ಕನ್ನಡಪ್ರಭ ವಾರ್ತೆ ಸಕಲೇಶಪುರ

ಕಾಂಗ್ರೆಸ್ ಮುಖಂಡ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮುರಳಿ ಮೋಹನ್ ಅವರ ಜನ್ಮದಿನದ ಅಂಗವಾಗಿ ಶ್ರೀ ಮುರಳಿ ಮೋಹನ್ ಯುವ ಬ್ರಿಗೇಡ್ ವತಿಯಿಂದ, ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ (ಹಿಮ್ಸ್) ಸಹಯೋಗದಲ್ಲಿ ಬುಧವಾರ ಮೆಗಾ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.ಶಿಬಿರವನ್ನು ನೂರಾರು ಸಾರ್ವಜನಿಕರು ಸದುಪಯೋಗಪಡಿಸಿಕೊಂಡರೆ, ಯುವಕರು ಉತ್ಸಾಹದಿಂದ ರಕ್ತದಾನ ಮಾಡಿ ಮಾನವೀಯ ಸೇವೆಗೆ ಕೈಜೋಡಿಸಿದರು. ಇದರ ಜೊತೆಗೆ ಕೌಡಹಳ್ಳಿಯ ವಿಕಲಚೇತನ ಮಕ್ಕಳಿಗೆ ನೆರವು ನೀಡಲಾಯಿತು. ಪಟ್ಟಣದ ಬೀದಿಬದಿ ವ್ಯಾಪಾರಿಗಳಿಗೆ ಹಾಗೂ ಕ್ರಾಫರ್ಡ್ ಆಸ್ಪತ್ರೆಯ ಹೊರರೋಗಿಗಳಿಗೆ ಹಣ್ಣುಗಳನ್ನು ವಿತರಿಸಿ ಜನ್ಮದಿನವನ್ನು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುರಳಿ ಮೋಹನ್, ತಮ್ಮ ಜನ್ಮದಿನವನ್ನು ಸಮಾಜ ಸೇವೆಯ ಮೂಲಕ ಆಚರಿಸಿರುವ ಯುವ ಬ್ರಿಗೇಡ್ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಕಳೆದ ವರ್ಷವೂ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಬಾರಿ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.ಯುವ ಬ್ರಿಗೇಡ್ ಕಳೆದ ಒಂದು ವರ್ಷದಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಸೇರಿದಂತೆ ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದೆ. ನನ್ನ ಮೇಲೆ ಪ್ರೀತಿ, ವಿಶ್ವಾಸ ಇಟ್ಟು ಆಶೀರ್ವದಿಸಿದ ಎಲ್ಲರಿಗೂ ನಾನು ಸದಾ ಋಣಿಯಾಗಿದ್ದೇನೆ. ಯಾವುದೇ ಜಾತಿ, ಧರ್ಮ, ವರ್ಗ ಎನ್ನದೇ ಕ್ಷೇತ್ರದ ಪ್ರತಿಯೊಬ್ಬರೊಂದಿಗೆ ನಿಲ್ಲುತ್ತೇನೆ. ರೈತರು ಸೇರಿದಂತೆ ಕ್ಷೇತ್ರದ ಎಲ್ಲ ಜನರು ಸುಖ-ಸಮೃದ್ಧಿಯಿಂದ ಇರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.ಯುವ ಬ್ರಿಗೇಡ್ ಅಧ್ಯಕ್ಷ ಅರ್ಜುನ್ ಮಾತನಾಡಿ, ಮುರಳಿ ಮೋಹನ್ ಅವರ ಜನ್ಮದಿನವನ್ನು ಸಮಾಜಮುಖಿ ರೀತಿಯಲ್ಲಿ ಆಚರಿಸುವ ಉದ್ದೇಶದಿಂದ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಮೂರು ವರ್ಷಗಳಿಂದ ಯುವ ಬ್ರಿಗೇಡ್ ನಿರಂತರವಾಗಿ ಸಮಾಜ ಸೇವಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಮುಂದೆಯೂ ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು. ದಲಿತ ಮುಖಂಡ ನಲ್ಲುಲ್ಲಿ ಈರಯ್ಯ ಮಾತನಾಡಿ, ಜನ್ಮದಿನವನ್ನು ಆಡಂಬರದಿಂದ ಆಚರಿಸುವ ಬದಲು ಸಾವಿರಾರು ಜನರಿಗೆ ಉಪಯೋಗವಾಗುವ ಆರೋಗ್ಯ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳಿಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.ಸಮಾಜಸೇವಕ ವೆಂಕಟೇಶ್ ಮಾತನಾಡಿ, ಮುರಳಿ ಮೋಹನ್ ಅವರು ಎಲ್ಲ ಧರ್ಮ ಹಾಗೂ ಸಮುದಾಯದ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಬಡವರ ಸಂಕಷ್ಟಗಳಿಗೆ ಸದಾ ಸ್ಪಂದಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಜನಪರ ಸೇವೆ ಮಾಡುವ ಶಕ್ತಿ ಅವರಿಗೆ ದೊರೆಯಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಮುಫೀಜ್, ಆಲೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪೃಥ್ವಿ, ಕಾಂಗ್ರೆಸ್ ಮುಖಂಡರಾದ ಉದಯ್, ಬೈಕೆರೆ ದೇವರಾಜ್, ಕರಡಿಗಾಲ ಕೃಷ್ಣಗೌಡ, ವಿವಿಧ ಘಟಕಗಳ ಪದಾಧಿಕಾರಿಗಳು, ಯುವ ಬ್ರಿಗೇಡ್ ಸದಸ್ಯರು, ಹಿಮ್ಸ್ ವೈದ್ಯರು, ಆರೋಗ್ಯ ಸಿಬ್ಬಂದಿ ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.