ಸೋಮವಾರಪೇಟೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಹೆಬ್ಬಾಲೆ ಗ್ರಾಮದ ರೈತ ಆದರ್ಶ ಅವರ ಗದ್ದೆಯಲ್ಲಿ ಏರ್ಪಡಿಸಿದ್ದ 8ನೇ ವರ್ಷದ ಜಿಲ್ಲಾ ಮಟ್ಟದ ಗದ್ದೆ ನಾಟಿ ಹಬ್ಬ ಹಾಗೂ ಗ್ರಾಮೀಣ ಕೆಸರು ಗದ್ದೆ ಕ್ರೀಡಾಕೂಟ ನಡೆಯಿತು.
ಕುಶಾಲನಗರ: ಸೋಮವಾರಪೇಟೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಹೆಬ್ಬಾಲೆ ಗ್ರಾಮದ ರೈತ ಆದರ್ಶ ಅವರ ಗದ್ದೆಯಲ್ಲಿ ಏರ್ಪಡಿಸಿದ್ದ 8ನೇ ವರ್ಷದ ಜಿಲ್ಲಾ ಮಟ್ಟದ ಗದ್ದೆ ನಾಟಿ ಹಬ್ಬ ಹಾಗೂ ಗ್ರಾಮೀಣ ಕೆಸರು ಗದ್ದೆ ಕ್ರೀಡಾಕೂಟ ನಡೆಯಿತು.ವಾಲಿಬಾಲ್ ಹಾಗೂ ಹಗ್ಗಜಗ್ಗಾಟ, ಓಟದ ಸ್ಪರ್ಧೆಗಳು ಪ್ರಮುಖ ಆಕರ್ಷಣೆಯಾಗಿತ್ತು. ತುಂತುರು ಮಳೆ ಹನಿ ಹಾಗೂ ಬಿಸಿಲಿನ ವಾತಾವರಣದಲ್ಲಿ ನಡೆದ ಓಟದ ಸ್ಪರ್ಧೆ, ಹಗ್ಗ ಜಗ್ಗಾಟ ಸ್ಪರ್ಧೆ ಸಂಪನ್ನಗೊಂಡಿತು.ಮಾಜಿ ಉಪ ಮುಖ್ಯಮಂತ್ರಿ, ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ನಾಟಿ ಮಾಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಗದ್ದೆನಾಟಿ ಕಾರ್ಯದ ಮೂಲಕ ಸಮಾಜಕ್ಕೆ ಸ್ಪಷ್ಟ ಸಂದೇಶವಿದೆ. ಕೃಷಿಯನ್ನು ಉಳಿಸಬೇಕು. ಭೂಮಿ ಉಳಿವಿನ ಜೊತೆ ನಮ್ಮ ಉಳಿವು ಇದೆ. ಫಲವತ್ತಾದ ಭೂಮಿಯನ್ನು ಹಣದ ಮೋಹಕ್ಕೆ ಮಾರಬಾರದು ಎಂದರು.
ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಕೃಷಿ ಕ್ಷೇತ್ರ, ರೈತರ ಅಭ್ಯುದಯಕ್ಕೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ರೈತರು ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದರು.ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಕಾಫಿ ತೋಟಗಳು ಶುಂಠಿ ಕೃಷಿಗೆ ಬದಲಾಗುತ್ತಿವೆ. ಗದ್ದೆಗಳನ್ನು ಕೃಷಿ ಕಾರ್ಯಕ್ಕೆ ಬಳಸಿಕೊಳ್ಳಬೇಕು ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿ ಕ್ಷೇತ್ರ ಉಳಿವಿಗಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೆಸರುಗದ್ದೆ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿದೆ ಎಂದರು.ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಸೋಮವಾರಪೇಟೆ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ, ಉದ್ಯಮಿ ಪ್ರಸನ್ನ ಮಡಿಕೇರಿ, ಕೊಡಗು ಜಿಲ್ಲೆ ರೈತ ಸಂಘದ ಅಧ್ಯಕ್ಷ ಮನುಸೋಮಯ್ಯ, ಏರೋನಿಕ್ಸ್ ಮಾಲೀಕ ಕೀರ್ತಿಗೌಡ, ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೊಲ್ಲಿ ರಾಜಶೇಖರ್, ಶಿಕ್ಷಕ ಸಂಘದ ರಾಜ್ಯ ಕಾರ್ಯದರ್ಶಿ ಎಚ್.ಎಸ್. ಚೇತನ್, ಬಿಜೆಪಿ ಮುಖಂಡರಾದ ಬಿ.ಬಿ. ಭಾರತೀಶ್, ಗೌತಮ್, ಚಂದ್ರಶೇಖರ್ ಹೇರೂರು, ಶುಂಠಿ ವ್ಯಾಪಾರಿ ಎಚ್.ಎಸ್. ರಾಜಶೇಖರ್, ಶ್ರೀನಿವಾಸ್, ಶರತ್, ಮಾಜಿ ಸೈನಿಕ ಪುಟ್ಟೇಗೌಡ, ಪಟ್ಟ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಹರ್ಷಿತ್ ಶಿವಪ್ಪ, ಕಾರ್ಯದರ್ಶಿ ಸಜನ್ ಮಂದಣ್ಣ, ಸಹ ಕಾರ್ಯದರ್ಶಿ ಜಗದೀಶ್ ಬೋಪಣ್ಣ, ಖಜಾಂಚಿ ಮೋಹಿತ್ ತಿಮ್ಮಯ್ಯ ಹಾಗೂ ಸದಸ್ಯರು ಪಾಲ್ಗೊಂಡಿದ್ದರು. ಪತ್ರಕರ್ತ ವಿಜಯ್ ಹಾನಗಲ್ ನಿರೂಪಿಸಿದರು.