ಉಡುಪಿ: ಸದೃಢ, ಆರೋಗ್ಯವಂತ ಮಕ್ಕಳು ಭವಿಷ್ಯದ ನಾಯಕರಾಗಿ ರೂಪುಗೊಂಡು ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಬಲ್ಲರು ಎಂದು ಉಡುಪಿ ಯಶ್‌ಪಾಲ್‌ ಸುವರ್ಣ ಹೇಳಿದ್ದಾರೆ.

ಜಿಲ್ಲಾಡಳಿತ, ವಿವಿಧ ಇಲಾಖೆಗಳು ಹಾಗೂ ಸಂಘಗಳ ಸಹಯೋಗದಲ್ಲಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ. ಎ. ಗಫೂರ್ ಮಾತನಾಡಿ, ಆರೋಗ್ಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದಿಂದ ದೇಶವು ಇಂದು ಪೋಲಿಯೊ ಹಾಗೂ ಸಿಡುಬು ರೋಗ ಮುಕ್ತವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗ, ವೈದ್ಯರು, ಆರೋಗ್ಯ ಕಾರ್ಯಕರ್ತರು ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಲಸಿಕಾ ಕಾರ್ಯಕ್ರಮಗಳು ಯಶಸ್ವಿಯಾಗಿವೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಬಿಬಿಎಂಪಿ ಉಪನಿರ್ದೇಶಕಿ ಡಾ. ಮಮತಾ ಎಂ. ಎಸ್., ಜಿಲ್ಲಾ ಸರ್ಜನ್ ಡಾ. ಅಶೋಕ್ ಎಚ್., ರೋಟರಿ ಪ್ಲಸ್ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಬಾಸ್ರಿ ಮತ್ತಿತರರಿದ್ದರು.


ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಜ್ಯೋತ್ಸ್ನಾ ಬಿ. ಕೆ. ಸ್ವಾಗತಿಸಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿದರ್ ಎಚ್. ನಿರೂಪಿಸಿ, ರೋಟರಿ ಅಧ್ಯಕ್ಷ ಸೂರಜ್ ಕುಮಾರ್ ಹೆಗ್ಡೆ ವಂದಿಸಿದರು.