ಸಮಾಜ ಸೇವೆ ಮೂಲಕ ವಿಶ್ವಮಾನವ ಸಂದೇಶ ಸಾರಿದ ಹೆಗ್ಗಡೆ: ಭಟ್ಟಾರಕ ಶ್ರೀ

| Published : Oct 25 2024, 12:49 AM IST

ಸಾರಾಂಶ

ನೂತನ ಯೋಜನೆಗಳನ್ನು ಪ್ರಕಟಿಸಿದ ಡಾ. ಹೆಗ್ಗಡೆ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಧರ್ಮಸ್ಥಳದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆ ಮಾಡಿ ಭಕ್ತಾದಿಗಳಿಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು. ಇದೇ ನವೆಂಬರ್ ೮ರಂದು ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಆರಾಮದಾಯಕ ಸರತಿ ಸಾಲಿನ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಿಸಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ರಾಷ್ಟ್ರಕವಿ ಕುವೆಂಪು ಸಾರಿದ ವಿಶ್ವಮಾನವ ಸಂದೇಶವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಕ್ಷರಶಃ ಸೇವಾ ರೂಪದಲ್ಲಿ ಮಾಡಿ ತೋರಿಸಿದ್ದಾರೆ. ಜೈನಧರ್ಮಕ್ಕೂ ಹಿಂದೂ ಧರ್ಮಕ್ಕೂ ಅವಿನಾಭಾವ ಸಂಬಂಧವಿದ್ದು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹೀಗೆ ಎಲ್ಲ ರಂಗಗಳಲ್ಲಿಯೂ ಹೆಗ್ಗಡೆಯವರು ಎಲ್ಲ ಮಠ-ಮಂದಿರಗಳಿಗೂ ಮಾದರಿಯಾಗಿ ಅನವರತ ಸೇವೆ ಮಾಡಿ ಧರ್ಮಸ್ಥಳದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಪಸರಿಸಿದ್ದಾರೆ ಎಂದು ಮೂಡುಬಿದಿರೆ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

ಅವರು ಗುರುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ನಡೆದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೭ನೇ ವರ್ಧಂತ್ಯುತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಜನರು ರಾಜಕಾರಣಿಗಳಿಗಿಂತಲೂ ಹೆಚ್ಚು ಧರ್ಮಾಧಿಕಾರಿಗಳಾದ ಹೆಗ್ಗಡೆಯವರಿಂದ ನಿರೀಕ್ಷೆ ಮಾಡುತ್ತಾರೆ. ಮಾತು ಬಿಡ ಮಂಜುನಾಥ ಎಂಬ ಮಾತಿನಿಂತೆ ಚತುರ್ವಿಧ ದಾನ ಪರಂಪರೆಯೊಂದಿಗೆ ಅರಿಷಡ್ವರ್ಗಗಳನ್ನು ಗೆದ್ದು ಬಹುಮುಖಿ ಸಮಾಜಸೇವಾ ಕಾರ್ಯಗಳಿಂದ ಇಂದು ಹೆಗ್ಗಡೆಯವರು ವಿಶ್ವ ಮಾನವರಾಗಿದ್ದಾರೆ ಎಂದು ಸ್ವಾಮೀಜಿ ಶ್ಲಾಘಿಸಿ ಅಭಿನಂದಿಸಿದರು.

ಸರ್ವಜನಾಂಗದ ಶಾಂತಿಯ ತೋಟ ಧರ್ಮಸ್ಥಳ: ಡಿ. ವೀರೇಂದ್ರ ಹೆಗ್ಗಡೆಯವರ ಮೇಣದ ಪ್ರತಿಮೆ ಅನಾವರಣ ಮಾಡಿ ಶುಭಾಶಂಸನೆ ಮಾಡಿದ ಬೆಂಗಳೂರು ಗ್ರಾಮಾಂತರದ ಸಂಸದ ಡಾ.ಸಿ.ಎನ್. ಮಂಜುನಾಥ್, ದೈಹಿಕ ಆರೋಗ್ಯಕ್ಕಿಂತಲೂ ಮಾನಸಿಕಆರೋಗ್ಯ ಮುಖ್ಯವಾದುದು. ಸರ್ವಧರ್ಮೀಯರಿಗೂ ಶ್ರದ್ಧಾ-ಭಕ್ತಿಯ ಕೇಂದ್ರವಾದ ಧರ್ಮಸ್ಥಳವು ಮಾನಸಿಕ ಶಾಂತಿ- ನೆಮ್ಮದಿ ನೀಡುವ ಸರ್ವಜನಾಂಗದ ಶಾಂತಿಯ ತೋಟವಾಗಿದೆ ಎಂದು ಬಣ್ಣಿಸಿದರು.ಲಕ್ಷಾಂತರ ಮನೆಗಳಲ್ಲಿ ಇಂದು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ, ಉಚಿತ ಸಾಮೂಹಿಕ ವಿವಾಹ, ಸ್ವ-ಉದ್ಯೋಗ ತರಬೇತಿ ಕೇಂದ್ರ ಇತ್ಯಾದಿ ಯೋಜನೆಗಳಿಂದ ಜನರು ಸಾರ್ಥಕ ಬದುಕನ್ನು ಕಟ್ಟಿಕೊಂಡಿದ್ದಾರೆ. ನಿಸ್ವಾರ್ಥ ಸೇವಾಮನೋಭಾವದಿಂದ ಆರೋಗ್ಯ ಶಿಸ್ತು, ಸಂಯಮ, ಉತ್ತಮ ಸಂಸ್ಕಾರ ಮೂಡಿಸಿರುವುದು ಸಮಾಜಕ್ಕೆ ಕೊಟ್ಟ ಅಮೂಲ್ಯ ಕೊಡುಗೆಯಾಗಿದೆ ಎಂದರು.

