ಶೇ.100 ಮತದಾನ ಮಾಡಲು ಸಹಕರಿಸಿ: ಸಿಇಒ ಲೋಖಂಡೆ ಮನವಿ

| Published : Apr 29 2024, 01:37 AM IST

ಶೇ.100 ಮತದಾನ ಮಾಡಲು ಸಹಕರಿಸಿ: ಸಿಇಒ ಲೋಖಂಡೆ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಶಿವಮೊಗ್ಗ ಮತದಾನ ಜಾಗೃತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಥಾ ಕಾರ್ಯಕ್ರಮಕ್ಕೆ ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಚಾಲನೆ ನೀಡಿದರು.

ಕನ್ನಡ ಪ್ರಭ ವಾರ್ತೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಈ ಬಾರಿ ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಶೇ.100 ರಷ್ಟು ಮತದಾನ ಆಗಲು ಸಹಕರಿಸಬೇಕು ಎಂದು ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಮನವಿ ಮಾಡಿದರು.

ಭಾನುವಾರ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಪಂಚಾಯಿತಿವರೆಗೆ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಶಿವಮೊಗ್ಗ ಮತದಾನ ಜಾಗೃತಿ ವತಿಯಿಂದ ಏರ್ಪಡಿಸಿದ್ದ ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ನಡೆ ಮತಗಟ್ಟೆಗಳ ಕಡೆ ಕಾರ್ಯಕ್ರಮದ ಅಂಗವಾಗಿ ಇಂದು ಎಲ್ಲ ತಾಲೂಕುಗಳಲ್ಲಿ ಧ್ವಜಾರೋಹಣ ನಡೆದಿದ್ದು, ಜಿಲ್ಲೆಯ 36ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮಾದರಿ ಮತಗಟ್ಟೆಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಮಾದರಿ ಮತಗಟ್ಟೆಗಳ ಮೂಲಕ ಚುನಾವಣಾ ಪ್ರಕ್ರಿಯೆ ವೀಕ್ಷಣೆ ಮತ್ತು ಮಾಹಿತಿಯನ್ನು ಮತದಾರರಿಗೆ ಒದಗಿಸಲಾಗುವುದು ಎಂದರು.

ಮಹಾನಗರ ಪಾಲಿಕೆ ಅಧಿಕಾರಿ ಸುಪ್ರಿಯ ಮಾತನಾಡಿ, ಶಿವಮೊಗ್ಗ ತಾಲೂಕು ಮಟ್ಟದಲ್ಲಿ ಮತದಾನದ ಪ್ರಮಾಣ ಹೆಚ್ಚಿದೆ. ಆದರೆ ಶಿವಮೊಗ್ಗ ನಗರ ಮತ್ತು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣ ಕಡಿಮೆ ಇದೆ. ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ನಾವೆಲ್ಲ ಮತದಾನ ಮಾಡೋಣ ಎಂದು ತಿಳಿಸಿದರು.

ಸ್ವೀಪ್ ಐಕಾನ್ ಹಾಗೂ ಮನೋವೈದ್ಯ ಡಾ.ಶುಬ್ರತಾ ಮಾತನಾಡಿ, ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಮತದಾನ ಮಾಡುವುದು ಬಹಳ ಮುಖ್ಯವಾಗಿ ರುತ್ತದೆ. ಮೇ. 7ಕ್ಕೆ ಯಾವುದೇ ಕಾರ್ಯಕ್ರಮಗಳನ್ನು ಇಟ್ಟುಕೊಳ್ಳದೆ ಎಲ್ಲರೂ ಮತದಾನ ಮಾಡಿರೆಂದು ಅರಿವು ಮೂಡಿಸಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸ್ವೀಪ್ ಐಕಾನ್ ನಾಗರಾಜ್ ತೊಂಬ್ರಿ ಅವರು ಮತದಾನದ ಕುರಿತಾದ ಗೀತೆ ಗಾಯನ ಮಾಡಿ ಜಾಗೃತಿ ಮೂಡಿಸಿದರು. ಪ್ರಥಮ ಬಾರಿಗೆ ಮತದಾಮ ಮಾಡುತ್ತಿರುವ ಯುವ ಮತದಾರರಿಗೆ ಜಿಲ್ಲಾ ಪಂಚಾಯತ್ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಮತದಾನ ಪ್ರಮಾಣ ಪತ್ರವನ್ನು ನೀಡಿದರು.

