ಸಾರಾಂಶ
ಕನ್ನಡಪ್ರಭ ವಾರ್ತೆ ಸಂಕೇಶ್ವರ
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಂಕೇಶ್ವರದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸ್ಥಾನಕ್ಕೆ ಶಾಸಕ ನಿಖಿಲ್ ಕತ್ತಿ ರಾಜೀನಾಮೆ ನೀಡಿದ್ದಾರೆ.ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಸಭಾಗೃಹದಲ್ಲಿ ಶುಕ್ರವಾರ ಸಂಜೆ ನಡೆದ ಕಾರ್ಖಾನೆ ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ನಿಖಿಲ ಕತ್ತಿ ಪ್ರಕಟಿಸಿದರು. ಬಳಿಕ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಸಾತಪ್ಪ ಕರ್ಕಿನಾಯಿಕ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ಕಳೆದ 2024, ಸೆಪ್ಟೆಂಬರ್ 23ರಂದು ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಕಾರ್ಖಾನೆಯನ್ನು ಖಾಸಗಿಯವರಿಗೆ ಲೀಜ್ ಮೇಲೆ ಕೊಡಲು ನಿರ್ಣಯಿಸಲಾಗಿತ್ತು. ಆದರೆ, ಇದಕ್ಕೆ ಆಡಳಿತ ಮಂಡಳಿಯ ಹೆಚ್ಚಿನ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಅಂದಿನಿಂದ ಈ ವಿಚಾರವಾಗಿ ಪರ ಮತ್ತು ವಿರೋಧ ಚರ್ಚೆಗಳು ನಡೆದಿದ್ದವು. ಈಗ ಕಾರ್ಖಾನೆ ಅಧ್ಯಕ್ಷ ನಿಖಿಲ್ ಕತ್ತಿ ರಾಜೀನಾಮೆ ನೀಡಿರುವುದು ಹಲವು ಚರ್ಚೆಗೆ ಗ್ರಾಸವಾಗಿದೆ.ಕೆಲಸದ ಒತ್ತಡದಿಂದ ರಾಜೀನಾಮೆ ಎಂದ ನಿಖಿಲ್: ಶಾಸಕ ಸ್ಥಾನದ ಕೆಲಸದ ಒತ್ತಡದ ಹಿನ್ನೆಲೆಯಲ್ಲಿ ಹಾಗೂ ಕ್ಷೇತ್ರದ ಜನರ ಕೆಲಸ ಮಾಡುವ ನಿಟ್ಟಿನಲ್ಲಿ ಕಾರ್ಖಾನೆಯ ಅಧ್ಯಕ್ಷ ಸ್ಥಾನ ನಿಭಾಯಿಸಲು ತೊಂದರೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿರುವುದಾಗಿ ಶಾಸಕ ನಿಖಿಲ ಕತ್ತಿ ಪತ್ರಿಕೆಗೆ ತಿಳಿಸಿದ್ದಾರೆ. ಹಿರಣ್ಯಕೇಶಿ ಕಾರ್ಖಾನೆಯನ್ನು ಮುನ್ನಡೆಸಲು ಖಾಸಗಿಯವರಿಗೆ ಗುತ್ತಿಗೆ ಆಧಾರದ (ಲೀಜ್) ಮೇಲೆ ನೀಡುವ ಬಗ್ಗೆ ಆಡಳಿತ ಮಂಡಳಿಯ ಕೆಲ ಸದಸ್ಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಹಕಾರ ತತ್ವದ ಅಡಿಯಲ್ಲಿ ಮುನ್ನಡೆಸಲು ತೀರ್ಮಾನಿಸಲಾಗಿದೆ. 15 ದಿನಗಳಲ್ಲಿ ಕಾರ್ಖಾನೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ನೂತನ ಅಧ್ಯಕ್ಷರು ಕಾರ್ಖಾನೆಯನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗಲಿದ್ದಾರೆ. ಇದಕ್ಕೆ ನಾನು ಸಹ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.