ಕನ್ನಡಪ್ರಭ ವಾರ್ತೆ, ಹನೂರು
ಹನೂರು ತಾಲೂಕಿನ ಕೌದಳ್ಳಿ ಗ್ರಾಮದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯ ಸಂತೆಖಾನೆ ಬಳಿ ಶನಿವಾರ ಮಧ್ಯಾಹ್ನ ನಡೆದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಯುವರಾಜ್ (50) ಮತ್ತು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಎ.ಕೋಡಹಳ್ಳಿ ಗ್ರಾಮದ ಶಶಾಂಕ್ (25) ಮೃತರು.
ಕಾರ್ಯ ನಿಮಿತ್ತ ವಡಕೆಹಳ್ಳಿ ಗ್ರಾಮದಿಂದ ಕೌದಳ್ಳಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರಿಗೆ, ಕೌದಳ್ಳಿಯಿಂದ ಮಲೆ ಮಹದೇಶ್ವರ ಬೆಟ್ಟದ ಕಡೆಗೆ ತೆರಳುತ್ತಿದ್ದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿ ರಭಸಕ್ಕೆ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ತಕ್ಷಣ ರಾಮಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಚಿಕ್ಕರಾಜ ಶೆಟ್ಟಿ, ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನಿಸಲಾಗಿದೆ. ವಾಹನ ಪತ್ತೆ...ಡಿಕ್ಕಿ ಹೊಡೆದು ಪರಾರಿಯಾಗಿದ್ದ ವಾಹನದ ಪತ್ತೆಗಾಗಿ ತಂಡ ರಚನೆ ಮಾಡಿದ ಪೊಲೀಸರು ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಮಾರ್ಗದರ್ಶನದಲ್ಲಿ ರಾಮಪುರ ಪೊಲೀಸ್ ಇನ್ಸ್ಪೆಕ್ಟರ್ ಚಿಕ್ಕರಾಜ ಶೆಟ್ಟಿ, ಮುಖ್ಯ ಪೇದೆಗಳಾದ ಇಲಿಯಾಸ್ ಪಾಶಾ, ರಘು, ಮಹೇಂದ್ರ ಅವರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದರು. ಸಿಸಿ ಟಿವಿ ಪರಿಶೀಲಿಸಿದಾಗ ತಮಿಳುನಾಡು ನೋಂದಣಿ ಸಂಖ್ಯೆ TN30 CW 4869 ಹೊಂದಿರುವ ಮಹೇಂದ್ರ ಪಿಕಪ್ ವಾಹನ ಡಿಕ್ಕಿ ಹೊಡೆದು ಹೋಗಿರುವುದು ಪತ್ತೆಯಾಯಿತು. ಘಟನೆ ನಡೆದ ಒಂದು ಗಂಟೆಯೊಳಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಹನ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ರಾಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.