ಆರೋಗ್ಯ ಶಿಬಿರಗಳು ಗ್ರಾಮೀಣ ಜನರ ಪಾಲಿಗೆ ಸಂಜೀವಿನಿ ಇದ್ದಂತೆ: ಶಾಸಕ ಕೆ.ಎಂ.ಉದಯ್

| Published : Nov 18 2025, 12:30 AM IST

ಆರೋಗ್ಯ ಶಿಬಿರಗಳು ಗ್ರಾಮೀಣ ಜನರ ಪಾಲಿಗೆ ಸಂಜೀವಿನಿ ಇದ್ದಂತೆ: ಶಾಸಕ ಕೆ.ಎಂ.ಉದಯ್
Share this Article
  • FB
  • TW
  • Linkdin
  • Email

ಸಾರಾಂಶ

ಇತ್ತಿಚಿನ ದಿನಗಳಲ್ಲಿ ಬಿಪಿ, ಷುಗರ್, ಹೃದ್ರೋಗ ಹಾಗೂ ಕಿಡ್ನಿಯಂತಹ ಹಲವು ಸಮಸ್ಯೆಗಳಿಗೆ ಹೆಚ್ಚಿನ ಜನರು ತುತ್ತಾಗುತ್ತಿರುವುದು ಕಂಡು ಬರುತ್ತಿದೆ. ಬಡ ಜನರು ಆರ್ಥಿಕವಾಗಿ ಭರಿಸಲು ಅಸಾಧ್ಯವಾಗಿದೆ‌. ಹೀಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಮೂಲಕ ಚಿಕಿತ್ಸೆಗೆ ಒಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ.

ಕನ್ನಡಪ್ರಭ ವಾರ್ತೆ ಮದ್ದೂರು

ಗ್ರಾಮೀಣ ಜನರ ಆರೋಗ್ಯ ಕಾಪಾಡಿಕೊಳ್ಳಲು ಉಚಿತ ಆರೋಗ್ಯ ಶಿಬಿರಗಳು ಸಂಜೀವಿನಿಯಾಗಿ ಕೆಲಸ ಮಾಡುತ್ತಿವೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ನಗರದ ಸಂಜೀವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆರೋಗ್ಯ ಉಚಿತ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ತಪಾಸಣೆ ಪ್ರಯೋಜನ ಪಡೆಯಬೇಕು ಎಂದರು.

ಇತ್ತಿಚಿನ ದಿನಗಳಲ್ಲಿ ಬಿಪಿ, ಷುಗರ್, ಹೃದ್ರೋಗ ಹಾಗೂ ಕಿಡ್ನಿಯಂತಹ ಹಲವು ಸಮಸ್ಯೆಗಳಿಗೆ ಹೆಚ್ಚಿನ ಜನರು ತುತ್ತಾಗುತ್ತಿರುವುದು ಕಂಡು ಬರುತ್ತಿದೆ. ಬಡ ಜನರು ಆರ್ಥಿಕವಾಗಿ ಭರಿಸಲು ಅಸಾಧ್ಯವಾಗಿದೆ‌. ಹೀಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಮೂಲಕ ಚಿಕಿತ್ಸೆಗೆ ಒಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ ಎಂದರು.

ಮುಖ್ಯ ಆರೋಗ್ಯಾಧಿಕಾರಿ ಬಿ.ಕೆ.ಪ್ರಸನ್ನ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಒತ್ತಡದಿಂದ ಬಳಲುತ್ತಿರುವವರು ಹೆಚ್ಚಾಗಿದ್ದಾರೆ. ಹಣವೊಂದೇ ಜೀವನವಲ್ಲ. ಆರೋಗ್ಯವು ಮುಖ್ಯ. ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಂಡು ದಿನನಿತ್ಯ ಒಂದಿಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಶಿಬಿರದಲ್ಲಿ 600ಕ್ಕೂ ಹೆಚ್ಚು ಜನರು ಭಾಗಿಯಾಗಿ ಹೃದಯ, ಕಣ್ಣು, ಮೂಳೆ, ನರ, ಕಿಡ್ನಿ, ಸ್ತ್ರೀರೋಗ, ಚರ್ಮರೋಗ, ಮಕ್ಕಳು ಹಾಗೂ ಮಾನಸಿಕ ರೋಗ ತಜ್ಞ ವೈದ್ಯರಲ್ಲಿ ಚಿಕಿತ್ಸೆ ಪಡೆದುಕೊಂಡರು. ಹಾಗೂ ಉಚಿತವಾಗಿ ಶುಗರ್, ಬಿಪಿ ಮತ್ತು ಇ.ಸಿ.ಜಿ ತಪಾಸಣೆಯನ್ನು ಮಾಡಲಾಯಿತು.

46 ಮಂದಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಸವರಾಜು, ಟಿಎಪಿಸಿಎಂಎಸ್ ಉಪಾಧ್ಯಕ್ಷ ಪಿ.ರಾಘವಾ ಆಡಳಿತಾಧಿಕಾರಿ ಮನೋಜ್ ಕುಮಾರ್, ಹುಲಿಗೆರೆಪುರ ಸೊಸೈಟಿ ಅಧ್ಯಕ್ಷ ಬೋರೇಗೌಡ, ಸಂಸ್ಥೆ ತಜ್ಞ ವೈದ್ಯರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಇದ್ದರು.