ಕುಷ್ಟಗಿ ಪಟ್ಟಣದ ತಹಸೀಲ್ದಾರ್‌ ಕಾರ್ಯಾಲಯದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಜಯಂತಿ ನಡೆಯಿತು. ಶಾಸಕ ದೊಡ್ಡನಗೌಡ ಪಾಟೀಲ, ತಹಸೀಲ್ದಾರ್‌ ಅಶೋಕ ಶಿಗ್ಗಾಂವಿ ಪಾಲ್ಗೊಂಡಿದ್ದರು.

ಕುಷ್ಟಗಿ: ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದಾನ, ದಾಸೋಹ ಹಾಗೂ ನಿಸ್ವಾರ್ಥ ಭಕ್ತಿಗೆ ಹೆಸರಾಗಿದ್ದಾರೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ಪಟ್ಟಣದ ತಹಸೀಲ್ದಾರ್‌ ಕಾರ್ಯಾಲಯದಲ್ಲಿ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಜಯಂತಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹೇಮರೆಡ್ಡಿ ಮಲ್ಲಮ್ಮ ಮೋಕ್ಷದ ಮಾರ್ಗ ತೋರಿದ ಮಹಾಸಾಧ್ವಿ. ಸಮಾಜ ಸುಧಾರಣೆಯಲ್ಲಿ ಕ್ರಾಂತಿ ಮಾಡಿದ್ದಾರೆ. ಅವರ ವಿಚಾರ ಮತ್ತು ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಕೆಲಸ ಮಾಡಬೇಕು. ತಾವು ಸಾರಿದ ಮೌಲ್ಯ ಮತ್ತು ತತ್ವಗಳಿಗೆ ಬದ್ಧರಾಗಿ ನಡೆದುಕೊಂಡ ಹೇಮರೆಡ್ಡಿ ಮಲ್ಲಮ್ಮ ಸಮಾಜದ ಎಲ್ಲ ಮಹಿಳೆಯರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದರು.

ದಿಶಾ ಸಮಿತಿಯ ಸದಸ್ಯ ದೊಡ್ಡಬಸವನಗೌಡ ಪಾಟೀಲ ಬಯ್ಯಾಪುರ ಮಾತನಾಡಿ, ಕಷ್ಟದಲ್ಲೂ ಎಲ್ಲರ ಒಳಿತನ್ನೇ ಬಯಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಆದರ್ಶ ಜೀವನ ಎಲ್ಲರಿಗೂ ಮಾದರಿಯಾಗಿದೆ. ಹೇಮರೆಡ್ಡಿ ಮಲ್ಲಮ್ಮ ಅವರ ಆದರ್ಶ ಜೀವನ ನಮಗೆಲ್ಲ ಪ್ರೇರಣೆಯಾಗಿದೆ. ಅವರು ಭಕ್ತಿ, ಸಹನೆ, ತ್ಯಾಗ ಮತ್ತು ಮಾನವೀಯ ಮೌಲ್ಯಗಳ ಪ್ರತಿರೂಪವಾಗಿ ಕನ್ನಡ ಸಂಸ್ಕೃತಿಯಲ್ಲಿ ಗೌರವಿಸಲ್ಪಟ್ಟಿದ್ದಾರೆ. ತಮ್ಮ ಜೀವನದಲ್ಲಿ ಎದುರಿಸಿದ ಸಂಕಷ್ಟಗಳ ನಡುವೆಯೂ ಧೈರ್ಯ ಮತ್ತು ಧರ್ಮದ ಮಾರ್ಗವನ್ನು ಅನುಸರಿಸಿದ ಕಾರಣ ಅವರು ಇಂದಿಗೂ ಜನರಿಗೆ ಮಾದರಿಯಾಗಿದ್ದಾರೆ ಎಂದರು.

ಹೇಮರೆಡ್ಡಿ ಮಲ್ಲಮ್ಮ ಅವರು ಸಮಸ್ತ ಸ್ತ್ರೀಕುಲಕ್ಕೆ ಆದರ್ಶ ಮಹಿಳೆಯಾಗಿದ್ದಾರೆ. ಅವರ ಜೀವನದಲ್ಲಿ ಕಾಣುವ ಪತಿಯ ಭಕ್ತಿ, ಸಹನೆ, ತ್ಯಾಗ, ಧೈರ್ಯ ಮತ್ತು ಆತ್ಮನಿಷ್ಠೆ ಮಹಿಳೆಯರಿಗಷ್ಟೇ ಅಲ್ಲ, ಎಲ್ಲರಿಗೂ ಪ್ರೇರಣೆಯಾಗಿದೆ. ಸಂಕಷ್ಟಗಳ ನಡುವೆಯೂ ಧರ್ಮ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡು ಬದುಕಿದ ಅವರ ಜೀವನ ಇಂದಿಗೂ ಮಾದರಿಯಾಗಿದೆ ಎಂದರು.

ತಹಸೀಲ್ದಾರ್‌ ಅಶೋಕ ಶಿಗ್ಗಾಂವಿ, ರೆಡ್ಡಿ ಸಮಾಜದ ಮುಖಂಡರು, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.