ಸಾರಾಂಶ
ಕುಷ್ಟಗಿ: ಕರಾವಳಿ ಭಾಗದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ತಿಳಿ ಮಾಡುವುದನ್ನು ಬಿಟ್ಟು ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಟಾರ್ಗೆಟ್ ಮಾಡುವ ಮೂಲಕ ಅವರ ಮೇಲೆ ಪ್ರಕರಣ ದಾಖಲಿಸುತ್ತಿರುವುದು ಖಂಡನೀಯ ಎಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿ ಹಾಗೂ ಗೃಹಸಚಿವರ ವಿರುದ್ಧ ಕಿಡಿಕಾರಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕರಾವಳಿ ಭಾಗದಲ್ಲಿ ಹಿಂದೂ ಹಾಗೂ ಮುಸ್ಲಿಂರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಆದರೆ, ರಾಜ್ಯ ಸರ್ಕಾರ ಪೊಲೀಸ್ ವ್ಯವಸ್ಥೆ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು ಹಿಂದೂ ಯುವಕರ ಟಾರ್ಗೆಟ್ ಮಾಡುತ್ತಿದ್ದಾರೆ. ಇದರಿಂದ ವಾತಾವರಣ ಮತ್ತಷ್ಟು ಹದಗೆಡುತ್ತದೆ. ಇದಕ್ಕೆ ನೇರ ರಾಜ್ಯ ಸರ್ಕಾರ ಹೊಣೆಯಾಗುತ್ತದೆ. ಮೊದಲು ಸುವ್ಯವಸ್ಥೆ ಕಾಪಾಡಿ ತಪ್ಪಿತಸ್ಥರನ್ನು ಬಂಧಿಸಬೇಕು. ಅದನ್ನು ಬಿಟ್ಟು ಯುವಕರಿಗೆ ತೊಂದರೆ ಕೊಡಬಾರದು ಎಂದರು.
ಖರ್ಗೆ ಯಾರು?:
ಸಚಿವ ಪ್ರಿಯಾಂಕ ಖರ್ಗೆ ಆಪರೇಷನ್ ಸಿಂದೂರ ಬಗ್ಗೆ ಕೇಳಲು ಯಾರು. ಮೊದಲು ಅವರಿಗೆ ಕೊಟ್ಟಿರುವ ಜವಾಬ್ದಾರಿ ನಿಭಾಯಿಸಿಕೊಂಡು ಹೋಗಲಿ ಎಂದು ತಿರುಗೇಟು ನೀಡಿದರು. ಆಪರೇಷನ್ ಸಿಂದೂರ ಯಶಸ್ವಿಯಾಗಿದ್ದರಿಂದ ಬಿಜೆಪಿಯಿಂದ ದೇಶಾದ್ಯಂತ ತಿರಂಗಾ ಯಾತ್ರೆ ಹಮ್ಮಿಕೊಂಡು ಯೋಧರಿಗೆ ಶಕ್ತಿ ತುಂಬಿದ್ದೇವೆ ಎಂದ ಅವರು, ಯಾವುದೇ ರಾಜಕಾರಣಿ, ಸಾರ್ವಜನಿಕರಿಗೆ ಗೌರವ ಕೊಡುವುದನ್ನು ಕಲಿತುಕೊಳ್ಳಬೇಕು ಎಂದರು.
