ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಬಿಎಲ್‌ಒ, ಮುಖ್ಯ ಶಿಕ್ಷಕಿ ಡಾ.ಎನ್.ಅಂಬಿಕಾ ರಾಜ್ಯಪಾಲ ಥಾವರ್‌ ಚಂದ್ ಗೇಹ್ಲೋಟ್, ರಾಜ್ಯ ಮುಖ್ಯಚುನಾವಣೆ ಆಯುಕ್ತ ಮಹೇಶ್ವರಾವ್, ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ರವರಿಂದ ರಾಜ್ಯಮಟ್ಟದ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿ ಪಡೆದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಎಲ್‌ಒ ಆಗಿ ಕಾರ್ಯನಿರ್ವಹಿಸಿದ ತಾಲೂಕಿನ ಡಿ.ಉಪ್ಪಾರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಮುಖ್ಯ ಶಿಕ್ಷಕಿ ಡಾ.ಎನ್.ಅಂಬಿಕಾರವರಿಗೆ ರಾಜ್ಯಮಟ್ಟದ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿ ಘೋಷಿಸಿದ್ದು, ಭಾನುವಾರ ಬೆಂಗಳೂರಿನ ಟೌನ್ ಹಾಲ್‌ನಲ್ಲಿ ನಡೆದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಲಾಯಿತು.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಮಹೇಶ್ವರಾವ್, ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮುಂತಾದವರು ಪ್ರಶಸ್ತಿ ನೀಡಿ ಗೌರವಿಸಿದರು.

ಶಿಕ್ಷಕಿ ಡಾ.ಎನ್.ಅಂಬಿಕಾ ಪ್ರಶಸ್ತಿಯನ್ನು ಪಡೆದ ಸಂತಸವನ್ನು ಪತ್ರಿಕೆಯೊಂದಿಗೆ ಹಂಚಿಕೊಂಡರು. ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ ಸಂತೃಪ್ತಿ ನನಗಿದೆ. ಜೊತೆಗೆ ಚುನಾವಣಾ ಆಯೋಗದ ಕರ್ತವ್ಯವನ್ನು ಯಶಸ್ವಿಯಾಗಿ ಮಾಡಿ ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದೇನೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿ ಆಯೋಗದ ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಿಸಿದ್ದೇನೆ. ಹಂಪಿ ವಿಶ್ವವಿದ್ಯಾಲಯದ ಅರ್ಥಶಾಸ್ತ್ರವಿಭಾಗದಲ್ಲಿ ಪಿಎಚ್‌.ಡಿ ಪದವಿ ಪಡೆದಿದ್ದು, ಇತ್ತೀಚಿಗಷ್ಟೇ ಉತ್ತಮ ಕಾರ್ಯನಿರ್ವಹಣೆಗಾಗಿ ಅಕ್ಷರ ಸಿರಿ ಪ್ರಶಸ್ತಿಯನ್ನು ಪಡೆದಿದ್ದೇನೆ. ಮತ್ತೊಮ್ಮೆ ನನಗೆ ರಾಜ್ಯಮಟ್ಟದಲ್ಲಿ ಚುನಾವಣಾ ಕಾರ್ಯಕ್ಕೆ ಪ್ರಶಸ್ತಿ ಲಭಿಸಿರುವುದು ನನ್ನ ಜವಾಬ್ದಾರಿ ಹೆಚ್ಚಿಸಿದೆ ಎಂದರು.

*ಅಭಿನಂದನೆ: ಚುನಾವಣಾ ಆಯೋಗದ ರಾಜ್ಯಮಟ್ಟದ ಪ್ರಶಸ್ತಿ ಸ್ವೀಕರಿಸಿದ ಮುಖ್ಯ ಶಿಕ್ಷಕಿ ಡಾ.ಅಂಬಿಕಾ ಅವರನ್ನು ಡಿಡಿಪಿಐ ಎಂ.ಆರ್.ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ದೊಡ್ಡೇರಿ ಸಿಆರ್‌ಪಿ ಕೆಂಚವೀರನಹಳ್ಳಿ ಮಲ್ಲೇಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷೆ ಸಣ್ಣಸೂರಮ್ಮ, ಕಾರ್ಯದರ್ಶಿ ಹನುಮಂತಪ್ಪ ಅಭಿನಂದಿಸಿದ್ದಾರೆ.