ನಾಪೋಕ್ಲು ಸಮೀಪದ ಬಲ್ಲಮಾವಟಿಯಲ್ಲಿ ಭಾನುವಾರ ನಡೆಯಲಿರುವ ಹಿಂದೂ ಸಂಗಮ ಹಿನ್ನೆಲೆಯಲ್ಲಿ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡುವ ಸಂದರ್ಭ ವ್ಯಕ್ತಿಯೊಬ್ಬರ ಮೇಲೆ ಅನ್ಯಕೋಮಿನ ಯುವಕರು ಮರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಾಪೋಕ್ಲು ಪಟ್ಟಣದಲ್ಲಿ ನಡೆದಿದೆ.
ನಾಪೋಕ್ಲು: ನಾಪೋಕ್ಲು ಸಮೀಪದ ಬಲ್ಲಮಾವಟಿಯಲ್ಲಿ ಭಾನುವಾರ ನಡೆಯಲಿರುವ ಹಿಂದೂ ಸಂಗಮ ಹಿನ್ನೆಲೆಯಲ್ಲಿ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡುವ ಸಂದರ್ಭ ವ್ಯಕ್ತಿಯೊಬ್ಬರ ಮೇಲೆ ಅನ್ಯಕೋಮಿನ ಯುವಕರು ಮರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಾಪೋಕ್ಲು ಪಟ್ಟಣದಲ್ಲಿ ನಡೆದಿದೆ.
ಘಟನೆಯಲ್ಲಿ ಗೌತಮ್ ಎಂಬವರ ತಲೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹಲ್ಲೆ ಪ್ರಕಣರವನ್ನು ಖಂಡಿಸಿ ತೀವ್ರ ಆಕ್ರೋಶಗೊಂಡ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಬಿಜೆಪಿ ಪ್ರಮಖರು ಸುಮಾರು ಮೂರು ತಾಸು ನಾಪೋಕ್ಲು ರಸ್ತೆ ತಡೆ ನಡೆಸಿ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ಬಲ್ಲಮಾವಟಿಯಲ್ಲಿ ಭಾನುವಾರ ಹಿಂದೂ ಸಂಗಮ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಮಧ್ಯಾಹ್ನದೊಳಗಾಗಿ ಎಲ್ಲ ಹಲ್ಲೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಇದಿದ್ದರೆ ನಾಪೋಕ್ಲು ಠಾಣೆಗೆ ಮುತ್ತಿಗೆ ಹಾಕಿ ತೀವ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಪ್ರತಿಭಟನೆ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಇಂದು ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಎಲ್ಲ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ. ಕಾನೂನಿನಂತೆ ಕೆಲಸ ಮಾಡುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಹಲ್ಲೆ ಘಟನೆ ಸಂದರ್ಭ ಸ್ಥಳದಲ್ಲಿದ್ದ ಹಿಂದೂ ಸಂಗಮ ಆಯೋಜನೆಯ ಪ್ರಮುಖರಾದ ಕರವಂಡ ಅಪ್ಪಣ್ಣ ಮಾತನಾಡಿ, ಗೌತಮ್ ಮೇಲೆ ಐದು ಮಂದಿ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ ಎಂದರು.
ಪಾರಣೆ ಗ್ರಾಪಂ ಮಾಜಿ ಅಧ್ಯಕ್ಷ ಕುಶಾಲಪ್ಪ ಮಾತನಾಡಿ, ಕಳೆದ ಮೂರು ವರ್ಷಗಳಿಂದ ನಾಪೋಕ್ಲು ಶಾಂತವಾಗಿತ್ತು. ಆದರೆ ಇದೀಗ ಹಿಂದೂ ಯುವಕರ ಮೇಲೆ ಹಲ್ಲೆ ಮಾಡುವ ಮೂಲಕ ಅಶಾಂತಿಯ ವಾತಾವರಣ ಉಂಟಾಗಿದೆ ಎಂದರು. ಪ್ರತಿಭಟನೆ ಸಂದರ್ಭ ಪ್ರಮುಖರಾದ ಮನು ಮುತ್ತಪ್ಪ, ಕರವಂಡ ಲವ ನಾಣಯ್ಯ, ತಳೂರು ಕಿಶೋರ್, ರಮೇಶ್, ಪ್ರತೀಪ್, ಡಾಲಿ ಪೂವಪ್ಪ, ಕುಲ್ಲೇಟಿರ ಅಜೀತ್ ನಾಣಯ್ಯ, ಉಮಾ ಪ್ರಭು, ನೀಲಮ್ಮ, ಮುಕ್ಕಾಟಿರ ವಿನಯ್, ಚಂಗೆಟ್ಟಿರ ವಿನಯ್ ಮತ್ತಿತರರಿದ್ದರು. ಪ್ರತಿಭಟನೆ ಸಂದರ್ಭ ನಾಪೋಕ್ಲುವಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿತ್ತು. ಸೋಮವಾರಪೇಟೆ ಡಿವೈಎಸ್ಪಿ ಚಂದ್ರಶೇಖರ್, ವಿರಾಜಪೇಟೆ ಡಿವೈಎಸ್ಪಿ ಮಹೇಶ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.ನಾಲ್ವರ ವಿರುದ್ಧ ಪ್ರಕರಣ ದಾಖಲು:
ಕೊಡಗಿನ ನಾಪೋಕ್ಲುವಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಲ್ವರ ಪೈಕಿ ಸುಹೇಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದಂತೆ ರಾಶೀದ್, ಸಿದ್ದಿಕ್, ನಾಫಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ.