ಸಾರಾಂಶ
ಸಿರಿಧಾನ್ಯ-ಸಾವಯವ ಉತ್ಪನ್ನ ಕುರಿತು ಗ್ರಾಹಕರಲ್ಲಿ ಅರಿವು । ಸಿರಿಧಾನ್ಯ ನಡಿಗೆ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುದಿನನಿತ್ಯದ ಆಹಾರ ಪದ್ಧತಿಯಲ್ಲಿ ಹೆಚ್ಚು ಸಿರಿ ಧಾನ್ಯ ಪದಾರ್ಥಗಳನ್ನು ಬಳಸುವುದರಿಂದ ಅನೇಕ ರೋಗ ರುಜಿನಗಳಿಂದ ಮುಕ್ತರಾಗಿ ಆರೋಗ್ಯವಾಗಿರಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಸಂಯುಕ್ತಾಶ್ರದಲ್ಲಿ ನಗರದ ತಾಲೂಕು ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದವರೆಗೆ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನ ಕುರಿತು ಗ್ರಾಹಕರಲ್ಲಿ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ದೇಶದಲ್ಲಿ ಸಿರಿಧಾನ್ಯದ ಮಹತ್ವ ಅರಿವು ಹೆಚ್ಚಾಗುತ್ತಿದೆ. ಭಾರತ ಸಿರಿಧಾನ್ಯಗಳ ತವರೂರಾಗಿದೆ. ಜಗತ್ತಿನಲ್ಲಿ ಬೆಳೆಯುವ ಸಿರಿಧಾನ್ಯಗಳ ಪೈಕಿ ಶೇ. 42 ರಷ್ಟು ಸಿರಿಧಾನ್ಯವನ್ನು ನಮ್ಮ ದೇಶದಲ್ಲೇ ಬೆಳೆಯ ಲಾಗುತ್ತಿದ್ದು, ಸಿರಿಧಾನ್ಯ ಬೆಳೆಯುವಲ್ಲಿ ನಮ್ಮ ರಾಜ್ಯ ಮುಂದಿದೆ ಎಂದರು.
ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸಿರಿಧಾನ್ಯ ಅತ್ಯುತ್ತಮ ಔಷಧಿ. ಬಹಳ ಕಡಿಮೆ ನೀರಿನಲ್ಲೂ ಸಿರಿಧಾನ್ಯ ಬೆಳೆಯ ಬಹುದಾಗಿದೆ. ರೋಗಮುಕ್ತ ಜೀವನಕ್ಕಾಗಿ ಎಲ್ಲರೂ ಸಿರಿ ಧಾನ್ಯಗಳ ಬಳಕೆಗೆ ಮುಂದಾಗಬೇಕು. ಸಿರಿಧಾನ್ಯಗಳು ಭೂಮಿಗೂ ವರದಾನ, ಆರೋಗ್ಯಕ್ಕೂ ವರದಾನ ಎಂದು ಹೇಳಿದರು.ಅತ್ಯಧಿಕವಾದ ನಾರಿನ ಅಂಶ ಸೇರಿದಂತೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸತ್ವಗಳು, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅಂಶಗಳು, ಪಿಸ್ತಗಳನ್ನು ಯಥೇಚ್ಛವಾಗಿ ಹೊಂದಿರುತ್ತದೆ. ಜೀವನಶೈಲಿ ಆಧಾರಿತ ಕೆಲವು ರೋಗಗಳಿಗೂ ಇದು ಉತ್ತಮ ಮದ್ದಾಗಿದೆ. ಆಹಾರದಲ್ಲಿ ಹೆಚ್ಚಾಗಿ ಸಿರಿಧಾನ್ಯ ಬಳಸಬೇಕು. ಈ ಧಾನ್ಯವನ್ನು ಜನಪ್ರಿಯಗೊಳಿಸಲು ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದ ಅವರು, ನಮ್ಮ ರೈತರು ಸಾವಯವ ಹಾಗೂ ಮಿಶ್ರ ಬೇಸಾಯ ಪದ್ಧತಿ ರೂಢಿಸಿಕೊಂಡು ಸಿರಿಧಾನ್ಯವನ್ನು ಹೆಚ್ಚು ಬೆಳೆಯಬೇಕು ಎಂದು ಕಿವಿಮಾತು ಹೇಳಿದರು. ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಸಾರ್ವಜನಿಕರು ಪಾಶ್ಚಾತ್ಯ ಆಹಾರ ಪದ್ಧತಿ ಗಳಿಗೆ ಮರುಳಾಗಿ ನಮ್ಮ ನಾಡಿನ ಆಹಾರ ಪದ್ಧತಿ ದೂರ ಮಾಡಿ ಆರೋಗ್ಯವನ್ನು ಹದಗೆಡಿಸಿಕೊಳ್ಳುತ್ತಿದ್ದಾರೆ. ಸಾವಯವ ಕೃಷಿ ಮೂಲಕ ಬೆಳೆಯುವ ನವಣೆ, ಸಜ್ಜೆ, ರಾಗಿ ಹಾಗೂ ದ್ವಿದಳ ಧಾನ್ಯಗಳು ನಮ್ಮ ಆರೋಗ್ಯವನ್ನು ಉತ್ತಮ ವಾಗಿರಿಸಿಕೊಳ್ಳಲು ಸಹಕಾರಿ. ಇವುಗಳ ಉಪಯೋಗದಿಂದ ರೈತರ ಬೆಳೆಗೂ ಉತ್ತಮ ಲಾಭದಾಯಕ ಬೆಲೆ ದೊರಕುತ್ತದೆ. ದಿನನಿತ್ಯದ ಆಹಾರದಲ್ಲಿ ಸಿರಿಧಾನ್ಯಗಳಿಂದ ಮಾಡಿದ ಆಹಾರ ಹೆಚ್ಚಾಗಿ ಬಳಸಿ ತಮ್ಮ ಆರೋಗ್ಯ ಸುಸ್ಥಿತಿಯಲ್ಲಿರಿಸಿ ಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ, ಜಂಟಿ ಕೃಷಿ ನಿರ್ದೇಶಕಿ ಸುಜಾತಾ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಎಚ್. ಹರೀಶ್ ಉಪಸ್ಥಿತರಿದ್ದರು.17 ಕೆಸಿಕೆಎಂ 1ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನ ಕುರಿತು ಗ್ರಾಹಕರಲ್ಲಿ ಅರಿವು ಮೂಡಿಸಲು ಕೃಷಿ ಇಲಾಖೆ ಚಿಕ್ಕಮಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಎತ್ತಿನಗಾಡಿಯನ್ನು ಓಡಿಸುವ ಮೂಲಕ ಶಾಸಕ ಎಚ್.ಡಿ. ತಮ್ಮಯ್ಯ ಅವರು ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಡಿಸಿ ಮೀನಾ ನಾಗರಾಜ್, ಸಿಇಓ ಕೀರ್ತನಾ, ಜಂಟಿ ಕೃಷಿ ನಿರ್ದೇಶಕಿ ಸುಜಾತ ಇದ್ದರು.