ಸಾರಾಂಶ
ಕನ್ನಡಪ್ರಭವಾರ್ತೆ ಹೊಳೆನರಸೀಪುರ ಪಟ್ಟಣದ ನಗರ ಪೊಲೀಸ್ ಠಾಣೆಗೆ ಮುಖ್ಯ ಪೇದೆಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ನಟೇಶ್ (೩೮) ಕರ್ತವ್ಯಕ್ಕೆ ಸೇರ್ಪಡೆಯಾಗುವ ಮುನ್ನವೇ ಅನಾರೋಗ್ಯದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಸಂಜೆ ನಗರ ಹೊರವಲಯದ ಗೆಂಡೆಕಟ್ಟೆ ಅರಣ್ಯದ ಬಳಿ ಘಟನೆ ನಡೆದಿದೆ. ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದವರಾದ ನಟೇಶ್, ೨೦೦೮ರಲ್ಲಿ ನಾಗರಿಕ ಪೊಲೀಸ್ ಪೇದೆಯಾಗಿ ಆಯ್ಕೆಯಾಗಿದ್ದರು. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಕಳೆದ ಒಂದು ತಿಂಗಳ ಹಿಂದೆ ಮುಖ್ಯ ಪೇದೆಯಾಗಿ ಮುಂಬಡ್ತಿ ಪಡೆದು, ಹೊಳೆನರಸೀಪುರ ವರ್ಗಾವಣೆಗೊಂಡಿದ್ದರು. ಆದರೆ ಕಳೆದ ಮೂರು ತಿಂಗಳಿಂದ ಮೂಳೆ ಕ್ಯಾನ್ಸರ್ನಿಂದ ಬಳಲುತ್ತಿದ್ದ ನಟೇಶ್, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದ್ದು, ಕಳೆದ ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ನಟೇಶ್, ಬುಧವಾರ ಸಂಜೆ ಆಸ್ಪತ್ರೆಯಿಂದ ಕಾಣೆಯಾಗಿದ್ದರು. ಬಳಿಕ ಗೆಂಡೆಕಟ್ಟೆ ಅರಣ್ಯದ ಬಳಿ ಅವರು ದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.