ಪ್ರೀತಿ ಹೆಸರಿನಲ್ಲಿ ನೀಡುತ್ತಿದ್ದ ಕಿರುಕುಳ ತಾಳಲಾರದೆ ತಾಲೂಕಿನ ಬೆಳಮಕ್ಕಿ ಮೂಲದ ವಾಣಿಶ್ರೀ(೨೨) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಂಗಳೂರಿನಲ್ಲಿ ನಡೆದಿದೆ.

ಕನ್ನಡಪ್ರಭ ವಾರ್ತೆ ಸಾಗರ

ಪ್ರೀತಿ ಹೆಸರಿನಲ್ಲಿ ನೀಡುತ್ತಿದ್ದ ಕಿರುಕುಳ ತಾಳಲಾರದೆ ತಾಲೂಕಿನ ಬೆಳಮಕ್ಕಿ ಮೂಲದ ವಾಣಿಶ್ರೀ(೨೨) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಂಗಳೂರಿನಲ್ಲಿ ನಡೆದಿದೆ.

ಸಹಪಾಠಿಯೊಬ್ಬ ಪ್ರೀತಿ ಹೆಸರಲ್ಲಿ ಮಾನಸಿಕವಾಗಿ ಕಿರುಕುಳ ನೀಡುತ್ತಾ ಬ್ಲಾಕ್ ಮೇಲ್ ಮಾಡುತ್ತಿದ್ದ. ಇದರಿಂದ ಬೇಸತ್ತು ಬೆಂಗಳೂರಿನ ಎಚ್ಎಸ್ಆರ್ ಲೇಔಟ್‌ನಲ್ಲಿರುವ ಅಗ್ರ ಕೆರೆಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುಮಾರು ಒಂದು ವರ್ಷದ ಹಿಂದೆ ವಾಣಿ ಉದ್ಯೋಗ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದು, ನಗರದ ಪ್ರಸಿದ್ಧ ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ಸ್ವಾವಲಂಬಿ ಜೀವನ ನಡೆಸುತ್ತಿದ್ದಳು.

ಈಕೆ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್‌ನೋಟ್ ಬರೆದಿದ್ದು, ಅದರಲ್ಲಿ ನನ್ನ ಸಾವಿಗೆ ಅಳೂರು ಸ್ವಾಮಿ ಅವರ ಪುತ್ರ ಅಭಿಷೇಕ್ ಎಂಬಾತನೇ ನೇರ ಕಾರಣ ಎಂದು ಉಲ್ಲೇಖಿಸಿದ್ದಾಳೆ. ಕಾಲೇಜು ದಿನಗಳಲ್ಲಿ ವಾಣಿಶ್ರೀ ಹಾಗೂ ಆರೋಪಿ ಅಭಿಷೇಕ್ ಸ್ನೇಹದಲ್ಲಿದ್ದರು. ಅದನ್ನೇ ಇಟ್ಟುಕೊಂಡು ಅಭಿಷೇಕ್, ಯುವತಿಯ ವಾಟ್ಸ್ಯಾಪ್‌ಗೆ ಹಳೆಯ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದ್ದು, ರೂಮಿಗೆ ಬಾ ಎಂದು ವಿಕೃತವಾಗಿ ಪೀಡಿಸುತ್ತಿದ್ದ ಎಂದು ಯುವತಿ ಡೆತ್ ನೋಟ್‌ನಲ್ಲಿ ಬರೆದಿದ್ದಾಳೆ.

ಅಭಿಷೇಕ್ ನೀಡುತ್ತಿದ್ದ ಮಾನಸಿಕ ಹಿಂಸೆಯನ್ನು ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ವಿಷಯ ಹೊರಬಂದರೆ ತನ್ನ ಕುಟುಂಬದ ಮರ್ಯಾದೆ ಹೋಗುತ್ತದೆ ಎಂಬ ಭೀತಿಯಿಂದ ಯುವತಿ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾಳೆ. ``ನನ್ನ ಸಾವಿಗೆ ಕಾರಣನಾದ ಅಭಿಷೇಕ್‌ಗೆ ಕಠಿಣ ಶಿಕ್ಷೆಯಾಗಬೇಕು ಎಂದು ಡೆತ್ ನೋಟ್‌ನಲ್ಲಿ ಯುವತಿ ಆಕ್ರೋಶ ಹೊರಹಾಕಿದ್ದಾಳೆ.

ಘಟನಾ ಸ್ಥಳಕ್ಕೆ ಧಾವಿಸಿದ ಎಚ್ಎಸ್ಆರ್ ಲೇಔಟ್ ಪೊಲೀಸರು ಯುವತಿಯ ಮೃತದೇಹವನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಲಭ್ಯವಿರುವ ಡೆತ್ ನೋಟ್ ಹಾಗೂ ಮೊಬೈಲ್ ಚಾಟ್‌ಗಳ ಆಧಾರದ ಮೇಲೆ ತಲೆಮರೆಸಿಕೊಂಡಿರುವ ಆರೋಪಿ ಅಭಿಷೇಕ್ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.