ರಾಜ್ಯಪಾಲರ ವಿರುದ್ಧ ತಾಂಡವಪುರ, ತಗಡೂರಿನಲ್ಲಿ ಪ್ರತಿಭಟನೆ

| Published : Aug 19 2024, 12:45 AM IST

ಸಾರಾಂಶ

ಸಿದ್ದರಾಮಯ್ಯ ಅವರು ಬಡವರ ಪರವಾಗಿ, ಹಿಂದುಳಿದವರ ಪರವಾಗಿ, ಆಡಳಿತ ನಡೆಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ನಂಜನಗೂಡುಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ವರುಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ತಾಲೂಕಿನ ತಾಂಡವಪುರ ಮತ್ತು ತಗಡೂರು ಗ್ರಾಮಗಳಲ್ಲಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಿದರು.

ತಾಲೂಕಿನ ತಗಡೂರು ಗ್ರಾಮದಲ್ಲಿ ರಸ್ತೆ ತಡೆ ನಡೆಸಿ ಟೈರ್ ಗೆ ಬೆಂಕಿ ಹಚ್ಚಿದ ಕಾರ್ಯಕರ್ತರು, ಬಿಜೆಪಿ ನಾಯಕರು, ಕೇಂದ್ರ ಸರ್ಕಾರ, ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಗಾರ್ಡನ್ ಮಹೇಶ್ ಮಾತನಾಡಿ, ಸಿದ್ದರಾಮಯ್ಯ ಅವರು ಬಡವರ ಪರವಾಗಿ, ಹಿಂದುಳಿದವರ ಪರವಾಗಿ, ಆಡಳಿತ ನಡೆಸುತ್ತಿದ್ದಾರೆ. ರಾಜ್ಯಪಾಲರು ಬಿಜೆಪಿ ಕೈಗೊಂಬೆಯಾಗಿ ವರ್ತಿಸುತ್ತಾ, ಒಬ್ಬ ಅಹಿಂದ ನಾಯಕರನ್ನು ಹತ್ತಿಕ್ಕುವ ಷಡ್ಯಂತರ ರೂಪಿಸಿದ್ದಾರೆ. ಈ ಕೂಡಲೇ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿಯನ್ನು ರಾಜ್ಯಪಾಲರು ಹಿಂದೆ ಪಡೆಯಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ಮೂಲಕ ಇಡೀ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ತಾಲೂಕಿನ ತಾಂಡವಪುರ ಗ್ರಾಮದಲ್ಲಿ ರಸ್ತೆ ತಡೆ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ಕ್ರಮವನ್ನು ಖಂಡಿಸಿದರು. ಅರ್ಧ ಗಂಟೆಗೂ ಹೆಚ್ಚು ಕಾಲ ಮೈಸೂರು- ನಂಜನಗೂಡು ಹೆದ್ದಾರಿಯನ್ನು ತಡೆದ ಪರಿಣಾಮ ಸಂಚಾರ ದಟ್ಟಣೆ ಅಧಿಕವಾಗಿ ಸಾರ್ವಜನಿಕರು ಪರದಾಡುವಂತಾಯಿತು.

ಪ್ರತಿಭಟನೆಯಲ್ಲಿ ತಗಡೂರು ಗ್ರಾಪಂ ವ್ಯಾಪ್ತಿಯ ಎಲ್ಲಾ ಕೋಮಿನ ಯಜಮಾನರು, ಮುಖಂಡರು ಹಾಗೂ ಗ್ರಾಮಸ್ಥರು, ತಾಂಡವಪುರದ ಮುಖಂಡರಾದ ದಕ್ಷಿಣ ಮೂರ್ತಿ, ರಾಕೇಶ್ ಇದ್ದರು.