ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಹಿಟ್ನಾಳ ಗ್ರಾಪಂ ಆಶ್ರಯದಲ್ಲಿ ಇತ್ತೀಚೆಗೆ ಹಿಟ್ನಾಳ ಗ್ರಾಮದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ತಡೆಗಾಗಿ ಜನಸಂಪರ್ಕ ಸಂವಾದ ಕಾರ್ಯಕ್ರಮ ಜರುಗಿತು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತೆ ಪ್ರತಿಭಾ ಕಾಶಿಮಠ ಮಾತನಾಡಿ, ಇತ್ತೀಚೆಗೆ ಮಕ್ಕಳು ಮಾಧ್ಯಮಗಳ ಪ್ರಭಾವದಿಂದ ಪ್ರೀತಿ, ಪ್ರೇಮದ ಹೆಸರಿನಲ್ಲಿ ತಿಳಿದೊ, ತಿಳಿಯದೆಯೋ ಈ ಕಾಯ್ದೆಯಲ್ಲಿ ಸಿಲುಕುತ್ತಿದ್ದಾರೆ. ಅಲ್ಲದೇ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆ ಮಾಡಿದಂಥವರು, ಭಾಗಿಯಾದವರು, ಪ್ರೋತ್ಸಾಹಿಸಿದವರು ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಈ ಕಾಯ್ದೆಯಲ್ಲಿ ಸಿಲುಕಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ತಾಯಿ ಮರಣ, ಶಿಶು ಮರಣ, ಅಪೌಷ್ಟಿಕ ಮಕ್ಕಳ ಜನನ ನಿರ್ಮೂಲನೆಗಾಗಿ ಸರ್ಕಾರ ಬಾಲ್ಯವಿವಾಹ ನಿಷೇಧ ಕಾಯ್ದೆ ಜಾರಿಗೊಳಿಸಿದೆ. ಅದರನ್ವಯ 18 ವರ್ಷದೊಳಗಿನ ಹೆಣ್ಣು ಮಗುವಿಗೆ ಮತ್ತು 21 ವರ್ಷದೊಳಗಿನ ಗಂಡು ಮಗುವಿಗೆ ವಿವಾಹ ಮಾಡುವುದನ್ನು ನಿಷೇಧಿಸಿದೆ ಎಂದರು.ಬಾಲ್ಯವಿವಾಹವನ್ನು ಮಾಡುವವರು, ಭಾಗವಹಿಸುವವರು, ಆಯೋಜಿಸುವವರು ಎಲ್ಲರಿಗೂ ಕನಿಷ್ಠ 1 ವರ್ಷದಿಂದ 2 ವರ್ಷಗಳ ವರೆಗೆ ಜೈಲುಶಿಕ್ಷೆ ವಿಧಿಸಬಹುದಾಗಿದೆ. ಆದ್ದರಿಂದ ಬಾಲ್ಯವಿವಾಹ ಮಾಡಬೇಡಿ, ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಲೀಗಲ್ ಕಂ ಪ್ರೊಬೇಷನ್ ಆಫೀಸರ್ ಶಿವಲೀಲಾ ವನ್ನೂರು ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟಲು ಸರ್ಕಾರ ವಿವಿಧ ಕಾನೂನುಗಳನ್ನು ಜಾರಿಯಲ್ಲಿ ತಂದಿದೆ. ಅವುಗಳಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ತಿದ್ದುಪಡಿ-2019 ಪ್ರಮುಖವಾದದ್ದು. ಈ ಕಾಯ್ದೆಯನ್ವಯ 18 ವರ್ಷದೊಳಗಿನ ಮಕ್ಕಳ ಮೇಲಿನ ಭೇದಕ ಲೈಂಗಿಕ ಹಲ್ಲೆಗೆ ಕನಿಷ್ಠ 20 ವರ್ಷಗಳಿಂದ ಅಜೀವ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ ಎಂದರು.ಹಿಟ್ನಾಳ ಪ್ರಾಥಮಿಕ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಮಂಜುಳಾ ಶರ್ಮ ಮಾತನಾಡಿ, ಮಕ್ಕಳ ಮೇಲಿನ ಲೈಗಿಂಕ ದೌರ್ಜನ್ಯ ತಡೆ ಕಾಯ್ದೆ-2012ನ್ನು ಸರ್ಕಾರವು ಜಾರಿಗೆಗೊಳಿಸಿದ್ದು, ಈ ಕಾಯ್ದೆಯಡಿ ಪ್ರಕರಣ ದಾಖಲಾದಲ್ಲಿ ಅದು ವಿಚಾರಣಾ ಅರ್ಹ ಮತ್ತು ಜಾಮೀನುರಹಿತ ಪ್ರಕರಣ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಎಲ್ಲರೂ ಮಕ್ಕಳ ಹಕ್ಕುಗಳನ್ನು ಗೌರವಿಸಿ ಎಂದರು.
ರಕ್ಷಣಾಧಿಕಾರಿ ರವಿ ಬಡಿಗೇರ ಮಾತನಾಡಿ, ಮಕ್ಕಳ ಮಾರಾಟ ಮಾಡುವುದು ಕಾನೂನುಬಾಹಿರ ಅಪರಾಧವಾಗಿದೆ. ಯಾರಿಗಾದರೂ ಮಕ್ಕಳು ಬೇಡವಾದಲ್ಲಿ ಸರ್ಕಾರಕ್ಕೆ ನೀಡಬಹುದು. ಅಂತಹ ಮಕ್ಕಳ ಆರೈಕೆ ಮತ್ತು ಪೋಷಣೆ ಮಾಡಲಾಗುತ್ತದೆ. ಮಕ್ಕಳನ್ನು ಬಿಸಾಕಿ ಹೋದರೆ ಕಾನೂನು ಕ್ರಮಕೈಗೊಳಲಾಗುವುದು ಎಂದು ಹೇಳಿದರು.
ಹಿಟ್ನಾಳ ಪಿಡಿಒ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕ ಇಲಾಖೆ ಸಿಬ್ಬಂದಿ ಸುರೇಶ ಯೋಗಿ, ಹಿಟ್ನಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಬಸವರಾಜ, ಅಂಗನವಾಡಿ ಮೇಲ್ವಿಚಾರಕಿ ಸುಮಂಗಲಾ ಸಜ್ಜನ್ ಉಪಸ್ಥಿತರಿದ್ದರು. ರಮೇಶ ಹರಿಜನ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.