಸಲ್ಲಿಸಲು ತಿಳಿಸಿದರು.ಮುಂದಿನ ಸಭೆಯಲ್ಲಿ ಕಾಂಟೋನ್ಮೆಂಟ್ ವಸತಿ ಪ್ರದೇಶ ಹಸ್ತಾಂತರದ ವಿಷಯವನ್ನು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಇತ್ಯರ್ಥಪಡಿಸಲಾಗುವುದು.
- ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