ಸಾರಾಂಶ
ಕನ್ನಡಪ್ರಭ ವಾರ್ತೆ ಬಳ್ಳಾರಿ
ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಹಾಗೂ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಬ್ರಿಮ್ಸ್) ಸಹಯೋಗದಲ್ಲಿ ಹೃದಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮಾತನಾಡಿ, ಕೈಗಾರಿಕೆ ಸಂಸ್ಥೆಯು ಜಿಲ್ಲೆಯಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾಗಿ ಶ್ರಮಿಸುವುದರ ಜೊತೆಗೆ ಸಾಮಾಜಿಕ ಸೇವಾ ಕಾರ್ಯ ಕೈಗೊಂಡಿದೆ. ಅನೇಕ ಜನಮುಖಿ ಯೋಜನೆಗಳ ಮೂಲಕ ಜನಸಾಮಾನ್ಯರ ಸಮಸ್ಯೆಗೂ ಸ್ಪಂದಿಸುವ ಕಾಳಜಿಯನ್ನು ವಾಣಿಜ್ಯ ಸಂಸ್ಥೆ ಹೊಂದಿದೆ. ಎಪಿಎಂಸಿಯಲ್ಲಿ ಕಾರ್ಯನಿರ್ವಹಿಸುವ ಹಮಾಲಿ ಕಾರ್ಮಿಕರು ಸೇರಿದಂತೆ ಇತರೆ ಜನಸಮುದಾಯಕ್ಕೆ ಉಚಿತವಾಗಿ ಹೃದಯ ತಪಾಸಣೆ ಶಿಬಿರ ಕೈಗೊಳ್ಳುವ ಮೂಲಕ ಆರೋಗ್ಯ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಕುಲಸಚಿವ ಎಸ್.ಎನ್. ರುದ್ರೇಶ್ ಮಾತನಾಡಿ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಸದಾಕಾಲ ಜನಸೇವೆಯಲ್ಲಿ ಮುಂದಿದೆ. ರೈತಣ್ಣನ ಊಟ, ಹಾಸಿಗೆ ಮತ್ತು ರೈತಣ್ಣನ ಕ್ಲಿನಿಕ್ ಮೂಲಕ ಸರ್ಕಾರ ಮಾಡುವ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಈ ಸಂಸ್ಥೆಯು ಅನೇಕರಿಗೆ ಸ್ಫೂರ್ತಿ ನೀಡಿದೆ ಎಂದರು.ಶಿಬಿರಕ್ಕೆ ಚಾಲನೆ ನೀಡಿದ ಬ್ರಿಮ್ಸ್ನ ವೈದ್ಯಕೀಯ ಅಧೀಕ್ಷಕಿ ಡಾ. ಇಂದುಮತಿ ಮಾತನಾಡಿ, ಜಿಲ್ಲಾ ವಾಣಿಜ್ಯ ಸಂಸ್ಥೆ ಅನೇಕ ಸೇವಾ ಕಾರ್ಯಗಳನ್ನು ಸಂಘಟಿಸುತ್ತಾ ಬಂದಿದ್ದು, ಬಿಮ್ಸ್ ಸಹ ಆರೋಗ್ಯಸೇವಾ ಕೈಂಕರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಲಿದೆ ಎಂದು ತಿಳಿಸಿದರು.
ಅತಿಥಿಗಳಾದ ಹೃದಯತಜ್ಞ ಡಾ. ಎನ್. ಕೊಟ್ರೇಶ್, ಇತ್ತೀಚಿನ ದಿನಗಳಲ್ಲ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಆಗಾಗ್ಗೆ ಆರೋಗ್ಯ ತಪಾಸಣೆ ಮೂಲಕ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಾಜಿ ಅಧ್ಯಕ್ಷ ಬಿ.ಮಹಾರುದ್ರಗೌಡ, ಹಿರಿಯ ಉಪಾಧ್ಯಕ್ಷ ಅವ್ವಾರು ಮಂಜುನಾಥ್, ಉಪಾಧ್ಯಕ್ಷ ಎಸ್.ದೊಡ್ಡನಗೌಡ, ಖಜಾಂಚಿ ಪಿ. ಪಾಲಣ್ಣ, ಜಂಟಿ ಕಾರ್ಯದರ್ಶಿ ಡಾ. ಮರ್ಚೇಡ್ ಮಲ್ಲಿಕಾರ್ಜುನ ಗೌಡ, ವಿ.ರಾಮಚಂದ್ರ ಮತ್ತು ರೈತಣ್ಣ ಕ್ಲಿನಿಕ್ ನ ಚೇರ್ಮನ್ ಸುರೇಂದ್ರ ಕುಮಾರ್ ಭಾಪ್ನಾ ಉಪಸ್ಥಿತರಿದ್ದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಕಾರ್ಯಕ್ರಮ ನಿರ್ವಹಿಸಿದರು.ಬ್ರಿಮ್ಸ್ ಮತ್ತು ಜಿಲ್ಲಾ ಆಸ್ಪತ್ರೆಯ ಪರಿಣಿತ ವೈದ್ಯರು ಮತ್ತು ಸಿಬ್ಬಂದಿ ಶಿಬಿರದಲ್ಲಿ ಪಾಲ್ಗೊಂಡು ಹೃದಯ ತಪಾಸಣೆ ನಡೆಸಿದರು. 250 ಕ್ಕೂ ಹೆಚ್ಚು ಜನರಿಗೆ ಉಚಿತವಾಗಿ ಹೃದಯ ಮತ್ತಿತರ ಆರೋಗ್ಯ ತಪಾಸಣೆ ಮಾಡಲಾಯಿತು. ಬಿಡಿಸಿಡಿಐನ ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು, ಎಪಿಎಂಸಿಯ ವರ್ತಕರು, ಹಮಾಲರು-ರೈತರು ಶಿಬಿರದಲ್ಲಿ ಪಾಲ್ಗೊಂಡಿದ್ದರು.