ಕಳೆದ ವರ್ಷ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ಗೇಟ್ ಕಿತ್ತು ಹೋದ ವೇಳೆ ಎಲ್ಲ ದುರಸ್ತಿ ಮಾಡಿಸುವುದಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಭರವಸೆ ನೀಡಿದ್ದರು. ಇದೀಗ ಮುಂಗಾರು ಮಳೆ ಶುರುವಾಗಿದ್ದು ಅಧಿಕ ಪ್ರಮಾಣದ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಆದರೂ ಈ ವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಇದು ಸರ್ಕಾರದ ನಿರ್ಲಕ್ಷ್ಯ ಹಿಡಿದ ಕೈಗನ್ನಡಿಯಾಗಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಜನರ ಹಣದಲ್ಲಿ ಕಾಂಗ್ರೆಸ್ ಜಾತ್ರೆ : ಇದು ಜಾಹೀರಾತಿನ ಸರ್ಕಾರವಾಗಿದ್ದು ಭಂಡತನದಿಂದ ಕೂಡಿದೆ. ಜನರ ಹಣದಲ್ಲಿ ಕಾಂಗ್ರೆಸ್ ಜಾತ್ರೆ ಮಾಡುತ್ತಿದೆ. ಇದರಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೇಳಿದ ವಿಜಯೇಂದ್ರ, ಸಿಎಂ-ಡಿಸಿಎಂ ಬೆಂಗಳೂರು ಮಹಾನಗರ ಪಾಲಿಕೆ ಬಿಟ್ಟು ರಾಜ್ಯದ ಎಲ್ಲ ತಾಲೂಕಿನ ಗ್ರಾಮೀಣ ಪ್ರದೇಶಕ್ಕೆ ಭೇಟಿ ನೀಡಿ ಜನರ ವಾಸ್ತವ ಸ್ಥಿತಿ ಅರಿತುಕೊಂಡು ನೊಂದವರಿಗೆ ಸಹಾಯ ಮಾಡಬೇಕು ಎಂದರು.
ಅಭಿವೃದ್ಧಿ ಶೂನ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಶೂನ್ಯವಾಗಿದೆ. ಜನರಿಗೆ ಸೌಲಭ್ಯಗಳು ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ. ರೈತಪರ ಯೋಜನೆಗಳನ್ನು ಜಾರಿಗೊಳಿಸದೆ ರೈತ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಜನಾಕ್ರೋಶ ಯಾತ್ರೆ ಯಶಸ್ವಿ:
ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಆಡಳಿತ ವೈಖರಿ ವಿರುದ್ಧ ಜನರಿಗೆ ನಿಜಾಂಶ ತಿಳಿಸಲು ಬಿಜೆಪಿ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಜನಾಕ್ರೋಶ ಯಾತ್ರೆ ಯಶಸ್ವಿಯಾಗಿದೆ ಎಂದ ಅವರು, ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ಗ್ಯಾರಂಟಿ ಹೆಸರಿನಲ್ಲಿ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈನಿಂದ ಸರ್ಕಾರ ಕಿತ್ತುಕೊಳ್ಳುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಂಬಳ ಕೊಟ್ಟು ತಮ್ಮ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ ಎಂದ ಅವರು, ರಾಜ್ಯದ ಯಾವುದೇ ಕ್ಷೇತ್ರಕ್ಕೂ ಹೋದರೂ ಅಭಿವೃದ್ಧಿಯಿಂದ ಕುಂಠಿತಗೊಂಡಿವೆ ಎಂದರು.
ನಟ ಕಮಲ ಹಾಸನ್ ಕನ್ನಡದ ಬಗ್ಗೆ ಅವಹೇಳನ ಮಾಡಿರುವುದು ಖಂಡನೀಯ. ಅವರು ಕನ್ನಡಿಗರ ಕ್ಷಮೆ ಕೇಳಬೇಕು. ಕನ್ನಡ ಭಾಷೆ, ನೆಲ, ಜಲದ ಬಗ್ಗೆ ಅವಮಾನಿಸಿದರೆ ಖಂಡಿಸುತ್ತೇವೆ ಎಂದರು.
ಈ ವೇಳೆ ಶಾಸಕ ದೊಡ್ಡನಗೌಡ ಪಾಟೀಲ, ವಿಪ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸುಗೂರು, ನವೀನಕುಮಾರ ಗುಳಗಣ್ಣನವರು, ಬಸವರಾಜ ಕ್ಯಾವಟರ್, ಶರಣು ತಳ್ಳಿಕೇರಿ ಸೇರಿದಂತೆ ಅನೇಕರು ಇದ್ದರು.