ಇದೇ ವೇಳೆ ಜಿಲ್ಲಾ ಪಂಚಾಯತ್‍ನಲ್ಲಿ ಮಾದರಿ ಮತಗಟ್ಟೆ ಸ್ಥಾಪಿಸಿ, ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟು, ಮತದಾನ ಪ್ರಕ್ರಿಯೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ನಮ್ಮ ನಡೆ ಮತಗಟ್ಟೆ ಕಡೆ ಜಾಥಾವು ಜಿಲ್ಲಾಡಳಿತ ಕಚೇರಿಯಿಂದ ಆರಂಭಗೊಂಡು ಜಿಲ್ಲಾ ಪಂಚಾಯಿತಿ ಆವರಣವನ್ನು ತಲುಪಿತು. ಜಾಥಾದಲ್ಲಿ ಹೊಳೆಹೊನ್ನೂರು ಚಂದ್ರನಾಯ್ಕ್ ಡೊಳ್ಳು ಕುಣಿತ ತಂಡದವರು ಪಾಲ್ಗೊಂಡು ಎಲ್ಲರ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ರಾಜ್ಯ ಮಟ್ಟದ ಸ್ವೀಪ್ ತರಬೇತಿ ದಾರ ನವೀದ್ ಅಹ್ಮದ್ ಪರ್ವೇಜ್, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.ಮತ ಜಾಗೃತಿಗೆ ಸ್ವೀಪ್‌ ಕಪ್‌ ಕ್ರಿಕೆಟ್‌ ಪಂದ್ಯಾವಳಿ

ಶಿವಮೊಗ್ಗ: ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ವತಿಯಿಂದ ಹಲವಾರು ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದ್ದು, ‘ಸ್ವೀಪ್ ಕಪ್’ ವಿಭಿನ್ನವಾದ ಪ್ರಯತ್ನವಾಗಿದೆ. ಎಲ್ಲ ಕ್ರೀಡಾಪಟುಗಳು ಸ್ಮರ್ಧಾತ್ಮಕವಾಗಿ ಪಾಲ್ಗೊಳ್ಳುವ ಮೂಲಕ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು.

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶನಿವಾರ ನಗರದ ಎನ್‍ಇಎಸ್ ಮೈದಾನದಲ್ಲಿ ವಿವಿಧ ಇಲಾಖೆಗಳ ತಂಡಗಳಿಗೆ ಆಯೋಜಿಸಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ-‘ಸ್ವೀಪ್ ಕಪ್ ನ್ನು’ ಉದ್ಘಾಟಿಸಿ ಅವರು ಮಾತನಾಡಿ, ಮತದಾನ ಜಾಗೃತಿಗಾಗಿ ಜಿಲ್ಲೆಯಲ್ಲಿ ವಾಕಥಾನ್, ಜಾಥಾಗಳು, ರ್ಯಾಲಿಗಳು, ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಕ್ರೀಡಾ ಮನೋಭಾವದ ಮೂಲಕ ಜಾಗೃತಿ ಮೂಡಿಸುವ ಸ್ವೀಪ್ ಕಪ್ ಒಂದು ವಿಭಿನ್ನ ಚಟುವಟಿಕೆಯಾಗಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇ.100 ಮತದಾನ ಆಗಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಮತದಾನ ಜಾಗೃತಿ ಕುರಿತು ಜಿಲ್ಲೆಯಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಚಟುವಟಿಕೆ ಗಳನ್ನು ಕೈಗೊಳ್ಳುತ್ತಿದ್ದು, ಅದರಲ್ಲಿ ಸ್ವೀಪ್ ಕಪ್ ಕೂಡ ಒಂದಾಗಿದೆ. ಸ್ಪರ್ಧಾಳುಗಳೆಲ್ಲ ಸ್ಪರ್ಧಾ ಮನೋಭಾವದಿಂದ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಮತದಾನ ಕುರಿತು ಜಾಗೃತಿ ಮೂಡಿಸಬೇಕು. ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಜಿಲ್ಲೆಯು ಮಾದರಿಯಾಗಬೇಕೆಂದು ಆಶಿಸಿದರು.ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ ಮಾತನಾಡಿ, ಮತದಾನ ಜಾಗೃತಿ ಕುರಿತು ಸ್ವೀಪ್ ವತಿಯಿಂದ ವಿಶಿಷ್ಟ, ವಿಭಿನ್ನ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದ್ದು, ಮೇ 7 ರಂದು ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಸದೃಢ ಪ್ರಜಾಪ್ರಭುತ್ವಕ್ಕಾಗಿ ನಾವೆಲ್ಲರೂ ಮತದಾನ ಮಾಡಬೇಕು ಎಂದರು.

ಪಂದ್ಯಾವಳಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ನಡುವೆ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಾನಗರಪಾಲಿಕೆ ಮತ್ತು ಅರಣ್ಯ ಇಲಾಖೆ, ಮಂಗಳೂರು ವಿದ್ಯುಚ್ಚಕ್ತಿ ನಿಗಮ ಮತ್ತು ಪೊಲೀಸ್ ಇಲಾಖೆ ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆ ಹಾಗೂ ಕೆಎಸ್‍ಆರ್‌ಪಿ ತಂಡಗಳು ಭಾಗವಹಿಸಿದ್ದವು.ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಪಟು ಅದಿತಿ, ಕೆಎಸ್‍ಆರ್‌ಪಿ ಕಮಾಂಡೆಂಟ್ ಯುವಕುಮಾರ್, ಜಿ.ಪಂ ಯೋಜನಾ ನಿರ್ದೇಶಕ ರಂಗಸ್ವಾಮಿ, ಜಿ.ಪಂ ಸಿಪಿಓ ಗಾಯತ್ರಿ, ವಾರ್ತಾಧಿಕಾರಿ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹ್ಮದ್ ಪರ್ವೇಜ್ ಇದ್ದರು.