ಮುಂಗಾರು ಹಂಗಾಮು ಆರಂಭವಾದರೂ ಮಳೆಯಿಲ್ಲದೇ ಬಿತ್ತನೆ ಮಾಡಿದ ಬೆಳೆಗಳು ಒಣಗುವ ಆತಂಕ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿ ದೇವರ ಮೊರೆ ಹೋದರು.
ಹಾವೇರಿ: ಮುಂಗಾರು ಹಂಗಾಮು ಆರಂಭವಾದರೂ ಮಳೆಯಿಲ್ಲದೇ ಬಿತ್ತನೆ ಮಾಡಿದ ಬೆಳೆಗಳು ಒಣಗುವ ಆತಂಕ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿ ದೇವರ ಮೊರೆ ಹೋದರು.ನಗರದಲ್ಲಿ ಮಂಗಳವಾರ ವೀರಭದ್ರೇಶ್ವರ ಸ್ವಾಮಿ, ಗ್ರಾಮದೇವತೆ ದ್ಯಾಮವ್ವ ದೇವಿ ಹಾಗೂ ಬಸವಣ್ಣನ ಮೂರ್ತಿಗಳನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ವಿಶೇಷ ಮೆರವಣಿಗೆ ನಡೆಸಲಾಯಿತು. ವಿವಿಧ ಕಲಾತಂಡಗಳೊಂದಿಗೆ ನಡೆದ ಮೆರವಣಿಗೆಯಲ್ಲಿ ನೂರಾರು ಭಕ್ತರು ಭಾಗವಹಿಸಿ, ಉತ್ತಮ ಮಳೆಯಾಗುವಂತೆ ಪ್ರಾರ್ಥಿಸಿದರು.ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ಮೆಕ್ಕೆಜೋಳ, ಸೋಯಾಬಿನ್, ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಬಾಡುತ್ತಿವೆ. ಈಗಾಗಲೇ ಬಿತ್ತನೆ ಕಾರ್ಯ ಪೂರ್ಣಗೊಳಿಸಿರುವ ರೈತರು ಮಳೆಯ ಅಭಾವದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಬರಗಾಲದ ಛಾಯೆ ಆವರಿಸುವ ಆತಂಕ ಎದುರಿಸುತ್ತಿದ್ದಾರೆ.ಸುಮಾರು 13 ವರ್ಷಗಳ ಬಳಿಕ ಜಿಲ್ಲೆಯಲ್ಲಿ ಮತ್ತೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗುವ ಲಕ್ಷಣಗಳು ಕಾಣಿಸುತ್ತಿವೆ. ಹೀಗಾಗಿ ವರುಣ ದೇವನಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥನೆ ನಡೆಸಲಾಯಿತು ಎಂದು ರೈತರು ಹೇಳಿದರು.ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪಲ್ಲಕ್ಕಿ ಉತ್ಸವವು ಕೊನೆಗೆ ಹೆಗ್ಗೇರಿ ಕೆರೆಯ ತಟದಲ್ಲಿ ಗಂಗೆ ಪೂಜೆಯೊಂದಿಗೆ ಸಮಾಪ್ತಿಗೊಂಡಿತು. ಈ ವೇಳೆ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗಿ ಬೆಳೆಗಳು ಉಳಿಯಲಿ ಹಾಗೂ ರೈತರ ಬದುಕು ಸುಧಾರಿಸಲಿ ಎಂದು ಭಕ್ತರು ಪ್ರಾರ್ಥಿಸಿದರು.ಮಳೆ ಇನ್ನೂ ಕೆಲ ದಿನಗಳವರೆಗೆ ಕೈಕೊಟ್ಟರೆ ಬೆಳೆ ನಷ್ಟ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಗಾಗಿ ಪೂಜೆ, ಹೋಮ-ಹವನ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಸಲಾಗುತ್ತಿದೆ.