ಸಾರಾಂಶ
ವಿಪರೀತ ಮಳೆ ಹಿನ್ನೆಲೆಯಲ್ಲಿ ಅಧಿಕಾರಿ ಸಿಬ್ಬಂದಿ ಕರ್ತವ್ಯಕ್ಕೆ ರಜೆ ಹಾಕದೆ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಸೂಚಿದರು.
ಕನ್ನಡಪ್ರಭ ವಾರ್ತೆ ಸಾಗರ
ವಿಪರೀತ ಮಳೆ ಹಿನ್ನೆಲೆಯಲ್ಲಿ ಅಧಿಕಾರಿ ಸಿಬ್ಬಂದಿ ಕರ್ತವ್ಯಕ್ಕೆ ರಜೆ ಹಾಕದೆ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಸೂಚಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಶಾಸಕರ ಅನುಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಳೆಹಾನಿ ಕುರಿತು ಮಾಹಿತಿ ಪಡೆದು ಮಳೆಗಾಲದಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಇರುವುದರಿಂದ ಆರೋಗ್ಯ ಇಲಾಖೆ ಹೆಚ್ಚು ಜಾಗೃತೆ ವಹಿಸುವಂತೆ ಸೂಚಿಸಿದರು. ತಾಲೂಕಿನಲ್ಲಿ ಶಿಥಿಲಗೊಂಡಿರುವ ಶಾಲೆಗಳ ಬಗ್ಗೆ ಹೆಚ್ಚು ಗಮನ ಹರಿಸಿ. ಕೆಲವು ಪ್ರದೇಶಗಳಲ್ಲಿ ಮಕ್ಕಳು ಕಾಲುಸಂಕ ದಾಟಿಕೊಂಡು ಶಾಲೆಗೆ ಹೋಗುತ್ತಾರೆ. ಅಂತಹ ಸ್ಥಳಗಳ ಬಗ್ಗೆ ಹೆಚ್ಚಿನ ಗಮನ ಹರಿಸಲು ಸೂಚನೆ ನೀಡಿ ಅವರು, ಕೆಲವು ಕಡೆಗಳಲ್ಲಿ ಮರಗಳು ಶಾಲೆಯ ಅಕ್ಕಪಕ್ಕ ಮುರಿದು ಬೀಳುವ ಸ್ಥಿತಿಯಲ್ಲಿ ಇರುತ್ತದೆ. ಶಾಲಾ ಶಿಕ್ಷಕರು, ಅರಣ್ಯ ಇಲಾಖೆ ಇದರ ಬಗ್ಗೆ ಬಗ್ಗೆ ಗಮನ ಹರಿಸಲು ತಿಳಿಸಿದರು. ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಸಂರಕ್ಷಣೆ ಬಗ್ಗೆ ಗಮನ ಹರಿಸಿ. ಹೊಂಡಗುಂಡಿ ಬಿದ್ದಿದ್ದರೆ ಅದನ್ನು ತಕ್ಷಣ ಮುಚ್ಚಿ, ಹೆಚ್ಚು ಹಾನಿಯಾಗದಂತೆ ಗಮನಹರಿಸಿ. ಸೇತುವೆ ಬಗ್ಗೆ ಗಮನ ಹರಿಸಿ. ತಹಸೀಲ್ದಾರ್ ಕಚೇರಿ ಲಿಫ್ಟ್ ತಕ್ಷಣ ದುರಸ್ತಿ ಮಾಡಿ, ಜನರಿಗೆ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸಿ ಎಂದು ಹೇಳಿದರು.ಮಳೆಗಾಲದಲ್ಲಿ ಎಂತಹ ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿಗಳು ಸಿದ್ದರಿರಬೇಕು. ಹಾನಿಯಾದರೆ ತಕ್ಷಣ ತಾಲ್ಲೂಕು ಆಡಳಿತದಿಂದ ಅಗತ್ಯಕ್ರಮ ಕೈಗೊಳ್ಳಬೇಕು. ಮನೆ ಹಾನಿಯಾದರೆ ಪಂಚಾಯ್ತಿ ವತಿಯಿಂದ ತುರ್ತು ಪರಿಹಾರ ನೀಡಿ. ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಶಾಸಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದರು.ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ಶಿವಪ್ರಕಾಶ್, ಶಾಸಕರ ವಿಶೇಷ ಅಧಿಕಾರಿ ಟಿ.ಪಿ.ರಮೇಶ್, ಪ್ರಮುಖರಾದ ಅನಿಲಕುಮಾರ್, ಚರಣ್, ಪರಶುರಾಮ್, ಪರಶುರಾಮಪ್ಪ, ವಿ.ಟಿ.ಸ್ವಾಮಿ ಇನ್ನಿತರರು ಹಾಜರಿದ್ದರು.