ಸಾರಾಂಶ
ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ ಬೇಲೂರಿನ ಹೊಯ್ಸಳ ನಗರದ ಬಡಾವಣೆಯಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಬೇಲೂರು : ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ ಬೇಲೂರಿನ ಹೊಯ್ಸಳ ನಗರದ ಬಡಾವಣೆಯಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಪಟ್ಟಣದ ನೆಹರೂ ನಗರ ಜಿಎಸ್ಇಎಸ್ ಶಾಲೆಯ ಚಿಕ್ಕಮ್ಮ ಅವರು ಟೈಲರ್ ನವೀನ್ ಅವರ ಮನೆಗೆ ಸಮೀಕ್ಷೆಗೆ ಹೋದ ಸಂದರ್ಭದಲ್ಲಿ ಬೀದಿ ನಾಯಿ ಚಿಕ್ಕಮ್ಮನವರ ಮೇಲೆ ದಾಳಿ ನಡೆಸಿ, ಕೆನ್ನೆ, ಕಿವಿ, ತೊಡೆ ಹಾಗೂ ಹೊಟ್ಟೆ ಭಾಗದಲ್ಲಿ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ. ಪತಿ ಶಿವಕುಮಾರ್, ಪತ್ನಿಯನ್ನು ಬಿಡಿಸಲು ಹೋದ ಸಮಯದಲ್ಲಿ ಅವರಿಗೂ ನಾಯಿ ಕಚ್ಚಿದ್ದು, ಅವರಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ, ಇದೇ ನಾಯಿ, ಇತರ ನಾಯಿಗಳ ಜೊತೆ ಸೇರಿಕೊಂಡು ಜೈ ಭೀಮ್ ನಗರದ ಬೀದಿಯಲ್ಲಿ ಆಟವಾಡುತ್ತಿದ್ದ ಕಿಶನ್ ಎಂಬ 5 ವರ್ಷದ ಬಾಲಕ, ಆತನ ತಾತ ಧರ್ಮಯ್ಯ ಹಾಗೂ ಜೊತೆಯಲ್ಲಿದ್ದ ಸಚಿನ್, ಪೃಥ್ವಿ ಎಂಬುವರಿಗೆ ಕಚ್ಚಿದೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಒಂದು ನಾಯಿಯನ್ನು ಹೊಡೆದು ಸಾಯಿಸಿದ್ದಾರೆ.
ವಿಷಯ ತಿಳಿದು ಶಾಸಕ ಎಚ್.ಕೆ.ಸುರೇಶ್ ಹಾಗೂ ದಂಡಾಧಿಕಾರಿ ಶ್ರೀಧರ್ ಕಂಕನವಾಡಿ, ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಪಟ್ಟಣದಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಅವುಗಳನ್ನು ಹಿಡಿದು ಬೇರೆಡೆ ಸಾಗಿಸಲು ಪುರಸಭೆ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.