ಸಾರಾಂಶ
ಬೇಸಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು, ಹಮಾಲಿ ಕಾರ್ಮಿಕರು, ದಿನಗೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಮತ್ತಿತರ ಎಲ್ಲ ವರ್ಗದ ಕಾರ್ಮಿಕರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷತೆ, ಆರೋಗ್ಯ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಉದ್ಯೋಗದಾತರಿಗೆ ಸೂಚಿಸಲಾಗಿದೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಬೇಸಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು, ಹಮಾಲಿ ಕಾರ್ಮಿಕರು, ದಿನಗೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಮತ್ತಿತರ ಎಲ್ಲ ವರ್ಗದ ಕಾರ್ಮಿಕರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷತೆ, ಆರೋಗ್ಯ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಉದ್ಯೋಗದಾತರಿಗೆ ಸೂಚಿಸಲಾಗಿದೆ.ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿ ಮತ್ತು ವಸತಿ ಶೆಡ್ಗಳಲ್ಲಿ ಪರಿಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಲೀಕರು ಮಾಡಬೇಕು. ನಿರ್ಜಲೀಕರಣವಾಗದಂತೆ ತಡೆಯಲು ಕೆಲಸದ ವೇಳೆ ಅರ್ಧ ಗಂಟೆಗೊಮ್ಮೆಯಾದರೂ ನೀರು ಕುಡಿಯುವುದು ಮತ್ತು ಕೆಲಸದ ಮಧ್ಯ ವಿಶ್ರಾಂತಿ ಪಡೆಯಲು ಗಮನ ಕೊಡಬೇಕು. ಶ್ರಮದಾಯಕ ಮತ್ತು ಹೊರಾಂಗಣ ಕೆಲಸಗಳನ್ನು ಬೆಳಗ್ಗೆ ಮತ್ತು ಸಂಜೆಯ ವೇಳೆ ತಾಪಮಾನ ಕಡಿಮೆಯಿರುವ ಸಮಯದಲ್ಲಿ ನಿರ್ವಹಿಸಬೇಕು. ಬೃಹತ್ ಕಟ್ಟಡ ಮತ್ತು ಇತರ ನಿರ್ಮಾಣದಾರರು ತಮ್ಮ ಕಾರ್ಮಿಕರು ನೇರ ಸೂರ್ಯನ ಬಿಸಿಲಿನಲ್ಲಿ ಕೆಲಸ ನಿರ್ವಹಿಸದಂತೆ ಎಚ್ಚರ ವಹಿಸಬೇಕು, ಸಾಧ್ಯವಾದರೆ ರಾತ್ರಿ ವೇಳೆ ಕೆಲಸ ಮಾಡಿಸಬಹುದು.
ಕಾರ್ಮಿಕರಿಗೆ ಆರೋಗ್ಯ ತಪಾಸಣಾ ವ್ಯವಸ್ಥೆ ಕೈಗೊಳ್ಳುವುದು ಹಾಗೂ ಕೆಲಸದ ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಕಡ್ಡಾಯವಾಗಿ ವ್ಯವಸ್ಥೆಗೊಳಿಸಬೇಕು. ಬಿಸಿಲಿನಿಂದ ಹೀಟ್ ಸ್ಟ್ರೋಕ್ ಲಕ್ಷಣಗಳು ಕಂಡುಬಂದರೆ ತಂಪಾದ ಜಾಗಕ್ಕೆ ಸ್ಥಳಾಂತರಿಸಿ ಅಂತಹ ವ್ಯಕ್ತಿಗೆ ಐಸ್ ಪ್ಯಾಕ್ಗಳನ್ನು ಉಪಯೋಗಿಸಬೇಕು ಮತ್ತು ಅವಶ್ಯಕತೆಯಿದ್ದರೆ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕ್ರಮ ವಹಿಸುವಂತೆ ಮಂಗಳೂರು ಕಾರ್ಮಿಕ ಇಲಾಖೆ, ಉಪವಿಭಾಗ-1 ಮತ್ತು 2ರ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.