ಅನುದಾನಕ್ಕಿಂತ ಅನುಷ್ಠಾನ ಮುಖ್ಯ. ಅನುಷ್ಠಾನಕ್ಕಿಂತ ನಿರ್ವಹಣೆ ಮುಖ್ಯ. ಪೂಜಾ ಕ್ಷೇತ್ರವನ್ನು ಸೇವಾ ಕ್ಷೇತ್ರವಾಗಿ ರೂಪಿಸಿದ ಹೆಗ್ಗಡೆಯವರು ದೈವತ್ವ ಮತ್ತು ಮಾನವೀಯತೆಯೊಂದಿಗೆ ಬಡವರ ಕಣ್ಣೀರು ಒರೆಸುವ ಕಾಯಕ ಮಾಡಿದ್ದಾರೆ ಎಂದು ಮಂಜುನಾಥ್‌ ಶ್ಲಾಘಿಸಿದರು.

ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ಹೆಗ್ಗಡೆಯವರು ಮಾಡುತ್ತಿರುವ ಬಹಮುಖಿ ಸಮಾಜಸೇವೆಗೆ ಅಭಿನಂದಿಸಿದರು. ನೂತನ ಯೋಜನೆಗಳನ್ನು ಪ್ರಕಟಿಸಿದ ಡಾ. ಹೆಗ್ಗಡೆ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಧರ್ಮಸ್ಥಳದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆ ಮಾಡಿ ಭಕ್ತಾದಿಗಳಿಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು. ಇದೇ ನವೆಂಬರ್ ೮ರಂದು ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಆರಾಮದಾಯಕ ಸರತಿ ಸಾಲಿನ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಿಸಿದರು.

ಸೇವಾಕಾರ್ಯಗಳ ಮೂಲಕ ಜನರ ಹೃದಯ ಪರಿವರ್ತನೆಯ ಕಾರ್ಯಮಾಡಲಾಗುತ್ತದೆ. ತನ್ಮೂಲಕ ನವಚೈತನ್ಯದೊಂದಿಗೆ ಪರಿವರ್ತನೆ ಹಾಗೂ ಪ್ರಗತಿಯ ಹರಿಕಾರರನ್ನು ರೂಪಿಸಲಾಗುತ್ತದೆ. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ದೇಶದಲ್ಲಿ ಇನ್ನೂ ೧೨೦ ಹೊಸ ರುಡ್‌ಸೆಟ್ ಸಂಸ್ಥೆಗಳನ್ನು ಸದ್ಯದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಹೆಗ್ಗಡೆಯವರು ತಿಳಿಸಿದರು.

ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಸ್ವಾಗತಿಸಿದರು.

ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿ ಸಂಚಾಲಕ ಹಾಗೂ ದೇವಳ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್‌ ವಂದಿಸಿದರು. ಅನ್ನಪೂರ್ಣ ಛತ್ರದ ಪ್ರಬಂಧಕ ಸುಬ್ರಹ್ಮಣ್ಯ ಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.

ಗಣ್ಯರಿಂದ ಅಭಿನಂದನೆಗಳ ಮಹಾಪೂರ: ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಕೆ.ಪಿ.ಸಿ.ಸಿ. ಜಿಲ್ಲಾ ಘಟಕದ ಅಧ್ಯಕ್ಷ ಕೆ. ಹರೀಶ್ ಕುಮಾರ್, ದ.ಕ. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಡಿ. ಸಂಪತ್‌ ಸಾಮ್ರಾಜ್ಯ, ಶಿರ್ತಾಡಿ, ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಕೆ. ರಾಜವರ್ಮ ಬಲ್ಲಾಳ್, ವಿಜಯಾ ಬ್ಯಾಂಕ್ ನಿವೃತ್ತ ಪ್ರಬಂಧಕ ಎಮ್. ಜಿನರಾಜ ಶೆಟ್ಟಿ, ಮಂಗಳೂರು, ಸುದರ್ಶನ್‌ ಜೈನ್‌ , ಪಿ. ಜಯರಾಜ ಕಂಬಳಿ, ಪೆರಿಂಜೆಗುತ್ತು, ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಮೊಕ್ತೆಸರ ಜೀವಂಧರ ಕುಮಾರ್, ಕೆ. ಪ್ರದೀಪ್‌ಕುಮಾರ್ ಕಲ್ಕೂರ, ಹರಿಕೃಷ್ಣ ಪುನರೂರು, ಮೊದಲಾದ ಗಣ್ಯರು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿ ಅಭಿನಂದಿಸಿದರು.