ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ದಲಿತ ಯುವತಿಯ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ. ಮೃತಳನ್ನು ಹೊಕ್ರಾಣಿ ನಿವಾಸಿ ತಿಮ್ಮಾರೆಡ್ಡಿ ಅವರ ಪುತ್ರಿ ಅಶ್ವಿನಿ (21) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಪದವಿ ಮುಗಿಸಿದ್ದ ಅಶ್ವಿನಿ ಬುಧವಾರ ಸಂಜೆ ಬಹಿರ್ದೆಸೆಗೆಂದು ತೆರಳಿದ್ದಳು. ರಾತ್ರಿಯಾದರೂ ಮನೆಗೆ ಬಾರದ ಕಾರಣ ಕುಟುಂಬದವರು ಹುಡುಕಾಡಿದಾಗ ಬಾವಿಯಲ್ಲಿ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಸಹಿತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿ ಬಾವಿಗೆ ಎಸೆದಿರುವ ಅನುಮಾನವಿದ್ದು, ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕವಷ್ಟೇ ಸತ್ಯಾಂಶ ಹೊರಬರಲಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.