ಸಾರಾಂಶ
ಚನ್ನಪಟ್ಟಣದಲ್ಲಿ ನೂತನ ಶಾಸಕರು ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ಕಿರುಕುಳ ನೀಡಿದರೆ ಕೈಕಟ್ಟಿ ಕೂರುವ ಜಾಯಾಮಾನ ನಮ್ಮದಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಂದು ಕಿಡಿಕಾರಿದ್ದಾರೆ.
ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ನೂತನ ಶಾಸಕರು ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ಕಿರುಕುಳ ನೀಡಿದರೆ ಕೈಕಟ್ಟಿ ಕೂರುವ ಜಾಯಾಮಾನ ನಮ್ಮದಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ ಪಕ್ಷಗಳ ಕಾರ್ಯಕರ್ತರು ಚನ್ನಪಟ್ಟಣದಲ್ಲಿ ಜೆಡಿಎಸ್ ಮುಖಂಡರಿಗೆ ಕಿರುಕುಳ ನೀಡುವುದು ಅಕ್ಷಮ್ಯ. ಪ್ರಜಾಪ್ರಭುತ್ವದಲ್ಲಿ ಇಂತಹ ನಡೆ ಒಳ್ಳೆಯದಲ್ಲ, ಅದನ್ನು ಸಹಿಸುವುದೂ ಇಲ್ಲ. ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ನೂತನ ಶಾಸಕರು ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿದ್ದಾರೆ. ಇದನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ. ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುವ ಯಾವುದೇ ಇಲಾಖೆಯ ಅಧಿಕಾರಿಗಳು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆದರಿಸುವ ರಾಜಕೀಯಕ್ಕೆ ಬಗ್ಗಲ್ಲ: ಶಾಸಕರು ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಬೇಕು, ಕೊಟ್ಟ ಭರವಸೆಗಳನ್ನು ಈಡೇರಿಸಬೇಕು. ಅದು ಬಿಟ್ಟು ಜೆಡಿಎಸ್ ಕಾರ್ಯಕರ್ತರನ್ನು ಮುಗಿಸುತ್ತೇನೆ, ದಮನ ಮಾಡುತ್ತೇನೆ ಎನ್ನುವುದು ಅಹಂಕಾರ. ನಮ್ಮ ಕಾರ್ಯಕರ್ತರನ್ನು ರಕ್ಷಣೆ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ನಾನು ನ್ಯಾಯದಲ್ಲಿ ನಂಬಿಕೆ ಇರಿಸಿದ್ದೇನೆ. ಚನ್ನಪಟ್ಟಣ ಹಾಗೂ ರಾಜ್ಯದ ಜನತೆಯ ಪರವಾಗಿ ಸದಾ ಇರುತ್ತೇನೆ. ಅವರಿಗಾಗಿ ದುಡಿಯುತ್ತೇನೆ. ಹೆದರಿಸಿ, ಬೆದರಿಸುವ ರಾಜಕೀಯಕ್ಕೆ ಬಗ್ಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ, ಇಡೀ ಪಕ್ಷವಿದೆ. ಒಟ್ಟಾಗಿ ಹೋರಾಟ ಮಾಡೋಣ ಎಂದು ತಿಳಿಸಿದ್ದಾರೆ.